ಉಡುಪಿ, ಆ. 04 (DaijiworldNews/AA): ಅತೀ ವೇಗವಾಗಿ ಬಂದ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಮಣಿಪಾಲ ಪೊಲೀಸ್ ಠಾಣೆಯ ಎದುರು ಸೋಮವಾರ ನಡೆದಿದೆ.

ಬೆಂಗಳೂರು ನೋಂದಣಿಯ ಕಾರು ಮಣಿಪಾಲದಿಂದ ಉಡುಪಿ ಕಡೆಗೆ ಕಾರು ವೇಗವಾಗಿ ಚಲಿಸುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಅಪಘಾತದ ವೇಳೆ ಕಾರಿನಲ್ಲಿ ಚಾಲಕ ಮಾತ್ರ ಇದ್ದು, ಘಟನೆ ಬಳಿಕ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.
ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ತಂತಿಗಳು ರಸ್ತೆಗೆ ಬಿದ್ದಿದ್ದು, ಮಣಿಪಾಲದಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಕಾರಿನ ಮುಂಭಾಗ ಜಖಂಗೊಂಡಿದೆ. ಈ ಬಗ್ಗೆ ಪೊಲೀಸರು ಪರಿಶೀಲನೆ ನಡೆಸಿದ್ದು, ಇನ್ನಷ್ಟೇ ದೂರು ದಾಖಲಾಗಬೇಕಿದೆ.