ಉಡುಪಿ, ಜೂ. 19 (DaijiworldNews/AA): ಸುಮಾರು 13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮತ್ತು ಕಳ್ಳತನ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದ ಆರೋಪಿಯನ್ನು ಮಲ್ಪೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಬೀಡಗಾನಹಳ್ಳಿ ಗ್ರಾಮದ ನಿವಾಸಿ ಮಧು ಅಲಿಯಾಸ್ ಉಮೇಶ್ ಎಂದು ಗುರುತಿಸಲಾಗಿದೆ.
ಅಂಬಲಪಾಡಿಯ ಕಪ್ಪೆಟ್ಟು ಸಮೀಪದ ದೇವಸ್ಥಾನವೊಂದರ ಹುಂಡಿಯಿಂದ ಹಣ ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಪ್ರಕರಣ ದಾಖಲಾಗಿತ್ತು. ಅಂದಿನಿಂದ ಆರೋಪಿಯು ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದನು.
ಮಲ್ಪೆ ಪೊಲೀಸ್ ಉಪನಿರೀಕ್ಷಕ ಅನಿಲ್ ಕುಮಾರ್ ಅವರ ನೇತೃತ್ವದಲ್ಲಿ, ವಾರಂಟ್ ವಿಭಾಗದ ಸಿಬ್ಬಂದಿಗಳಾದ ವಿಶ್ವನಾಥ್ ಎಚ್. ಮತ್ತು ಮೊಹಮ್ಮದ್ ರಫಿ ಅವರು ಆರೋಪಿಯನ್ನು ಜೂನ್ 18 ರಂದು ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಬಳಿ ಪತ್ತೆಹಚ್ಚಿ ಬಂಧಿಸಿ ಪೊಲೀಸ್ ಠಾಣೆಗೆ ಕರೆತಂದಿದ್ದಾರೆ.
ಬಳಿಕ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ ಜೂನ್ 29 ರವರೆಗೆ ನ್ಯಾಯಾಂಗ ಬಂಧನ ವಿಧಿಸಿ, ಹಿರಿಯಡ್ಕ ಜಿಲ್ಲಾ ಕಾರಾಗೃಹಕ್ಕೆ ಕಳುಹಿಸಲು ಆದೇಶಿಸಿದೆ.