ಬೆಂಗಳೂರು, ಜೂ.02 (DaijiworldNews/AK): ರಾಜ್ಯದ ಕಾಂಗ್ರೆಸ್ ಸರಕಾರವು ಕಾನೂನು- ಸುವ್ಯವಸ್ಥೆಯನ್ನು ಸಂಪೂರ್ಣವಾಗಿ ಹದಗೆಡಿಸಿದೆ ಎಂದು ರಾಜ್ಯ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆರೋಪಿಸಿದ್ದಾರೆ.

ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿರುವ ಕಾಂಗ್ರೆಸ್ ಸರಕಾರವು ಇಡೀ ರಾಜ್ಯದಲ್ಲಿ ಕೆಟ್ಟ ವಾತಾವರಣ ಸೃಷ್ಟಿಸುತ್ತಿದೆ. ರಾಜ್ಯದ ಕಾನೂನು- ಸುವ್ಯವಸ್ಥೆಯನ್ನು ಸಂಪೂರ್ಣವಾಗಿ ಹದಗೆಡಿಸಿದ್ದಾರೆ. ಅತ್ಯಾಚಾರಗಳು, ಕೊಲೆಗಳು ಇವತ್ತು ಬಹಳಷ್ಟು ಆಗುತ್ತಿದೆ. ಜೊತೆಗೇ ಬಿಜೆಪಿ ನಾಯಕರು, ಹಿಂದೂಪರ ನಾಯಕರನ್ನು ಟಾರ್ಗೆಟ್ ಮಾಡಿ ತೊಂದರೆ ಕೊಡುವ ಕೆಲಸಕ್ಕೆ ಕೈ ಹಾಕಿದ್ದಾರೆ ಎಂದು ಆಕ್ಷೇಪಿಸಿದರು.
ಮಂಗಳೂರಿನಲ್ಲಿ ಕೆಲವು ಮುಸ್ಲಿಂ ಸಂಘಟನೆಗಳು, ಕಾಂಗ್ರೆಸ್ ಪಕ್ಷದಲ್ಲಿರುವ ಕೆಲವು ಮುಸಲ್ಮಾನ ನಾಯಕರು ರಾಜೀನಾಮೆಯ ಬ್ಲ್ಯಾಕ್ಮೇಲ್ ಪ್ರಾರಂಭಿಸಿದ್ದಾರೆ. ಬ್ಲ್ಯಾಕ್ಮೇಲ್ಗೆ ಹೆದರಿ ಹಿಂದುತ್ವ ಕಾರ್ಯಕರ್ತರು, ಬಿಜೆಪಿ ನಾಯಕರನ್ನು ಗಡೀಪಾರು ಮಾಡಲು ಆರಂಭಿಸಿದ್ದಾರೆ. ಮಂಗಳೂರು, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು ಭಾಗಗಳಲ್ಲಿ ಇದು ನಡೆದಿದೆ. ಸುಹಾಸ್ ಅವರು ಮೃತಪಟ್ಟಾಗ ಮೆರವಣಿಗೆಯಲ್ಲಿ ಹೋದವರನ್ನು ಗುರುತಿಸಿ ಕರೆದು ತನಿಖೆ ಮಾಡುತ್ತಿದ್ದಾರೆ ಎಂದು ಟೀಕಿಸಿದರು.