ಕುಂದಾಪುರ,ನ. 26 (DaijiworldNews/AK): ಪತ್ರಕರ್ತರು ಉತ್ಸಾಹದ ಚಿಲುಮೆಯಾಗಿ ಕೆಲಸ ಮಾಡುವಂತಾಗಬೇಕು. ಪತ್ರಕರ್ತರಲ್ಲಿ ಉತ್ಸಾಹ ಕಡಿಮೆಯಾದರೆ, ಉದಾಸೀನದ ಮನೋಭಾವ ಬೆಳೆದರೆ ನಾವು ಅರ್ಧ ಸತ್ತ ಹಾಗೆ. ಆದ್ದರಿಂದ ಯಾವುದೇ ಸುದ್ಧಿಯನ್ನು ಈಗಲೇ ಮಾಡುವ, ಇವತ್ತೇ ಮಾಡುವ ನಮ್ಮಲ್ಲಿ ಉತ್ಸಾಹ ಇದ್ದರೆ ಮಾತ್ರ ನಾವು ಬೇಡಿಕೆಯ ಪತ್ರಕರ್ತರಾಗಿ ಉಳಿಯಲು ಸಾಧ್ಯ ಎಂದು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಲಕ್ಷ್ಮೀ ಮಚ್ಚಿನ ಹೇಳಿದರು.





ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಕುಂದಾಪುರದ ಭಂಡಾರ್ಕರ್ಸ್ ಕಾಲೇಜಿನ ಆರ್.ಎನ್.ಶೆಟ್ಟಿ ಸಭಾಂಗಣದಲ್ಲಿ ನಡೆದ ಸನ್ಮಾನ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಯಕ್ಷಗಾನ ಕ್ಷೇತ್ರ ಪರಿಪೂರ್ಣ ವ್ಯಕ್ತಿಯನ್ನು ನಿರ್ಮಾಣ ಮಾಡುತ್ತದೆ. ಅಂತಹ ಕ್ಷೇತ್ರದಲ್ಲಿರುವ ಲಕ್ಷ್ಮೀ ಮಚ್ಚಿನ ಅವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಒಲಿದು ಬಂದಿರುವುದು ನಿಜಕ್ಕೂ ಆ ಪ್ರಶಸ್ತಿಗೆ ಬೆಲೆ ಬಂದಂತಾಗಿದೆ ಎಂದು ಕಲಾಕ್ಷೇತ್ರ ಕುಂದಾಪುರ ಅಧ್ಯಕ್ಷ ಬಿ. ಕಿಶೋರ್ ಕುಮಾರ್ ಹೇಳಿದರು.
ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ನಾಗರಾಜ ರಾಯಪ್ಪನಮಠ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪತ್ರಕರ್ತ ಜಾನ್ ಡಿಸೋಜ ಅಭಿನಂದನಾ ಮಾತನಾಡಿದರು. ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಸುಬ್ರಹ್ಮಣ್ಯ ಭಟ್ (ಸುಜಿ ಕುರ್ಯ), ಭಂಡಾರ್ಕರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲ ಡಾ.ಶುಭಕರ ಆಚಾರ್ಯ, ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯ ಯು.ಎಸ್.ಶೆಣೈ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ನಜೀರ್ ಪೊಲ್ಯ ಉಪಸ್ಥಿತರಿದ್ದರು.
ಇದೇ ಸಂದರ್ಭ ಎಸ್.ಸುಬ್ರಹ್ಮಣ್ಯ ಭಟ್ (ಸುಜಿ ಕುರ್ಯ), ನಜೀರ್ ಪೊಲ್ಯ, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಅವಿರೋಧವಾಗಿ ಆಯ್ಕೆಯಾದ ನೂತನ ಕಾರ್ಯದರ್ಶಿ ಟಿ.ಲೋಕೇಶ ಆಚಾರ್ಯ ತೆಕ್ಕಟ್ಟೆ, ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಆಯ್ಕೆಯಾದ ಬಿ.ರಾಘವೇಂದ್ರ ಪೈ ಗಂಗೊಳ್ಳಿ, ಚಂದ್ರಮ ತಲ್ಲೂರು ಮತ್ತು ಯೋಗೀಶ್ ಕುಂಭಾಶಿ ಅವರನ್ನು ಗೌರವಿಸಲಾಯಿತು.