ಬೆಂಗಳೂರು,ಫೆ. 15 (DaijiworldNews/TA): ನಗರ ಹೊರವಲಯದ ನೆಲಮಂಗಲ ಜಿಂದಾಲ್ ಸಮೀಪ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ದುರಂತದಲ್ಲಿ ಐವರು ಮೃತಪಟ್ಟಿದ್ದಾರೆ.

ತುಮಕೂರು ದಿಕ್ಕಿನಿಂದ ಬೆಂಗಳೂರಿನತ್ತ ಬರುತ್ತಿದ್ದ ಕಾರು ನಿಯಂತ್ರಣ ತಪ್ಪಿ ಮಧ್ಯ ವಿಭಜಕವನ್ನು ದಾಟಿ ಎದುರು ದಿಕ್ಕಿನಲ್ಲಿ ಸಂಚರಿಸುತ್ತಿದ್ದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಗೆ ಡಿಕ್ಕಿಯಾಗಿದೆ ಎಂದು ತಿಳಿದುಬಂದಿದೆ. ಡಿಕ್ಕಿಯ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಬಸ್ನ ಮುಂಭಾಗಕ್ಕೂ ಭಾರೀ ಹಾನಿಯಾಗಿದೆ.
ಕಾರಿನಲ್ಲಿ ಪ್ರಯಾಣಿಸುತ್ತಿದ್ದ ದುರ್ಗಾ ಪ್ರಸಾದ್ (20), ಕೇಶವ್ (19), ಲಲಿತ್ (22), ಹರ್ಷಿತ್ (20) ಹಾಗೂ ಮತ್ತೋರ್ವ ಲಲಿತ್ (22) ಸ್ಥಳದಲ್ಲೇ ಅಥವಾ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾರೆ. ಘಟನೆಯ ತೀವ್ರತೆಗೆ ನಾಲ್ವರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಇನ್ನೋರ್ವರನ್ನು ತಕ್ಷಣ ನೆಲಮಂಗಲ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಆತನೂ ಸಹ ಮೃತಪಟ್ಟಿದ್ದಾನೆ.
ಮೃತ ಹರ್ಷಿತ್ ರಾಜನಕುಂಟೆಯ ಸಾಯಿ ವಿದ್ಯಾ ಮಹಾವಿದ್ಯಾಲಯದ ದ್ವಿತೀಯ ವರ್ಷದ ಪದವಿ ವಿದ್ಯಾರ್ಥಿಯಾಗಿದ್ದನೆಂದು ತಿಳಿದುಬಂದಿದೆ. ಘಟನೆ ನಡೆದ ದಿನ ರಾತ್ರಿ ಸುಮಾರು 8.30ರವರೆಗೆ ಮನೆಯಲ್ಲಿ ಇದ್ದ ಅವರು ಸ್ನೇಹಿತನನ್ನು ಭೇಟಿ ಮಾಡಿ ಬರುತ್ತೇನೆಂದು ಹೇಳಿ ಹೊರಟಿದ್ದರೆಂದು ಕುಟುಂಬದವರು ತಿಳಿಸಿದ್ದಾರೆ. ಬಳಿಕ ತುಮಕೂರು ದಿಕ್ಕಿನಿಂದ ಬೆಂಗಳೂರಿನತ್ತ ಪ್ರಯಾಣಿಸುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಈ ಸಂಬಂಧ ಮುದ್ದನಯಕನ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.