ಕುಂದಾಪುರ, ಜೂ 22 (DaijiworldNews/MS): ಬೈಂದೂರು ವಿಧಾನಸಭಾ ಕ್ಷೇತ್ರ ಅತಿ ಹೆಚ್ಚು ಅಂತರದಲ್ಲಿ ನನ್ನ ಗೆಲುವಿಗೆ ಕಾರಣವಾಗಿದೆ. ಈ ಕ್ಷೇತ್ರದ ಕಾರ್ಯಕರ್ತರು ಹಾಗೂ ಮತದಾರರ ಋಣ ಸಂದಾಯವನ್ನ ತೀರಿಸುತ್ತೇನೆ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಬಿ ವೈ ರಾಘವೇಂದ್ರ ಹೇಳಿದ್ದಾರೆ ಅವರು ಶುಕ್ರವಾರ ಹೆಮ್ಮಾಡಿಯ ಜುವೆಲ್ ಪಾರ್ಕ್ ನಲ್ಲಿರುವ ಜಯಶ್ರೀ ಸಭಾಂಗಣದಲ್ಲಿ ಲೋಕಸಭಾ ಚುನಾವಣೆ ಮತ್ತು ಪರಿಷತ್ ಚುನಾವಣೆಯ ಗೆಲುವಿಗೆ ಕಾರಣಕರ್ತರಾದ ಕಾರ್ಯಕರ್ತರನ್ನ ಸನ್ಮಾನಿಸಿ ಗೌರವಿಸುವ ಕಾರ್ಯಕ್ರಮದ ನಂತರ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.

ನನ್ನ ಅಧಿಕಾರ ಅವಧಿಯಲ್ಲಿ ಕೇಂದ್ರ ಸರಕಾರದಿಂದ ಸಿಗುವ ಸವಲತ್ತುಗಳನ್ನು ಮತ್ತು ರಾಜ್ಯ ಸರ್ಕಾರದಿಂದ ಪಡೆಯಬಹುದಾದ ಅನುದಾನಗಳನ್ನು ಬೈಂದೂರು ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗಾಗಿ ವಿನಯೋಗಿ ಈ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡಲು ಶಾಸಕ ಗುರುರಾಜ್ ಶೆಟ್ಟಿ ಅವರ ಜೊತೆಗೆ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ ಎಂದರು.
ರಾಜ್ಯದಲ್ಲಿ ಅಭಿವೃದ್ಧಿ ಕಾಮಗಾರಿಗಳು ಸಂಪೂರ್ಣ ಸ್ಥಗಿತಗೊಂಡಿವೆ ಬಿಜೆಪಿ ಸರ್ಕಾರ ಇದ್ದಾಗ ಮಂಜೂರಾತಿಯಾಗಿದ್ದ ಕಾಮಗಾರಿಗಳು ಕೂಡ ಈ ಸರಕಾರ ಅನುಷ್ಠಾನಕ್ಕೆ ತೆಗೆದುಕೊಳ್ಳುತ್ತಿಲ್ಲ. ಈಗಾಗಲೇ ಸರ್ಕಾರ ಬಂದು ಒಂದು ವರ್ಷ ಕಳೆದಿದೆ, ಇನ್ನಾದರೂ ಅಭಿವೃದ್ಧಿಯ ಕಡೆಗೆ ಸರ್ಕಾರ ಗಮನ ಕೊಡುವಂತಾಗಲಿ ಎಂದು ಆಗೈಸುತ್ತೇನೆ.
ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಜಲಜೀವನ್ ಮಿಷನ್ ಕಾಮಗಾರಿಗಳು ಪೂರ್ಣಗೊಂಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದ ಸಂಸದರು ಈ ಬಗ್ಗೆ ಹಲವು ಟ್ಯಾಂಕುಗಳನ್ನು ನಿರ್ಮಾಣ ಮಾಡಬೇಕಿದೆ ರಾಜ್ಯ ಸರ್ಕಾರ ತಕ್ಷಣ ಕಾರ್ಯ ಪ್ರವೃತ್ತವಾಗಬೇಕಿದೆ ಆ ಮೂಲಕ ಇಲ್ಲಿನ ಜನರಿಗೆ ಕುಡಿಯುವ ನೀರಿನ ಸೌಲಭ್ಯವನ್ನು ಒದಗಿಸಬೇಕಾಗಿದೆ ಎಂದರು.
ಚುನಾವಣೆಯ ಸಂದರ್ಭದಲ್ಲಿ ಘೋಷಣೆ ಮಾಡಿದಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಕೊಲ್ಲೂರಿಗೆ ಕರೆದುಕೊಂಡು ಬರುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದ ಸಂಸದ ಬಿ ವೈ ರಾಘವೇಂದ್ರ, ಯಾವುದೇ ಅಧಿಕಾರ ಇಲ್ಲದೆ ಇದ್ದರೂ ಸಂಸದನಾಗಿ ನನ್ನ ಕಾರ್ಯವ್ಯಾಪ್ತಿಯಲ್ಲಿ ಅಭಿವೃದ್ಧಿಯ ಬಗ್ಗೆ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ ಎಂದರು.
ಈ ಕ್ಷೇತ್ರದಲ್ಲಿ ಸಾಕಷ್ಟು ಸಮಸ್ಯೆಗಳಿಗೆ ಪರಿಹಾರ ಕಾಣಬೇಕಾಗಿದ್ದು ಅರಣ್ಯ ಸಮಸ್ಯೆ, ಮರಳಿನ ಸಮಸ್ಯೆ ಬಡವರಿಗೆ ನಿವೇಶನ ಸಮಸ್ಯೆಗಳು ಹೀಗೆ ಹತ್ತು ಹಲವು ಸಮಸ್ಯೆಗಳಿದ್ದು ಇದರ ಪರಿಹಾರಕ್ಕೆ ಕಾನೂನಿನಲ್ಲಿ ಅವಕಾಶ ಕಲ್ಪಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ. ರಾಜ್ಯ ಸರ್ಕಾರ ಆರ್ಥಿಕವಾಗಿ ಸಂಪೂರ್ಣ ದಿವಾಳಿಯಾಗಿದ್ದು ಬೆಲೆ ಏರಿಕೆ ಮೂಲಕ ಜನರಿಗೆ ಹೆಚ್ಚಿನ ಹೊರೆ ಹೊರೆಸುತ್ತಿದೆ ಇದರ ವಿರುದ್ಧ ಬಿಜೆಪಿ ಹೈಕಮಾಂಡ್ ನಿರ್ಧಾರಕ್ಕೆ ಬಂದಿದ್ದು ರಾಜ್ಯದ ಎಲ್ಲೆಡೆ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ನಡೆಸುವುದಾಗಿ ತೀರ್ಮಾನಿಸಿದ್ದೇವೆ ಅದೇ ರೀತಿ ಎಲ್ಲಾ ಕಡೆ ಪ್ರತಿಭಟನೆ ನಡೆಸಲಾಗುತ್ತದೆ ಮತ್ತು ಆ ಮೂಲಕ ಸರ್ಕಾರಕ್ಕೆ ಎಚ್ಚರಿಕೆ ಕೊಡಲಾಗುತ್ತಿದೆ ಎಂದರು.
ಲೋಕಸಭಾ ಚುನಾವಣೆ ಫಲಿತಾಂಶ ಕಾಂಗ್ರೆಸ್ ಪಕ್ಷಕ್ಕೆ ನಿರಾಶೆ ತಂದಿದ್ದು ಮತದಾರರ ಮೇಲೆ ಸೇಡು ತೀರಿಸಿಕೊಳ್ಳುವ ಸಲುವಾಗಿ ಈ ರೀತಿಯ ಬೆಳೆ ಏರಿಕೆಯನ್ನು ಜನರ ಮೇಲೆ ಹೊರಿಸಲಾಗುತ್ತಿದೆ ಇಂದು ಆರೋಪಿಸಿದ ಸಂಸದ ರಾಘವೇಂದ್ರ ಇದನ್ನು ಭಾರತೀಯ ಜನತಾ ಪಕ್ಷ ತೀವ್ರವಾಗಿ ಖಂಡಿಸುತ್ತದೆ ಮತ್ತು ಪ್ರತಿಭಟಿಸುತ್ತದೆ ಎಂದರು. ಈ ಸಂದರ್ಭ ಬೈಂದೂರು ಶಾಸಕ ಗುರುರಾಜ್ ಗಂಟೆ ಹೊಳೆ ಹಾಗೂ ಕಾರ್ಯಕರ್ತರು ಪಕ್ಷದ ಮುಖಂಡರು ಉಪಸ್ಥಿತರಿದ್ದರು.