ಬೆಂಗಳೂರು, ಫೆ. 24 (DaijiworldNews/AK): ರಾಜ್ಯದ ಕಾಂಗ್ರೆಸ್ ಸರಕಾರ ಆರ್ಥಿಕವಾಗಿ ದಿವಾಳಿ ಆಗಿದೆ. ರಾಜ್ಯ ಸರಕಾರದಲ್ಲಿ 2.85 ಲಕ್ಷ ಹುದ್ದೆಗಳು ಖಾಲಿ ಇದ್ದು, ಹಣ ಇಲ್ಲದುದಕ್ಕಾಗಿ, ಖಜಾನೆ ಖಾಲಿ ಆದುದರಿಂದ ಮೀಸಲಾತಿಯ ಗೊಂದಲ ಸೃಷ್ಟಿಸಿ ನೇಮಕಾತಿ ಮುಂದೂಡುತ್ತಿದ್ದಾರೆ ಎಂದು ಮಾಜಿ ಉಪಮುಖ್ಯಮಂತ್ರಿ ಮತ್ತು ಸಂಸದ ಗೋವಿಂದ ಕಾರಜೋಳ ಅವರು ಆರೋಪಿಸಿದ್ದಾರೆ.

ಕರ್ನಾಟಕದಲ್ಲಿ ಇನ್ನೂ ಒಳ ಮೀಸಲಾತಿ ಜಾರಿಯಾಗಿಲ್ಲ ಎಂದು ಬಿಜೆಪಿ ನಿಯೋಗವು ಇಂದು ಮಾನ್ಯ ರಾಜ್ಯಪಾಲರನ್ನು ಭೇಟಿ ಮಾಡಿ ಗಮನ ಸೆಳೆಯಿತು. ಬಳಿಕ ಗೋವಿಂದ ಕಾರಜೋಳ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು.
ನೇಮಕಾತಿ ಇಲ್ಲದೇ ವಿದ್ಯಾವಂತ ಯುವಜನತೆ ನಿರಾಶರಾಗಿದ್ದಾರೆ. ಅವರು ಹತಾಶರಾಗಿದ್ದು, ಅವರನ್ನು ನಿರಾಶರಾಗಲು, ಹತಾಶರಾಗಲು ಬಿಡಬಾರದೆಂದು ತಿಳಿಸಿದರು.
ನಾವು ನೇಮಕಾತಿಯ ಪರವಾಗಿದ್ದೇವೆ ಎಂದು ಹೇಳಿದರು. ಒಳ ಮೀಸಲಾತಿ ಕುರಿತ ಸುಪ್ರೀಂ ಕೋರ್ಟಿನ ಆದೇಶ ಪಾಲಿಸಬೇಕು. ವರದಿಗಳನ್ನು ಗಮನದಲ್ಲಿ ಇಟ್ಟುಕೊಂಡು ಒಳ ಮೀಸಲಾತಿ ಮಾಡಬೇಕಿತ್ತು. ತರಾತುರಿಯಲ್ಲಿ ಸಂಜೆ 6 ಗಂಟೆಗೆ ಒಳ ಮೀಸಲಾತಿ ಬಿಲ್ ಮಂಡಿಸಿ, ಚರ್ಚೆ ಇಲ್ಲದೇ ಮಂಜೂರು ಮಾಡಿಕೊಂಡು ಓಡಿ ಹೋದುದನ್ನು ಖಂಡಿಸುವುದಾಗಿ ತಿಳಿಸಿದರು.
ಎಸ್ಇಪಿ, ಟಿಎಸ್ಪಿ ಹಣ ಅನ್ಯ ಉದ್ದೇಶಕ್ಕೆ ಬಳಸಿದರೆ ಹೋರಾಟ.
ಎಸ್ಇಪಿ, ಟಿಎಸ್ಪಿಯ 39 ಸಾವಿರ ಕೋಟಿ ಮೊತ್ತವನ್ನು ಸಿದ್ದರಾಮಯ್ಯನವರ ಸರಕಾರ ಬೇರೆ ಉದ್ದೇಶಕ್ಕೆ ಬಳಸಿದೆ ಎಂದು ಟೀಕಿಸಿದ ಅವರು, ಹೊಸ ಬಜೆಟ್ನಲ್ಲಿ ನೀಡುವ 42 ಸಾವಿರ ಕೋಟಿ ಮೊತ್ತವನ್ನು ಗ್ಯಾರಂಟಿಗಳು, ಅನ್ಯ ಉದ್ದೇಶಕ್ಕೆ ಬಳಸಬಾರದು. ಅದು ಕೇವಲ ಎಸ್ಸಿ, ಎಸ್ಟಿ ಜನಾಂಗದ ಮಕ್ಕಳ ಉದ್ಯೋಗ, ಶಿಕ್ಷಣ, ಭೂ ಒಡೆತನ, ಗಂಗಾ ಕಲ್ಯಾಣ ಸೇರಿ ಅವರ ಅಭಿವೃದ್ಧಿಗೆ ಬಳಸಬೇಕು ಎಂದು ಆಗ್ರಹಿಸಿದರು. ಗ್ಯಾರಂಟಿಗಳು, ಅನ್ಯ ಉದ್ದೇಶಕ್ಕೆ ಈ ಹಣ ಬಳಸಿದರೆ ಸರಕಾರದ ವಿರುದ್ಧ ಹೋರಾಟ ಮಾಡುವುದಾಗಿ ಎಚ್ಚರಿಸಿದರು.