ಕಾರ್ಕಳ, ಜು. 05 (DaijiworldNews/AA): "ನವೋದಯದ ಸಾಲ ಮರುಪಾವತಿಯಲ್ಲಿ ಶೇ.98.5 ದಾಖಲೆ ಸಾಧಿಸಿದ್ದು, ಮುಂದಿನ ದಿನಗಳಲ್ಲಿ ಶೇ.100ರಷ್ಟು ಸಾಲ ಮರುಪಾವತಿಗೆ ಸಂಘದ ಪ್ರೇರಕರು ಪ್ರಯತ್ನಿಸಬೇಕಾಗಿದೆ" ಎಂದು ನವೋದಯ ಚಾರಿಟೇಬಲ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಹಾಗೂ ಎಸ್ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಹೇಳಿದ್ದಾರೆ.


ಕಾರ್ಕಳದ ಬಾಹುಬಲಿ ಪ್ರವಚನ ಮಂದಿರದಲ್ಲಿ ನಡೆದ ನವೋದಯ ಸ್ವಸಹಾಯ ಸಂಘದ ಪ್ರೇರಕರ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು, "ಸ್ವಸಹಾಯ ಸಂಘಗಳನ್ನು ರಚಿಸುವಂತೆ ಹೊರ ಜಿಲ್ಲೆಗಳಿಂದಲೂ ಬೇಡಿಕೆ ಬರುತ್ತಿದ್ದು, ಈ ಬಗ್ಗೆ ಆತುರದ ನಿರ್ಣಯವನ್ನು ನಾವು ಕೈಗೊಳ್ಳುವುದಿಲ್ಲ. ಮೊದಲನೇಯದಾಗಿ ದಾವಣಗೆರೆ ಜಿಲ್ಲೆಯಲ್ಲಿ ಬಾಕಿಯಿರುವ ತಾಲೂಕಿನಲ್ಲಿ ಈ ಸಂಘವನ್ನು ಆರಂಭಿಸುವ ಕೆಲಸ ಮಾಡುತ್ತೇವೆ. ಶಿವಮೊಗ್ಗದಲ್ಲಿ ಪೂರ್ತಿ ಸಂಘವನ್ನು ಸ್ಥಾಪಿಸುವ ಜತೆಗೆ ಉತ್ತರ ಕನ್ನಡ ಜಿಲ್ಲೆಯಲ್ಲೂ ಈ ಕಾರ್ಯ ನಡೆಸಲಿದ್ದೇವೆ. ಇತ್ತೀಚೆಗೆ ಮೈಸೂರು ಜಿಲ್ಲೆಯಿಂದಲೂ ಹೆಚ್ಚಿನ ಬೇಡಿಕೆ ಬಂದಿದ್ದು, ಆ ಭಾಗಗಳಲ್ಲಿ ಸರ್ವೇ ನಡೆಸುವ ಮೂಲಕ ಪರಿಶೀಲಿಸಿ ಕ್ರಮ ಕೈಗೊಳ್ಳಲಿದ್ದೇವೆ" ಎಂದರು.
ಈ ಸಂದರ್ಭ ನವೋದಯ ಚಾರಿಟೇಬಲ್ ಟ್ರಸ್ಟ್ ನ ಟ್ರಸ್ಟಿ ಹಾಗೂ ಎಸ್ಸಿಡಿಸಿಸಿ ಬ್ಯಾಂಕಿನ ನಿರ್ದೇಶಕ ಭಾಸ್ಕರ ಎಸ್.ಕೋಟ್ಯಾನ್, ಎಸ್ಸಿಡಿಸಿಸಿ ಬ್ಯಾಂಕಿನ ನಿರ್ದೇಶಕ ಶಶಿಕುಮಾರ್, ನವೋದಯ ಚಾರಿಟೇಬಲ್ ಟ್ರಸ್ಟ್ ನ ಮ್ಯಾನೇಜಿಂಗ್ ಟ್ರಸ್ಟಿ ಮೇಘರಾಜ್ ಜೈನ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.