ಬೆಂಗಳೂರು, ಮಾ. 14 (DaijiworldNews/TA): ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಮಾಜಿ ಸಚಿವ ಹಾಗೂ ಶಾಸಕ ಬೈರತಿ ಬಸವರಾಜ್ ಜೈಲಿನಿಂದ ಬಿಡುಗಡೆಗೊಂಡಿದ್ದಾರೆ. ನಗರದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಇಂದು ಅವರು ಹೊರಬಂದರು.

ನಿನ್ನೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಬೈರತಿ ಬಸವರಾಜ್ ಅವರಿಗೆ ಜಾಮೀನು ಮಂಜೂರು ಮಾಡಿತ್ತು. ಇದರ ಹಿನ್ನೆಲೆಯಲ್ಲಿ ಅಗತ್ಯ ಕಾನೂನು ಪ್ರಕ್ರಿಯೆಗಳು ಪೂರ್ಣಗೊಂಡ ಬಳಿಕ ಇಂದು ಬೆಳಿಗ್ಗೆ ಅವರನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿದೆ.
ಬೈರತಿ ಬಸವರಾಜ್ ಬಿಡುಗಡೆ ಸುದ್ದಿ ತಿಳಿದ ಕೂಡಲೇ ಅವರ ನೂರಾರು ಬೆಂಬಲಿಗರು ಪರಪ್ಪನ ಅಗ್ರಹಾರ ಜೈಲು ಗೇಟ್ ಬಳಿ ಜಮಾಯಿಸಿದ್ದರು. ಜೈಲಿನಿಂದ ಹೊರಬಂದ ಬಳಿಕ ಬೆಂಬಲಿಗರ ಅಭಿನಂದನೆಗಳನ್ನು ಸ್ವೀಕರಿಸಿದ ಅವರು ಕಾರಿನಲ್ಲಿ ಅಲ್ಲಿಂದ ತೆರಳಿದರು. ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣ ರಾಜ್ಯ ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದ್ದು, ಈ ಪ್ರಕರಣದ ತನಿಖೆಯನ್ನು ಪೊಲೀಸರು ಮುಂದುವರಿಸಿದ್ದಾರೆ.