ಬೆಂಗಳೂರು, ಜ. 25 (DaijiworldNews/TA): ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ ಯನ್ನು ರೋಜ್ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ವಿಬಿ-ಗ್ರಾಮ್-ಜಿ ಎಂದು ಮರುನಾಮಕರಣ ಮಾಡುವ ಕೇಂದ್ರ ಸರ್ಕಾರದ ನಿರ್ಧಾರ ರಾಜಕೀಯ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಕರ್ನಾಟಕ ಸರ್ಕಾರವು ರಾಜ್ಯದಾದ್ಯಂತ 6,000ಕ್ಕೂ ಹೆಚ್ಚು ಗ್ರಾಮ ಪಂಚಾಯತ್ ಕಚೇರಿಗಳಿಗೆ ಮಹಾತ್ಮ ಗಾಂಧಿಯವರ ಹೆಸರನ್ನು ಇಡಲು ಚಿಂತನೆ ನಡೆಸುತ್ತಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಂಬರುವ ರಾಜ್ಯ ಬಜೆಟ್ನಲ್ಲಿ ಈ ಪ್ರಸ್ತಾವನೆಯನ್ನು ಅಧಿಕೃತವಾಗಿ ಘೋಷಿಸುವ ಸಾಧ್ಯತೆ ಇದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ. ಮಾಜಿ ಸಂಸದ ಹಾಗೂ ಕೆಪಿಸಿಸಿ ಉಪಾಧ್ಯಕ್ಷ ವಿ.ಎಸ್. ಉಗ್ರಪ್ಪ ಅವರ ಸಲಹೆಯ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದ್ದು, ಗಾಂಧಿಯವರ ಪರಂಪರೆಯನ್ನು ಅಳಿಸಿಹಾಕುವ ಕೇಂದ್ರ ಸರ್ಕಾರದ ಪ್ರಯತ್ನಕ್ಕೆ ರಾಜ್ಯ ಸರ್ಕಾರ ಸ್ಪಷ್ಟ ಪ್ರತಿಕ್ರಿಯೆ ನೀಡಬೇಕೆಂಬ ಒತ್ತಾಯದ ಫಲವಾಗಿ ಈ ನಿರ್ಧಾರ ಹೊರಬರುತ್ತಿದೆ ಎಂದು ತಿಳಿದುಬಂದಿದೆ.
ಜನವರಿ 20ರಂದು ಮುಖ್ಯಮಂತ್ರಿಗೆ ಬರೆದ ಪತ್ರದಲ್ಲಿ ಉಗ್ರಪ್ಪ, ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರ ನಿರುದ್ಯೋಗ ಮತ್ತು ಗ್ರಾಮೀಣ ಸಂಕಷ್ಟಕ್ಕೆ ಪರಿಹಾರವಾಗಿ ಎಂಎನ್ಆರ್ಇಜಿಎ ಯೋಜನೆಯನ್ನು ಜಾರಿಗೆ ತಂದಿತ್ತು ಎಂದು ನೆನಪಿಸಿದರು. ಈ ಯೋಜನೆಗೆ ಮಹಾತ್ಮ ಗಾಂಧಿಯವರ ಹೆಸರನ್ನು ನೀಡುವ ಮೂಲಕ ರಾಷ್ಟ್ರಪಿತನ ಕೊಡುಗೆಗಳಿಗೆ ಗೌರವ ಸಲ್ಲಿಸಲಾಗಿತ್ತು ಎಂದು ಅವರು ಉಲ್ಲೇಖಿಸಿದ್ದಾರೆ.
ಆದರೆ 2014ರಲ್ಲಿ ಅಧಿಕಾರಕ್ಕೆ ಬಂದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರ ಈ ಯೋಜನೆಗೆ ಸಮರ್ಪಕ ಅನುದಾನ ಒದಗಿಸಲು ವಿಫಲವಾಗಿದೆ ಮತ್ತು ಇದೀಗ ಎಂಎನ್ಆರ್ಇಜಿಎಯನ್ನು ವಿಬಿ-ಗ್ರಾಮ್-ಜಿ ಎಂದು ಮರುನಾಮಕರಣ ಮಾಡುವ ಮೂಲಕ ಗಾಂಧಿಯವರ ಹೆಸರನ್ನು ತೆಗೆದುಹಾಕಿದೆ ಎಂದು ಉಗ್ರಪ್ಪ ಆರೋಪಿಸಿದ್ದಾರೆ. ಇದು ಕೇವಲ ಹೆಸರಿನ ಬದಲಾವಣೆಯಲ್ಲ, ಮಹಾತ್ಮ ಗಾಂಧಿಯವರಿಗೆ ಮಾಡಿದ ಅವಮಾನವಾಗಿದ್ದು, ಸಂವಿಧಾನದ 51(ಎ) ವಿಧಿಯ ಉಲ್ಲಂಘನೆಯಾಗಿದೆ ಎಂದು ಅವರು ಕಿಡಿಕಾರಿದ್ದಾರೆ. ಯಾವುದೇ ಭಾರತೀಯ ನಾಗರಿಕರು ಇದನ್ನು ಸಹಿಸಲು ಸಾಧ್ಯವಿಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ತಮ್ಮ ಟೀಕೆಯನ್ನು ಮತ್ತಷ್ಟು ತೀವ್ರಗೊಳಿಸಿದ ಉಗ್ರಪ್ಪ, ಬಿಜೆಪಿ ಮತ್ತು ಆರ್ಎಸ್ಎಸ್ ಗುಪ್ತ ಕಾರ್ಯಸೂಚಿಯೊಂದಿಗೆ ಕಾರ್ಯನಿರ್ವಹಿಸುತ್ತಿದ್ದು, ಈ ಕ್ರಮವು ಮಹಾತ್ಮ ಗಾಂಧಿಯವರ ಹಂತಕ ನಾಥುರಾಮ್ ಗೋಡ್ಸೆಯ ಸಿದ್ಧಾಂತವನ್ನು ಉತ್ತೇಜಿಸುವ ಪ್ರಯತ್ನವಾಗಿದೆ ಎಂದು ಆರೋಪಿಸಿದ್ದಾರೆ. ಸಂವಿಧಾನ ಮತ್ತು ಗಾಂಧಿ ತತ್ವಗಳಲ್ಲಿ ನಂಬಿಕೆ ಇಡುವ ಕಾಂಗ್ರೆಸ್ ಪಕ್ಷವು ಮೋದಿ ಸರ್ಕಾರ, ಆರ್ಎಸ್ಎಸ್ ಮತ್ತು ಗೋಡ್ಸೆ ಬೆಂಬಲಿಗರಿಗೆ ತಕ್ಕ ಉತ್ತರ ನೀಡಬೇಕೆಂದು ಅವರು ಹೇಳಿದ್ದಾರೆ.
ಗಾಂಧಿಯವರ ಗ್ರಾಮ ಸ್ವರಾಜ್ಯ ಮತ್ತು ಅಧಿಕಾರ ವಿಕೇಂದ್ರೀಕರಣದ ದೃಷ್ಟಿಕೋನವೇ ದೇಶದ ಗ್ರಾಮ ಪಂಚಾಯಿತಿಗಳು ಹಾಗೂ ಸ್ಥಳೀಯ ಸ್ವ-ಆಡಳಿತ ಸಂಸ್ಥೆಗಳ ಅಡಿಪಾಯವಾಗಿವೆ ಎಂದು ಉಗ್ರಪ್ಪ ಒತ್ತಿ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ, ಕರ್ನಾಟಕದ 6,000ಕ್ಕೂ ಹೆಚ್ಚು ಗ್ರಾಮ ಪಂಚಾಯತಿಗಳು ಮತ್ತು ಇತರ ಸ್ಥಳೀಯ ಸಂಸ್ಥೆಗಳನ್ನು ಅಧಿಕೃತವಾಗಿ ‘ರಾಷ್ಟ್ರಪಿತ ಮಹಾತ್ಮ ಗಾಂಧಿ ಗ್ರಾಮ ಪಂಚಾಯತ್ ಕಚೇರಿಗಳು’ ಎಂದು ಹೆಸರಿಸುವಂತೆ ಅವರು ಪ್ರಸ್ತಾಪಿಸಿದ್ದಾರೆ.
ಈ ಪ್ರಸ್ತಾವನೆ ಪ್ರಸ್ತುತ ಸರ್ಕಾರದ ಪರಿಗಣನೆಯಲ್ಲಿದ್ದು, ಕೇಂದ್ರ-ರಾಜ್ಯಗಳ ನಡುವೆ ಎಂಎನ್ಆರ್ಇಜಿಎ ಮರುನಾಮಕರಣದ ಕುರಿತು ವಿವಾದ ತೀವ್ರವಾಗಿರುವ ಸಂದರ್ಭದಲ್ಲಿ, ರಾಜ್ಯ ಸರ್ಕಾರವು ತನ್ನ ಸೈದ್ಧಾಂತಿಕ ನಿಲುವನ್ನು ಸಾಂಕೇತಿಕವಾಗಿ ವ್ಯಕ್ತಪಡಿಸಲು ಈ ಕ್ರಮವನ್ನು ಬಳಸುವ ಸಾಧ್ಯತೆ ಇದೆ ಎಂದು ಮೂಲಗಳು ಸೂಚಿಸಿವೆ.