ಮಂಗಳೂರು, ಜು. 26 (DaijiworldNews/AK): ರಸ್ತೆ ಅಪಘಾತಗಳಲ್ಲಿ ಗಾಯಗೊಂಡ ಸಂತ್ರಸ್ತರ ಪ್ರಾಣ ಉಳಿಸುವುದಕ್ಕೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ‘ಪಿಎಂ ರಾಹತ್ʼ ಯೋಜನೆಯನ್ನು ದಕ್ಷಿಣ ಕನ್ನಡದಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳಿಸುವುದಕ್ಕೆ ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರು ಇಂದು ಆರೋಗ್ಯಾಧಿಕಾರಿಗಳು ಸೇರಿ ಸಂಬಂಧಪಟ್ಟ ಇಲಾಖೆಗಳ ಜತೆಗೆ ಮಹತ್ವದ ಸಭೆ ನಡೆಸಿದ್ದಾರೆ.


ಆ ಮೂಲಕ, ಪಿಎಂ ರಾಹತ್ ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಿ ದಕ್ಷಿಣ ಕನ್ನಡವನ್ನು ಮಾದರಿ ಜಿಲ್ಲೆಯಾಗಿಸುವಂತೆ ಅವರು ಮನವಿ ಮಾಡಿದ್ದಾರೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಆಶಯದಂತೆ ಜಾರಿಗೆ ತಂದಿರುವ ಪಿಎಂ ರಾಹತ್ (ರಸ್ತೆ ಅಪಘಾತ ಸಂತ್ರಸ್ತರ ಆಸ್ಪತ್ರೆಗೆ ದಾಖಲು ಮತ್ತು ಖಚಿತ ಚಿಕಿತ್ಸೆ) ಯೋಜನೆಯ ಸಮರ್ಪಕ ಅನುಷ್ಠಾನದ ಕುರಿತಂತೆ ಶಾಸಕ ವೇದವ್ಯಾಸ್ ಕಾಮತ್ ಅವರ ಉಪಸ್ಥಿತಿಯಲ್ಲಿ ಜಿಲ್ಲೆಯ ಪ್ರಮುಖ ಆಸ್ಪತ್ರೆಗಳ ಪ್ರತಿನಿಧಿಗಳು, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಹೆಚ್.ತಿಮ್ಮಯ್ಯ ಹಾಗೂ ಡಿ.ಸಿ.ಪಿ ರವಿಶಂಕರ್ ಸೇರಿದಂತೆ ಪೊಲೀಸ್ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿರುವ ಸಂಸದರು ಮಹತ್ವದ ಮಾಹಿತಿ ಪಡೆದುಕೊಂಡಿದ್ದಾರೆ.