ಬೆಂಗಳೂರು, ಫೆ. 23 (DaijiworldNews/AA): ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಫೆಬ್ರವರಿ 27ರವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬಂಗಾಳ ಕೊಲ್ಲಿಯ ಉತ್ತರ ಶ್ರೀಲಂಕಾ ಸಮೀಪ ಕೇಂದ್ರೀಕೃತವಾಗಿರುವ ವಾಯುಭಾರ ಕುಸಿತವು ಪೂರ್ವದತ್ತ ಚಲಿಸುವ ಸಾಧ್ಯತೆಯಿದೆ. ಪರಿಣಾಮ ಬಂಗಾಳ ಕೊಲ್ಲಿಯಿಂದ ಬೀಸುತ್ತಿರುವ ಗಾಳಿಯ ವೇಗ ಕಡಿಮೆಯಾಗುವ ಸಾಧ್ಯತೆಯಿದ್ದು, ಮಳೆಯ ಪ್ರಮಾಣವು ಆರಂಭಿಕ ಮುನ್ಸೂಚನೆಗಿಂತ ತುಸು ಕಡಿಮೆಯಾಗುವ ಸಾಧ್ಯತೆಯೂ ಇದೆ ಎಂದು ಇಲಾಖೆ ಗಮನಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಕೆಲ ಭಾಗಗಳಲ್ಲಿ ಈಗಾಗಲೇ ಉತ್ತಮ ಮಳೆಯಾದ ಬಗ್ಗೆ ವರದಿಯಾಗಿದೆ. ಕಾಸರಗೋಡು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.
ಪ್ರತಿಕೂಲ ಹವಾಮಾನದಿಂದಾಗಿ ಜನರ ದೈನಂದಿನ ಚಟುವಟಿಕೆಗೆ ಸ್ವಲ್ಪ ತೊಂದರೆಯಾಗಬಹುದು. ಬಲವಾದ ಗಾಳಿ ಬೀಸುವುದರಿಂದ ಹಲವೆಡೆ ವಿದ್ಯುತ್ ವ್ಯತ್ಯಯ ಉಂಟಾಗುವ ಸಾಧ್ಯತೆಯಿದೆ. ರಸ್ತೆಗಳಲ್ಲಿ ಸಂಚಾರ ದಟ್ಟಣೆ ಉಂಟಾಗಬಹುದು.
ಮರದ ರೆಂಬೆಗಳು ಮುರಿದು ಬೀಳುವ ಸಾಧ್ಯತೆಯಿರುವುದರಿಂದ ಸಾರ್ವಜನಿಕರು ಜಾಗರೂಕರಾಗಿರಲು ಸೂಚಿಸಲಾಗಿದೆ. ಜಿಲ್ಲೆಯ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಮಿಂಚಿನ ಮುನ್ನೆಚ್ಚರಿಕೆಯನ್ನೂ ನೀಡಲಾಗಿದೆ.
ನೈಋತ್ಯ ಬಂಗಾಳ ಕೊಲ್ಲಿಯ ಮೇಲ್ಮೈ ವಾತಾವರಣದಲ್ಲಿ, ತಮಿಳುನಾಡು ಮತ್ತು ಶ್ರೀಲಂಕಾ ಕರಾವಳಿಯ ಸಮೀಪ ಸುಳಿ ಗಾಳಿ ನಿರ್ಮಾಣವಾಗಿದೆ. ಇದರಿಂದಾಗಿ ಸಣ್ಣ ಮಟ್ಟದ ಕಡಿಮೆ ಒತ್ತಡದ ಪ್ರದೇಶ ಸೃಷ್ಟಿಯಾಗಿದ್ದು, ಸಮುದ್ರದ ಮೇಲಿರುವ ತೇವಾಂಶಭರಿತ ಮೋಡಗಳು ದಕ್ಷಿಣ ಭಾರತದ ಕರ್ನಾಟಕ ಮತ್ತು ಕೇರಳದತ್ತ ಚಲಿಸುತ್ತಿವೆ.
ದಕ್ಷಿಣ ಕನ್ನಡದ ಹಲವೆಡೆ ಈಗಾಗಲೇ ಭಾರೀ ಮಳೆಯಾಗಿದ್ದು, ಮುಂದಿನ ಐದು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ.