ವಿಜಯಪುರ, ಮಾ.21 (DaijiworldNews/AA): ಹನಿಟ್ರ್ಯಾಪ್ ಪ್ರಕರಣದ ತನಿಖೆ ನಡೆಸಬೇಕು. ಜನಪ್ರತಿನಿಧಿಗಳ ಭದ್ರತೆಗೆ ಸಿಬಿಐ ಮೂಲಕವೇ ಹನಿಟ್ರ್ಯಾಪ್ ತನಿಖೆಯಾಗಲಿ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಅವರಿಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪತ್ರ ಬರೆದಿದ್ದಾರೆ.

ವಿಧಾನಸಭೆ ಕಲಾಪದಲ್ಲಿ ಬಯಲಾದ ಹನಿಟ್ರ್ಯಾಪ್ ವಿಚಾರವಾಗಿ ಪತ್ರ ಬರೆದಿರುವ ಅವರು, ಹನಿಟ್ರ್ಯಾಪ್ ಪ್ರಕರಣದ ತನಿಖೆಗೆ ಒತ್ತಾಯಿಸಿದ್ದಾರೆ. ಜನಪ್ರತಿನಿಧಿಗಳನ್ನ ಟಾರ್ಗೆಟ್ ಮಾಡಿ ಹನಿಟ್ರ್ಯಾಪ್ ಮಾಡಲಾಗುತ್ತಿದೆ. ಜನಪ್ರತಿನಿಧಿಗಳ ಭದ್ರತೆಗಾಗಿ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಈ ಮೂಲಕ ನೀವು ಜನಪ್ರತಿನಿಧಿಗಳ ಘನತೆ ಕಾಪಾಡಿ ಎಂದು ಮನವಿ ಮಾಡಿಕೊಂಡಿದ್ದಾರೆ.
ಗುರುವಾರ ವಿಧಾನಸಭೆಯಲ್ಲಿ ಬಜೆಟ್ ಭಾಷಣದ ಮೇಲಿನ ಚರ್ಚೆಯ ಸಂದರ್ಭದಲ್ಲಿ ಈ ವಿಚಾರ ಪ್ರಸ್ತಾಪ ಮಾಡಿದ ಯತ್ನಾಳ್, ರಾಜ್ಯದಲ್ಲಿ ಸಹಕಾರಿ ಸಚಿವರ ಮೇಲೆ ಹನಿಟ್ರ್ಯಾಪ್ ಮಾಡುವ ಪ್ರಯತ್ನ ಮಾಡಲಾಗಿದೆ. ಇದೊಂದು ಕೆಟ್ಟ ಸಂಸ್ಕೃತಿ. ಜನ ಪ್ರತಿನಿಧಿಗಳನ್ನು ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ ಎಂದು ಪ್ರಸ್ತಾಪಿಸಿದ್ದರು. ಇದೇ ವೇಳೆ ರಾಜ್ಯದ 48 ರಾಜಕೀಯ ಮುಖಂಡರ ಸಿ.ಡಿ, ಪೆನ್ಡ್ರೈವ್ ತಯಾರಾಗಿದೆ. ನನ್ನ ಮೇಲೂ ಹನಿಟ್ರ್ಯಾಪ್ ಯತ್ನ ನಡೆದಿದೆ ಎಂದು ಕೆ.ಎನ್ ರಾಜಣ್ಣ ಅವರು ಕೂಡ ಮಾಹಿತಿ ನೀಡಿದ್ದರು.