ಕಾಸರಗೋಡು, ಫೆ. 27 (DaijiworldNews/TA): ವಿಧಾನಸಭಾ ಚುನಾವಣೆಯ ಪೂರ್ವಭಾವಿ ಕ್ರಮವಾಗಿ ಕಾಸರಗೋಡು ಜಿಲ್ಲಾಧಿಕಾರಿ ಇಂಬುಶೇಖರ್ ಕೆ. ಅವರನ್ನು ವರ್ಗಾಯಿಸಿ ಸರ್ಕಾರ ಆದೇಶ ಹೊರಡಿಸಿದೆ. ಅವರ ಸ್ಥಾನಕ್ಕೆ ತ್ರಿಶ್ಶೂರು ಜಿಲ್ಲಾಧಿಕಾರಿಯಾಗಿದ್ದ ಅರ್ಜುನ್ ಪಾಂಡ್ಯನ್ ಅವರನ್ನು ಕಾಸರಗೋಡಿನ ನೂತನ ಜಿಲ್ಲಾಧಿಕಾರಿಯಾಗಿ ನೇಮಿಸಲಾಗಿದೆ.

ಅರ್ಜುನ್ ಪಾಂಡ್ಯನ್ ಅವರು ಈ ಹಿಂದೆ ಕಾಸರಗೋಡು ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ ಸಂದರ್ಭದಲ್ಲಿ ಚುನಾವಣಾ ಕರ್ತವ್ಯಗಳನ್ನು ಸಮರ್ಥವಾಗಿ ನಿರ್ವಹಿಸಿ ಶ್ಲಾಘನೆಗೆ ಪಾತ್ರರಾಗಿದ್ದರು. ಅವರ ಉತ್ತಮ ಸೇವೆಯನ್ನು ಪರಿಗಣಿಸಿ ಚುನಾವಣಾ ಆಯೋಗದಿಂದ ಪ್ರಶಸ್ತಿಯನ್ನೂ ಪಡೆದಿದ್ದರು. ಇದೀಗ ಮತ್ತೊಮ್ಮೆ ಕಾಸರಗೋಡಿಗೆ ನೇಮಕವಾಗಿರುವುದು ಜಿಲ್ಲೆಯ ಆಡಳಿತ ವಲಯದಲ್ಲಿ ಕುತೂಹಲಕ್ಕೆ ಗ್ರಾಸವಾಗಿದೆ.
ಇನ್ನೊಂದೆಡೆ, ರಾಜ್ಯ ಟೂರಿಸಂ ನಿರ್ದೇಶಕರಾಗಿದ್ದ ಶಿಖಾ ಸುರೇಂದ್ರನ್ ಐಎಎಸ್ ಅವರನ್ನು ತ್ರಿಶೂರು ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ನೇಮಿಸಲಾಗಿದೆ. ಈ ಬಗ್ಗೆ ರಾಜ್ಯ ಸರ್ಕಾರದ ಕಾರ್ಯದರ್ಶಿಗಳು ಅಧಿಕೃತ ಪ್ರಕಟಣೆ ನೀಡಿದ್ದು, ತಕ್ಷಣದಿಂದಲೇ ಆದೇಶ ಜಾರಿಯಲ್ಲಿದೆ ಎಂದು ತಿಳಿಸಿದ್ದಾರೆ.
ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ರಾಜ್ಯದಲ್ಲಿ ಹಲವು ಐಎಎಸ್ ಅಧಿಕಾರಿಗಳ ವರ್ಗಾವಣೆ ನಡೆದಿದ್ದು, ಆಡಳಿತಾತ್ಮಕ ಸುಗಮತೆಗೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.