ಮಂಗಳೂರು, ಜೂ. 17 (DaijiworldNews/AK): ಮೊಗರು ಗ್ರಾಮದ ಮಳಲಿ ಸಂಕೇಶ ಎಂಬಲ್ಲಿ ಫಲ್ಗುಣಿ ನದಿಯಿಂದ ಅಕ್ರಮವಾಗಿ ಮರಳನ್ನು ತೆಗೆದು ಮಾರಾಟಕ್ಕಾಗಿ ದಾಸ್ತಾನು ಮಾಡಿದ್ದ ಆರೋಪದ ಮೇಲೆ ಅನ್ವಿತ್ ಮತ್ತು ರಾಜೇಂದ್ರ ಮೆಂಡಾ ವಿರುದ್ಧ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಶ್ವಾಸಾರ್ಹ ಮಾಹಿತಿಯ ಮೇರೆಗೆ, ಬಜ್ಪೆ ಪೊಲೀಸ್ ಇನ್ಸ್ಪೆಕ್ಟರ್ ಬಾಲಕೃಷ್ಣ ಅವರು ಪ್ರತ್ಯಕ್ಷದರ್ಶಿಗಳ ಸಮ್ಮುಖದಲ್ಲಿ ಸ್ಥಳಕ್ಕೆ ದಾಳಿ ನಡೆಸಿದರು. ಕಾರ್ಯಾಚರಣೆಯ ಸಮಯದಲ್ಲಿ, ಫಲ್ಗುಣಿ ನದಿಯ ಕಡೆಗೆ ಹೋಗುವ ರಸ್ತೆಯ ಬಲಭಾಗದಲ್ಲಿರುವ ತೆರೆದ ಜಾಗದಲ್ಲಿ ಸುಮಾರು 20 ಲೋಡ್ ಮರಳನ್ನು ಅಕ್ರಮವಾಗಿ ಸಂಗ್ರಹಿಸಿರುವುದನ್ನು ಪೊಲೀಸರು ಪತ್ತೆ ಹಚ್ಚಿ ಮರಳನ್ನು ವಶಪಡಿಸಿಕೊಂಡಿದ್ದಾರೆ.
ಬನತ್ತಡಿ ರಸ್ತೆಯಲ್ಲಿ ಮುಂದೆ ಸಾಗಿದಾಗ, ಗುಡ್ಡದ ಮೇಲೆ ಅಕ್ರಮವಾಗಿ ದಾಸ್ತಾನು ಮಾಡಿದ್ದ ಸುಮಾರು 50 ಲೋಡ್ ಮರಳನ್ನು ಪೊಲೀಸರು ಪತ್ತೆ ಹಚ್ಚಿದರು, ಅವುಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ. ಹೆಚ್ಚಿನ ತಪಾಸಣೆ ನಡೆಸಿದಾಗ ಮತ್ತೊಂದು ಸ್ಥಳದಲ್ಲಿ ಹೆಚ್ಚುವರಿಯಾಗಿ 5 ಲೋಡ್ ಮರಳನ್ನು ವಶಪಡಿಸಿಕೊಳ್ಳಲಾಗಿದೆ. ನಂತರ ಹತ್ತಿರದ ಸ್ಥಳದಲ್ಲಿ 22 ಲೋಡ್ ಮರಳನ್ನು ವಶಪಡಿಸಿಕೊಳ್ಳಲಾಯಿತು. ಸೀತಾರಾಮ ಭಜನಾ ಮಂದಿರದ ಬಳಿ, ರಸ್ತೆಯ ಎಡಭಾಗದಲ್ಲಿರುವ ತೆರೆದ ಜಾಗದಲ್ಲಿ ಸುಮಾರು 30 ಲೋಡ್ ಮರಳನ್ನು ಸಂಗ್ರಹಿಸಲಾಗಿತ್ತು. ಒಟ್ಟು, ವಿವಿಧ ಸ್ಥಳಗಳಲ್ಲಿ ಅಕ್ರಮವಾಗಿ ದಾಸ್ತಾನು ಮಾಡಿದ್ದ 127 ಲೋಡ್ ಮರಳನ್ನು ಸಾಕ್ಷಿಗಳ ಸಮ್ಮುಖದಲ್ಲಿ ವಶಪಡಿಸಿಕೊಳ್ಳಲಾಗಿದೆ. ಸ್ವಾದೀನಪಡಿಸಿಕೊಂಡ ಮರಳಿನ ಮೌಲ್ಯ ಸುಮಾರು 6.35 ಲಕ್ಷ ರೂ. ಎಂದು ಪೊಲೀಸರು ಅಂದಾಜಿಸಿದ್ದಾರೆ.
ಪೊಲೀಸರ ಪ್ರಕಾರ, ಆರೋಪಿಗಳು ಸರ್ಕಾರಕ್ಕೆ ರಾಯಲ್ಟಿ ಪಾವತಿಸದೆ ಫಲ್ಗುಣಿ ನದಿಯಿಂದ ಅಕ್ರಮವಾಗಿ ಮರಳನ್ನು ಹೊರತೆಗೆದಿದ್ದಾರೆ ಮತ್ತು ಯಾವುದೇ ಮಾನ್ಯ ಪರವಾನಗಿ ಇಲ್ಲದೆ ಮಾರಾಟ ಮಾಡುವ ಉದ್ದೇಶದಿಂದ ಅದನ್ನು ಸಂಗ್ರಹಿಸಿದ್ದರು. ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.