ನವದೆಹಲಿ, ಜ. 12 (DaijiworldNews/AA): ಕಲ್ಲಿದ್ದಲು ಕಳ್ಳತನ ಹಗರಣಕ್ಕೆ ಸಂಬಂಧಿಸಿದಂತೆ ಐ-ಪಿಎಸಿ ಕಚೇರಿ ಮತ್ತು ಅದರ ನಿರ್ದೇಶಕ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ನಡೆದ ತನಿಖೆ ಮತ್ತು ಶೋಧ ಕಾರ್ಯಾಚರಣೆಯ ವೇಳೆ ಮೂವರು ಜಾರಿ ನಿರ್ದೇಶನಾಲಯ ಅಧಿಕಾರಿಗಳಿಗೆ ಬೆದರಿಕೆ ಮತ್ತು ಕಿರುಕುಳ ನೀಡಲಾಗಿದೆ ಎಂದು ಆರೋಪಿಸಿ ಇಡಿ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಸುಪ್ರೀಂ ಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದೆ.

ಕೋಲ್ಕತ್ತಾ ಐ-ಪಿಎಸಿ ಕಚೇರಿಯಲ್ಲಿ ಶೋಧ ಕಾರ್ಯಾಚರಣೆಯ ಸಂದರ್ಭದಲ್ಲಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಸರ್ಕಾರ ಮತ್ತು ಮುಖ್ಯಮಂತ್ರಿಯ ವಿರುದ್ಧ ಮೂವರು ಇಡಿ ಅಧಿಕಾರಿಗಳು ಸುಪ್ರೀಂ ಕೋರ್ಟ್ ನಲ್ಲಿ ಈ ಅರ್ಜಿ ಸಲ್ಲಿಸಿದ್ದಾರೆ.
ಕೇಂದ್ರ ತನಿಖಾ ಸಂಸ್ಥೆ, ಇಡಿ ಸಲ್ಲಿಸಿರುವ ಅರ್ಜಿಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ಮತ್ತು ಇತರ ಹಲವರ ವಿರುದ್ಧ ಗಂಭೀರ ಆರೋಪಗಳನ್ನ ಮಾಡಲಾಗಿದೆ. ಪಶ್ಚಿಮ ಬಂಗಾಳ ಸಿಎಂ ಮತ್ತು ಡಿಜಿಪಿ ಶೋಧ ಕಾರ್ಯಾಚರಣೆಗೆ ಅಡ್ಡಿಪಡಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಜನವರಿ ೮ ರಂದು ಸುಮಾರು 2,742 ಕೋಟಿ ರೂ.ಗಳ ಕಲ್ಲಿದ್ದಲು ಹಗರಣದಲ್ಲಿ ಶೋಧ ಕಾರ್ಯಾಚರಣೆಗೆ ಅಡ್ಡಿಪಡಿಸಿದ್ದಕ್ಕಾಗಿ ಸಿಬಿಐ ಎಫ್ಐಆರ್ ದಾಖಲಿಸಿದ. ಬ್ಯಾನರ್ಜಿ, ಡಿಜಿಪಿ ರಾಜೀವ್ ಕುಮಾರ್ ಮತ್ತು ಸಿಪಿ ಮನೋಜ್ ವರ್ಮಾ ಅವರ ವಿರುದ್ಧ ತನಿಖೆ ನಡೆಸಬೇಕೆಂದು ಅದು ಒತ್ತಾಯಿಸಿದೆ.