ಮಂಗಳೂರು, ಮೇ. 18 (DaijiworldNews/AA): ಮಂಗಳೂರು ಚೆನ್ನೈ ಮೇಲ್ ಎಕ್ಸ್ಪ್ರೆಸ್ ರೈಲಿನ ಜನರಲ್ ಕೋಚ್ ನಲ್ಲಿ ಕುಳಿತಿದ್ದ ವ್ಯಕ್ತಿಯೋರ್ವರಿಗೆ ಹೃದಾಯಾಘಾತವಾಗಿ ಸಾವನ್ನಪ್ಪಿದ ಘಟನೆ ನಡೆದ ಒಂದು ದಿನದ ನಂತರ ಮೃತ ವ್ಯಕ್ತಿಯನ್ನು ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಸಿಬ್ಬಂದಿ ಎಂದು ಗುರುತಿಸಲಾಗಿದೆ.

ಅಧಿಕೃತ ಮೂಲಗಳ ಪ್ರಕಾರ, ಮೃತ ಪ್ರಯಾಣಿಕರನ್ನು ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯ ಲಿಂಗಸಮುದ್ರಂ ಮಂಡಲದ ಎ. ರಾಮಯ್ಯ ಎಂದು ಗುರುತಿಸಲಾಗಿದೆ. ಅವರು ಸಿಐಎಸ್ಎಫ್ನ ಸಹಾಯಕ ಸಬ್-ಇನ್ಸ್ಪೆಕ್ಟರ್ (ಎಎಸ್ಐ) ಆಗಿ ಕರ್ತವ್ಯ ಸಲ್ಲಿಸುತ್ತಿದ್ದರು.
ಮೇ 17 ರಂದು ಮಧ್ಯಾಹ್ನ 1:35 ರ ಸುಮಾರಿಗೆ ಜನರಲ್ ಕೋಚ್ ನಲ್ಲಿ ಕುಳಿತಿದ್ದ ವ್ಯಕ್ತಿಗೆ ಹೃದಯಾಘಾತವಾಗಿದೆ. ತಕ್ಷಣ ಆರ್ಪಿಎಫ್ ಇನ್ಸ್ಪೆಕ್ಟರ್ ಮನೋಜ್ ಕುಮಾರ್ ಯಾದವ್ ಮತ್ತು ಸಿಬ್ಬಂದಿಗಳು ವ್ಯಕ್ತಿಗೆ ಸಿಪಿ ಆರ್ ಕೊಡಿಸಿ ಸರ್ಕಾರಿ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅವರು ಚಿಕಿತ್ಸೆ ಫಲಕಾರಿಯಾಗದೆ ಸಂಜೆ 4.00 ಗಂಟೆಗೆ ಆಸ್ಪತ್ರೆಯಲ್ಲಿ ನಿಧನರಾಗಿದ್ದರು.
ಈ ಘಟನೆಗೆ ಸಂಬಂಧಿಸಿದಂತೆ, ಮಂಗಳೂರಿನ ಸರ್ಕಾರಿ ರೈಲ್ವೆ ಪೊಲೀಸರು (ಜಿಆರ್ಪಿ) ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್ಎಸ್ಎಸ್)ಯ ಸೆಕ್ಷನ್ 194 ರ ಪ್ರಕಾರ ಯುಡಿಆರ್ ಸಂಖ್ಯೆ 09/25 ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದಾರೆ. ಪ್ರಸ್ತುತ ಪ್ರಕರಣವು ತನಿಖೆಯಲ್ಲಿದೆ.