ಉಡುಪಿ, ಸೆ.12 (DaijiworldNews/AA): ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ಸ್ಫೋಟಕ ಬಳಸಿ ಬಂಡೆ ಕಲ್ಲು ಸ್ಫೋಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

ಬಂಧಿತರನ್ನು ಕಾರ್ಕಳ ತಾಲೂಕಿನ ಇನ್ನಾ ಗ್ರಾಮದ ತೋಡಿಕರ್ಮಾರ್ ನಿವಾಸಿ ಕೆ. ಗೋವಿಂದ ರಾಜ್ (40) ಹಾಗೂ ವಿಜಯಪುರ ಮೂಲದ, ಕಲ್ಯಾ ಹಾಳೆಕಟ್ಟೆ ನಿವಾಸಿ ಶೇಖಪ್ಪ ಚಲವಾದಿ (28) ಎಂದು ಗುರುತಿಸಲಾಗಿದೆ.
ಸೆಪ್ಟೆಂಬರ್ 5ರಂದು ಮರ್ಣೆ ಗ್ರಾಮದ ಕುಕ್ಕಿಪಲ್ಕೆಯಲ್ಲಿ ಸಂಬಂಧಪಟ್ಟ ಇಲಾಖೆಯಿಂದ ಯಾವುದೇ ಅನುಮತಿ ಪಡೆಯದೆ ಸ್ಫೋಟಕ ವಸ್ತುಗಳನ್ನು ಬಳಸಿ ಬಂಡೆ ಕಲ್ಲನ್ನು ಅಕ್ರಮವಾಗಿ ಸ್ಫೋಟಿಸಿದ ಆರೋಪದ ಮೇರೆಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ಮುಂದುವರಿಸಿದ ಮಣಿಪಾಲ ಪೊಲೀಸ್ ಠಾಣೆಯ ಪಿಎಸ್ಐ ತಿಮ್ಮೇಶ್ ಬಿ.ಎನ್. ಅವರು ಆರೋಪಿಗಳನ್ನು ಬಂಧಿಸಿದ್ದಾರೆ. ಘಟನೆಗೆ ಬಳಸಲಾಗಿದೆ ಎನ್ನಲಾದ ಟ್ರ್ಯಾಕ್ಟರ್, ಡ್ರಿಲ್ಲಿಂಗ್ ಯಂತ್ರ ಹಾಗೂ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.