ಬೆಂಗಳೂರು, ನ. 29 (DaijiworldNews/AA): ನಾಯಕತ್ವ ವಿಚಾರದಲ್ಲಿ ನನ್ನದು ಹಾಗೂ ಸಿಎಂ ಸಿದ್ದರಾಮಯ್ಯ ಅವರದ್ದು ಒಂದೇ ರಾಜಕೀಯ ನಿಲುವಾಗಿದ್ದು, ಪಕ್ಷದ ವರಿಷ್ಠರು ಹೇಳಿದಂತೆ ನಾವಿಬ್ಬರು ನಡೆಯುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸಿಎಂ ಅಧಿಕೃತ ನಿವಾಸದಲ್ಲಿ ಶನಿವಾರ ಉಪಾಹಾರ ಸಭೆ ನಡೆಸಿ, ನಂತರ ಜಂಟಿ ಸುದ್ದಿಗೋಷ್ಠಿಯಲ್ಲಿ ನಡೆಸಿ ಮಾತನಾಡಿದ ಅವರು, "ನಮ್ಮಲ್ಲಿ ಯಾವುದೇ ಗುಂಪು ಇಲ್ಲ. ಕೃಷ್ಣ ಅವರ ಕಾಲದಲ್ಲೂ ಗುಂಪುಗಾರಿಕೆ ಮಾಡಿಲ್ಲ. ಇವತ್ತಿಗೂ ಅವಕಾಶ ಕೊಟ್ಟಿಲ್ಲ. ನನಗೆ ಇರುವುದು ಒಂದೇ ಗುಂಪು, ಅದು ಕಾಂಗ್ರೆಸ್ ಗುಂಪು. ಸಿದ್ದರಾಮಯ್ಯ ಅವರ ಮೊದಲ ಅವಧಿಯಲ್ಲಿ ಮೊದಲ ಆರು ತಿಂಗಳು ನನ್ನನ್ನು ಮಂತ್ರಿ ಮಾಡದೇ ಇದ್ದಾಗಲೂ ನಾನು ಒಂದೇ ಒಂದು ಮಾತನ್ನೂ ಆಡಿರಲಿಲ್ಲ. ಒಟ್ಟಾಗಿ ಕೆಲಸ ಮಾಡುವ ನನ್ನ ನಿರ್ಧಾರ ಅಚಲ. ಹೈಕಮಾಂಡ್ ಹೇಳಿದಂತೆ ನಾವಿಬ್ಬರೂ ಕೆಲಸ ಮಾಡಿಕೊಂಡು ಹೋಗುತ್ತೇವೆ. ಎಲ್ಲರನ್ನೂ ಒಟ್ಟಾಗಿ ತೆಗೆದುಕೊಂಡು, ಪ್ರತಿಯೊಬ್ಬ ಶಾಸಕರಿಗೆ ಶಕ್ತಿ ತುಂಬಿ, ಪಕ್ಷವನ್ನು ಬಲಿಷ್ಠವಾಗಿ ಸಂಘಟಿಸುವುದು ನಮ್ಮಿಬ್ಬರ ಕರ್ತವ್ಯ. 2028ಕ್ಕೆ ಮತ್ತೆ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತರಲು ಅನೇಕ ಕಾರ್ಯಕ್ರಮ ರೂಪಿಸಿದ್ದು, ಅದಕ್ಕೆ ತಕ್ಕಂತೆ ಕೆಲಸ ಮಾಡುತ್ತಿದ್ದೇವೆ. ಮುಖ್ಯಮಂತ್ರಿಗಳು ನೀಡಿರುವ ಸಂದೇಶಕ್ಕೆ ನನ್ನ ಸಹಮತವಿದೆ" ಎಂದು ಹೇಳಿದರು.
"ನಾವು ಪಕ್ಷದ ನಿಷ್ಠಾವಂತ ಕಾರ್ಯಕರ್ತರು. ಪ್ರಸ್ತುತ ಪರಿಸ್ಥಿತಿಯಲ್ಲಿ ರಾಷ್ಟ್ರಮಟ್ಟದಲ್ಲಿ ಪಕ್ಷ ಕಷ್ಟದ ಸಮಯದಲ್ಲಿದೆ. ಈ ಸಂದರ್ಭದಲ್ಲಿ ಕರ್ನಾಟಕ ಮಹತ್ತರ ಪಾತ್ರ ನಿರ್ವಹಿಸಲಿದೆ. 2028ರ ಚುನಾವಣೆ ನಂತರ 2029ರ ಲೋಕಸಭೆ ಚುನಾವಣೆಯನ್ನು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಅವರ ನಾಯಕತ್ವದಲ್ಲಿ ಎದುರಿಸುತ್ತೇವೆ. ರಾಜ್ಯದಲ್ಲಿ 2028ಕ್ಕೆ ಹಾಗೂ 2029ರಲ್ಲಿ ರಾಷ್ಟ್ರ ಮಟ್ಟದಲ್ಲಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವುದೇ ನಮ್ಮ ಗುರಿ. ಇಷ್ಟು ದಿನ ಒಗ್ಗಟ್ಟಿನಿಂದ ಕೆಲಸ ಮಾಡಿಕೊಂಡು ಹೋಗುತ್ತಿದ್ದು, ಮುಂದೆಯೂ ಅದೇ ರೀತಿ ಕೆಲಸ ಮಾಡಲು ಅಚಲ ನಿರ್ಧಾರ ಕೈಗೊಂಡಿದ್ದೇವೆ" ಎಂದರು.
"ಇಂದು ನಾನು ಹಾಗೂ ಸಿಎಂ ಅವರು ಉಪಹಾರ ಕೂಟದಲ್ಲಿ ಭಾಗವಹಿಸಿದ್ದು, ಮುಂದಿನ ಒಂದೆರಡು ದಿನಗಳಲ್ಲಿ ಸಿದ್ದರಾಮಯ್ಯ ಅವರು ನಮ್ಮ ಮನೆಗೆ ಭೋಜನಕೂಟಕ್ಕೆ ಬರಲಿದ್ದಾರೆ. ನಾವು ಒಟ್ಟಾಗಿ ಕೆಲಸ ಮಾಡುತ್ತಿದ್ದೇವೆ. ಕಾರ್ಯಕರ್ತರ ಪರಿಶ್ರಮ, ಜನರ ಆಶೀರ್ವಾದ, ನಿಮ್ಮೆಲ್ಲರ ಸಹಕಾರದಿಂದ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ. ನಾವು ಕೊಟ್ಟ ಮಾತಿನಂತೆ ಜನರ ಸೇವೆ ಮಾಡುತ್ತಿದ್ದೇವೆ. ರಾಜ್ಯದ ಜನ ನಮ್ಮ ಮೇಲೆ ವಿಶ್ವಾಸ ಇಟ್ಟು ಸಹಕಾರ ನೀಡುತ್ತಿದ್ದಾರೆ. ಜನರ ನಿರೀಕ್ಷೆ, ಆಕಾಂಕ್ಷೆ, ಆಶೋತ್ತರಗಳನ್ನು ಈಡೇರಿಸುವುದು ನಮ್ಮ ಕರ್ತವ್ಯ. ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸರ್ಕಾರ ರಚನೆಯಾಗಿದ್ದು, ಹೈಕಮಾಂಡ್ ತೀರ್ಮಾನದಂತೆ ಕೆಲಸ ಮಾಡುತ್ತಿದ್ದೇವೆ" ಎಂದು ನುಡಿದರು.