ಮಂಗಳೂರು, ಮಾ. 16 (DaijiworldNews/AA): ಮುಲ್ಕಿ ಸುಂದರ್ ರಾಮ್ ಶೆಟ್ಟಿ ಸ್ಮರಣಾರ್ಥ ಚಾರಿಟಬಲ್ ಟ್ರಸ್ಟ್ ವತಿಯಿಂದ ಶನಿವಾರ ಮೂಲ್ಕಿ ಸುಂದರ್ ರಾಮ್ ಶೆಟ್ಟಿ ಸಭಾಂಗಣದಲ್ಲಿ ಸಹಾಯಧನ ಪ್ರದಾನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.






ಕಾರ್ಯಕ್ರಮದಲ್ಲಿ ಮಾತನಾಡಿದ ಟ್ರಸ್ಟ್ ಅಧ್ಯಕ್ಷ ಡಾ. ಕೆ. ಪ್ರಕಾಶ್ ಶೆಟ್ಟಿ ಅವರು, "ಮುಲ್ಕಿ ಸುಂದರ್ ರಾಮ್ ಶೆಟ್ಟಿ ಅವರ ದೂರದೃಷ್ಟಿಯಿಂದಾಗಿ ಇಂದು ಸಮಾಜದ ಅನೇಕ ಮನೆಗಳಲ್ಲಿ ದೀಪಗಳು ಉರಿಯುತ್ತಿವೆ. ಇಲ್ಲಿ ಸಹಾಯ ಪಡೆದವರು ಭವಿಷ್ಯದಲ್ಲಿ ಸಮಾಜಕ್ಕೆ ಮಾರ್ಗದರ್ಶಕ ದೀಪಗಳಾಗಿ ಬೆಳೆಯಬೇಕು" ಎಂದು ಆಶಿಸಿದರು.
ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಸಂಸದ ಕ್ಯಾ. ಬ್ರಿಜೇಶ್ ಚೌಟ ಮಾತನಾಡಿ, "ಜೀವನದಲ್ಲಿ ನಮಗೆ ಬೆಂಬಲ ನೀಡಿ ಮೇಲೆತ್ತಿದವರನ್ನು ನಾವು ಎಂದಿಗೂ ಮರೆಯಬಾರದು. ಇಂದು ಆರ್ಥಿಕ ನೆರವು ಪಡೆದವರು ಮುಂದಿನ ದಿನಗಳಲ್ಲಿ ಇತರರಿಗೆ ಸಹಾಯ ಹಸ್ತ ಚಾಚುವಂತಾಗಲಿ" ಎಂದರು. ಇದೇ ಸಂದರ್ಭದಲ್ಲಿ ಶಾಸಕ ಎ. ಉಮಾನಾಥ ಕೋಟ್ಯಾನ್ ಕೂಡ ಮಾತನಾಡಿದರು.
ದಾಯ್ಜಿವರ್ಲ್ಡ್ ಸಮೂಹ ಸಂಸ್ಥೆಗಳ ಸ್ಥಾಪಕ ವಾಲ್ಟರ್ ನಂದಳಿಕೆ ಮಾತನಾಡಿ, "ಪ್ರಕಾಶ್ ಶೆಟ್ಟಿ ಅವರು ಸುಂದರ್ ರಾಮ್ ಶೆಟ್ಟಿ ಅವರ ಹಾದಿಯಲ್ಲೇ ಸಾಗುತ್ತಿದ್ದಾರೆ. ಅವರು ಅಪರೂಪದ ವ್ಯಕ್ತಿತ್ವ ಹೊಂದಿರುವವರು. ನೆರವು ಪಡೆದ ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸು ಕಂಡು ಸಮಾಜದ ಇನ್ನಷ್ಟು ಜನರಿಗೆ ಸಹಾಯ ಮಾಡಬೇಕು" ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ, ಮುಲ್ಕಿ ಸುಂದರ್ ರಾಮ್ ಶೆಟ್ಟಿ ಅವರ ಪುತ್ರ ಹರಿಪ್ರಸಾದ್ ಶೆಟ್ಟಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಟ್ರಸ್ಟಿ ಬಾಲಕೃಷ್ಣ ಹೆಗ್ಡೆ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ನಿತೇಶ್ ಶೆಟ್ಟಿ ಎಕ್ಕಾರ್ ಮತ್ತು ನಿತಿನ್ ಸಾಲಿಯಾನ್ ಕಾರ್ಯಕ್ರಮ ನಿರೂಪಿಸಿದರು. ಶಾಸಕ ಸುರೇಶ್ ಶೆಟ್ಟಿ ಗುರ್ಮೆ ವಂದಿಸಿದರು.
ಈ ಸಂದರ್ಭದಲ್ಲಿ ಟ್ರಸ್ಟ್ ವತಿಯಿಂದ ಒಟ್ಟು 300 ಕುಟುಂಬಗಳು ಮತ್ತು ಶಿಕ್ಷಣ ಸಂಸ್ಥೆಗಳಿಗೆ ಒಟ್ಟು 50 ಲಕ್ಷ ರೂ. ಆರ್ಥಿಕ ಸಹಾಯಧನ ನೀಡಲಾಯಿತು.