ಉಡುಪಿ, ಮಾ. 03 (DaijiworldNews/AA): ಕಳೆದ ಕೆಲವು ದಿನಗಳಿಂದ ಮನೆಯಿಂದ ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬರ ಶವ ಕೊಳೆತ ಸ್ಥಿತಿಯಲ್ಲಿ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡವೂರು ಸಮೀಪದ ಇಂದ್ರಾಣಿ ನದಿಯಲ್ಲಿ ಮಂಗಳವಾರ ಪತ್ತೆಯಾಗಿದೆ.

ಮೃತರನ್ನು ಅಂಬಾಗಿಲು ಸುಬ್ರಹ್ಮಣ್ಯ ನಗರದ ನಿವಾಸಿ ಸುರೇಶ್ ಪೂಜಾರಿ (54) ಎಂದು ಗುರುತಿಸಲಾಗಿದೆ. ಇವರು ಕೆಲವು ದಿನಗಳ ಹಿಂದೆ ತಮ್ಮ ಮನೆಯಿಂದ ನಾಪತ್ತೆಯಾಗಿದ್ದರು. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು.
ವಿಷಯ ತಿಳಿಯುತ್ತಿದ್ದಂತೆಯೇ ಮಲ್ಪೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದರು. ಸಹಾಯಕ ಉಪನಿರೀಕ್ಷಕ ಹರೀಶ್ ಕೆ. ಅವರು ಮಹಜರು ನಡೆಸಿ ಮುಂದಿನ ಕ್ರಮ ಕೈಗೊಂಡರು.
ಸಾಮಾಜ ಸೇವಕ ನಿತ್ಯಾನಂದ ಒಳಕಾಡು ಅವರು ನದಿಯಿಂದ ಶವವನ್ನು ಹೊರತೆಗೆದು, ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದರು. ಈ ಕಾರ್ಯಾಚರಣೆಯಲ್ಲಿ ಮಲ್ಪೆಯ ಶಬೀರ್ ಮತ್ತು ಮುಸ್ತಾಕ್ ನೆರವಾದರು.
ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ನಡೆಯುತ್ತಿದೆ.