ಚಿಕ್ಕಮಗಳೂರು, 23 (DaijiworldNews/TA): ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಾಡಾನೆ ದಾಳಿಗಳ ಸರಣಿ ಮುಂದುವರಿದಿದ್ದು, ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಒಂದೇ ವಾರದಲ್ಲಿ ಎರಡು ಜೀವಗಳು ಬಲಿಯಾಗಿರುವ ಹಿನ್ನೆಲೆ, ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಮೃತದೇಹವನ್ನು ರಸ್ತೆ ಮಧ್ಯೆ ಇಟ್ಟು ಪ್ರತಿಭಟನೆ ನಡೆಸಲಾಗಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ.

ಕರ್ನಾಟಕದ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ, ಕೊಪ್ಪ ಹಾಗೂ ಎನ್ ಆರ್ ಪುರ ತಾಲೂಕುಗಳಲ್ಲಿ ಬಂದ್ಗೆ ಕರೆ ನೀಡಲಾಗಿದೆ. ವಿಜಯನಗರ ಜಿಲ್ಲೆಯ ಹೊಸಪೇಟೆ ಮೂಲದ ಬೋರಮ್ಮ ಎಂಬ ಮಹಿಳೆ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಹುಣಸೆಹಳ್ಳಿ ಸಮೀಪದ ಪುರ ಗ್ರಾಮದ ತೋಟದಲ್ಲಿ ಈ ಘಟನೆ ನಡೆದಿದೆ. ಅಟ್ಟಹಾಸ ಮೆರೆಯುತ್ತಿದ್ದ ಕಾಡಾನೆ ದಾಳಿ ಮಾಡಿದ ಪರಿಣಾಮ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಈ ಘಟನೆಯ ನಂತರ ಸ್ಥಳೀಯರು ಕಡಬಗೆರೆ ಬಳಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಅರಣ್ಯ ಸಚಿವರು ಸ್ಥಳಕ್ಕೆ ಬರಬೇಕು, ಶಾಶ್ವತ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆ ತೀವ್ರಗೊಂಡ ಹಿನ್ನೆಲೆ ಲಾಠಿಚಾರ್ಜ್ ನಡೆದಿರುವುದಾಗಿ ತಿಳಿದುಬಂದಿದೆ. ಜಿಲ್ಲೆಯಲ್ಲಿ ಕಾಡಾನೆ ದಾಳಿಗೆ ಇದುವರೆಗೆ 13 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಕೇವಲ ಏಳು ದಿನಗಳ ಅಂತರದಲ್ಲಿ ಇಬ್ಬರು ಸಾವನ್ನಪ್ಪಿರುವುದು ಆತಂಕ ಹೆಚ್ಚಿಸಿದೆ. ವಾರದ ಹಿಂದಷ್ಟೇ ಹಾವೇರಿ ಮೂಲದ ಯಲ್ಲಪ್ಪ ಎಂಬ ಕಾರ್ಮಿಕನೂ ಕಾಡಾನೆ ದಾಳಿಗೆ ಬಲಿಯಾಗಿದ್ದರು.
ಜನಾಕ್ರೋಶದ ನಡುವೆ ಅರಣ್ಯ ಇಲಾಖೆ 7 ಕುಮ್ಕಿ ಆನೆಗಳ ಸಹಾಯದಿಂದ ಕಾರ್ಯಾಚರಣೆ ಆರಂಭಿಸಿತು. ಪುರ ಗ್ರಾಮದ ಸಮೀಪ ಕಾಡಾನೆಗೆ ಅರವಳಿಕೆ ಚುಚ್ಚುಮದ್ದು ನೀಡಿ ಸೆರೆ ಹಿಡಿಯಲಾಗಿದೆ. ಸ್ಥಳಾಂತರಿಸುವ ವೇಳೆ ಕಾಡಾನೆ ಪ್ರತಿರೋಧ ತೋರಿದರೂ, ಕುಮ್ಕಿ ಆನೆಗಳ ನೆರವಿನಿಂದ ನಿಯಂತ್ರಣಕ್ಕೆ ತರಲಾಗಿದೆ. ಮಲೆನಾಡು ಭಾಗದಲ್ಲಿ ಕಾಡಾನೆಗಳ ಉಪಟಳ ಹೆಚ್ಚಾಗುತ್ತಿದ್ದು, ಮಾನವ-ಆನೆ ಸಂಘರ್ಷ ತೀವ್ರ ರೂಪ ಪಡೆದಿದೆ. ತಾತ್ಕಾಲಿಕ ಕ್ರಮಗಳಿಗಿಂತ ಶಾಶ್ವತ ಪರಿಹಾರ ಕಲ್ಪಿಸಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ. ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದ್ದು, ಮುಂದಿನ ಬೆಳವಣಿಗೆಗಳತ್ತ ಎಲ್ಲರ ಗಮನ ನೆಟ್ಟಿದೆ.