ಇಸ್ಲಾಮಾಬಾದ್, ಆ. 1 (DaijiworldNews/AK): ಸಿಂಧೂ ನದಿ ನೀರು ಹಂಚಿಕೆ ಒಪ್ಪಂದಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಭಾರತಕ್ಕೆ ಮತ್ತೊಮ್ಮೆ ಬೆದರಿಕೆ ಹಾಕಿದ್ದಾರೆ.

ಪಾಕಿಸ್ತಾನಕ್ಕೆ ಸೇರಬೇಕಾದ ನೀರಿನ ಪ್ರತಿಯೊಂದು ಹನಿಯೂ ನಮಗೆ ‘ರೆಡ್ ಲೈನ್’ಇದ್ದಂತೆ. ನಮ್ಮ ನೀರಿನ ಹಕ್ಕನ್ನು ಕಸಿಯಲು ಯತ್ನಿಸಿದರೆ ನೇರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.
ಗುರುವಾರ ಇಸ್ಲಾಮಾಬಾದ್ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಷರೀಫ್, ಪಾಕಿಸ್ತಾನವು ಶಾಂತಿಯನ್ನು ಬಯಸುತ್ತದೆ. ಆದರೆ ದೇಶದ ಸಾರ್ವಭೌಮತೆಗೆ ಧಕ್ಕೆ ತರುವ ಯಾವುದೇ ಪ್ರಯತ್ನ ನಡೆದರೂ ಪ್ರತ್ಯುತ್ತರ ನೀಡಲಾಗುವುದು ಎಂದು ಹೇಳಿದ್ದಾರೆ.
2025ರ ಮೇ ತಿಂಗಳಿನಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ಏರ್ಪಟ್ಟಿದ್ದ ಸೀಜ್ಫೈರ್ (ಯುದ್ಧವಿರಾಮ) ಒಪ್ಪಂದದಲ್ಲಿ ಪ್ರಮುಖ ಪಾತ್ರ ವಹಿಸಿದ್ದಕ್ಕಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಶೆಹಬಾಜ್ ಷರೀಫ್ ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ.
ರಾಜತಾಂತ್ರಿಕ ಮಾತುಕತೆಗಳ ನಂತರ ಭಾರತ ಹಾಗೂ ಪಾಕಿಸ್ತಾನ ತಕ್ಷಣದ ಯುದ್ಧವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ಮೇ 2025ರಲ್ಲಿ ಟ್ರಂಪ್ ಘೋಷಿಸಿದ್ದರು. ಅಮೆರಿಕದ ನಾಯಕತ್ವ ಮತ್ತು ಸಕ್ರಿಯ ಪಾತ್ರಕ್ಕೆ ಷರೀಫ್ ಧನ್ಯವಾದ ಅರ್ಪಿಸಿದ್ದರು. ಆದರೆ ಭಾರತವು ಮೂರನೇ ವ್ಯಕ್ತಿ ಅಥವಾ ದೇಶದ ಮಧ್ಯಸ್ಥಿಕೆಯನ್ನು ಸಂಪೂರ್ಣವಾಗಿ ತಳ್ಳಿಹಾಕಿದೆ. ಎರಡೂ ದೇಶಗಳ ಮಿಲಿಟರಿ ಸೇನೆಗಳ ನಡುವಿನ ನೇರ ಮಾತುಕತೆಯ ಮೂಲಕವೇ ಯುದ್ಧವಿರಾಮ ತೀರ್ಮಾನಕ್ಕೆ ಬರಲಾಗಿದೆ ಎಂದು ಭಾರತ ಸ್ಪಷ್ಟಪಡಿಸಿದೆ.