ಮೈಸೂರು, ಫೆ. 22 (DaijiworldNews/TA): ಸಾರ್ವಜನಿಕರ ಜೀವ ಹಾಗೂ ಆಸ್ತಿಗೆ ಅಪಾಯ ಉಂಟಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಮೈಸೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ಹೀಲಿಯಂ ಅನಿಲ ಬಳಸಿ ಬಲೂನ್ ತುಂಬುವುದು, ಮಾರಾಟ ಮಾಡುವುದು, ಸಂಗ್ರಹಿಸುವುದು ಮತ್ತು ಸಾಗಣೆ ನಡೆಸುವುದನ್ನು ಮುಂದಿನ ಆದೇಶದವರೆಗೆ ಸಂಪೂರ್ಣ ನಿಷೇಧಿಸಲಾಗಿದೆ.

ಮೈಸೂರು ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ಅವರು BNSS–2023ರ ಸೆಕ್ಷನ್ 152 ಅಡಿಯಲ್ಲಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಈ ಆದೇಶ ಹೊರಡಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಕಮಿಷನರ್ ಸೀಮಾ ಲಾಟ್ಕರ್, ಬಹುತೇಕ ಬಲೂನ್ ಮಾರಾಟಗಾರರು ‘ಹೀಲಿಯಂ’ ಹೆಸರಿನಲ್ಲಿ ಅಪಾಯಕಾರಿ ಅನಿಲಗಳನ್ನು ಬಳಸುತ್ತಿರುವುದು ಕಂಡುಬಂದಿದೆ. ಅನಿಲದ ಪ್ರಮಾಣ, ಸುರಕ್ಷತಾ ಕ್ರಮಗಳ ಬಗ್ಗೆ ಸಮರ್ಪಕ ತಿಳುವಳಿಕೆ ಇಲ್ಲದ ಕಾರಣ ಸಾರ್ವಜನಿಕರಿಗೆ ಅಪಾಯ ಉಂಟಾಗುತ್ತಿದೆ. ಈ ಹಿನ್ನೆಲೆಯಲ್ಲಿ ಹೀಲಿಯಂ ಬಲೂನ್ ಮಾರಾಟವನ್ನು ನಿಷೇಧಿಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ನಗರದಲ್ಲಿ ನಡೆಯುವ ಹಬ್ಬ-ಜಾತ್ರೆಗಳು, ಪ್ರವಾಸಿ ತಾಣಗಳು, ಜನಸಂದಣಿ ಪ್ರದೇಶಗಳು ಹಾಗೂ ಸಾರ್ವಜನಿಕ ಸಮಾರಂಭಗಳಲ್ಲಿ ಹೀಲಿಯಂ ಅನಿಲ ಬಳಸಿ ಬಲೂನ್ ತುಂಬುವುದು ಅಥವಾ ಮಾರಾಟ ಮಾಡುವುದು ಸಂಪೂರ್ಣ ನಿಷೇಧಿಸಲಾಗಿದೆ. ಸುರಕ್ಷತಾ ಮಾನದಂಡಗಳನ್ನು ಪಾಲಿಸದೇ ಹೀಲಿಯಂ ಸಿಲಿಂಡರ್ಗಳ ಸಂಗ್ರಹ, ಸಾಗಣೆ, ಬಳಕೆ ಅಥವಾ ಮಾರಾಟ ಮಾಡಿದರೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ.
ವೈದ್ಯಕೀಯ ಹಾಗೂ ವೈಜ್ಞಾನಿಕ ಉದ್ದೇಶಗಳಿಗೆ ಮಾತ್ರ ನಿರ್ಬಂಧದಿಂದ ವಿನಾಯಿತಿ ನೀಡಲಾಗಿದೆ. ಸಭೆ-ಸಮಾರಂಭಗಳಲ್ಲಿ ಹೀಲಿಯಂ ಬಳಕೆ ಮಾಡಲು ಮುಂಚಿತ ಅನುಮತಿ ಹಾಗೂ ಅಗತ್ಯ ಸುರಕ್ಷತಾ ಪ್ರಮಾಣಪತ್ರ ಕಡ್ಡಾಯವಾಗಿದೆ. ಆದೇಶ ಉಲ್ಲಂಘಿಸಿದವರ ವಿರುದ್ಧ ಪ್ರಕರಣ ದಾಖಲಿಸಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಎಲ್ಲಾ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಹೀಲಿಯಂ ಸ್ವತಃ ದಹನಶೀಲ ಅನಿಲವಲ್ಲ. ಆದರೆ ಅತ್ಯಧಿಕ ಒತ್ತಡದಲ್ಲಿರುವ ಸಿಲಿಂಡರ್ಗಳು, ಕಳಪೆ ಗುಣಮಟ್ಟದ ವಾಲ್ವ್ಗಳು ಹಾಗೂ ಅಪ್ರಮಾಣಿತ ಸಂಗ್ರಹ-ಬಳಕೆ ವಿಧಾನಗಳಿಂದ ಸಿಲಿಂಡರ್ ಸ್ಫೋಟದ ಅಪಾಯ ಉಂಟಾಗಬಹುದು. ಜನಸಂದಣಿ ಪ್ರದೇಶಗಳಲ್ಲಿ ಇಂತಹ ಸ್ಫೋಟ ಸಂಭವಿಸಿದರೆ ಭಾರೀ ಅನಾಹುತ ಸಂಭವಿಸುವ ಸಾಧ್ಯತೆ ಇದೆ ಎಂದು ಪೊಲೀಸರು ಎಚ್ಚರಿಸಿದ್ದಾರೆ.
ಸಾರ್ವಜನಿಕ ಸ್ಥಳಗಳಲ್ಲಿ ಅಪ್ರಮಾಣಿತ ಅನಿಲ ಬಳಕೆ ಕಂಡುಬಂದರೆ ತಕ್ಷಣ ಪೊಲೀಸರಿಗೆ ಮಾಹಿತಿ ನೀಡುವಂತೆ ಮನವಿ ಮಾಡಲಾಗಿದೆ. ಕಾರ್ಯಕ್ರಮ ಆಯೋಜಕರು ಅಗತ್ಯ ಅನುಮತಿ ಹಾಗೂ ಸುರಕ್ಷತಾ ಕ್ರಮಗಳಿಲ್ಲದೆ ಹೀಲಿಯಂ ಬಳಕೆ ಮಾಡಿಸಬಾರದು. ಮಕ್ಕಳ ಸುರಕ್ಷತೆಗೆ ಪೋಷಕರು ಹೆಚ್ಚಿನ ಆದ್ಯತೆ ನೀಡುವಂತೆ ಅಧಿಕಾರಿಗಳು ಕೋರಿದ್ದಾರೆ.
ಕಳೆದ ಡಿಸೆಂಬರ್ 25ರಂದು ಮೈಸೂರು ಅರಮನೆ ಸಮೀಪದ ಜಯಮಾರ್ತಾಂಡ ದ್ವಾರದ ಬಳಿ ನಡೆದ ಸಿಲಿಂಡರ್ ಸ್ಫೋಟ ಘಟನೆ ರಾಜ್ಯವನ್ನು ಬೆಚ್ಚಿಬೀಳಿಸಿತ್ತು. ಬಲೂನ್ ಮಾರಾಟಗಾರ ಸಲೀಂ ಅವರ ಕೈಯಲ್ಲಿದ್ದ ಹೀಲಿಯಂ ಗ್ಯಾಸ್ ಸಿಲಿಂಡರ್ ಏಕಾಏಕಿ ಸ್ಫೋಟಗೊಂಡು ಸ್ಥಳದಲ್ಲೇ ಅವರು ಸಾವನ್ನಪ್ಪಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಮಂಜುಳಾ ಮತ್ತು ಲಕ್ಷ್ಮಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು. ಇನ್ನು ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದವು.
ಘಟನೆ ಆಕಸ್ಮಿಕವೇ ಅಥವಾ ಉದ್ದೇಶಿತವೇ ಎಂಬುದರ ಕುರಿತು ತನಿಖೆ ನಡೆದಿತ್ತು. ಸಾಮಾನ್ಯವಾಗಿ ಮೂವರು ಸೇರಿ ಬಲೂನ್ ಮಾರಾಟಕ್ಕೆ ಬರುತ್ತಿದ್ದರೆ, ಆ ದಿನ ಸಲೀಂ ಒಬ್ಬರೇ ಬಂದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿತ್ತು. ಪ್ರಕರಣದ ಗಂಭೀರತೆಯನ್ನು ಗಮನಿಸಿ ರಾಷ್ಟ್ರೀಯ ತನಿಖಾ ಸಂಸ್ಥೆ ಮಾಹಿತಿ ಸಂಗ್ರಹಿಸಿತ್ತು. ದೇವರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ. ಸಾರ್ವಜನಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಇಲಾಖೆ ಸ್ಪಷ್ಟಪಡಿಸಿದೆ.