ನವದೆಹಲಿ, ಮಾ. 24 (DaijiworldNews/AK): ಪರಿಶಿಷ್ಟ ಜಾತಿ ಸ್ಥಾನಮಾನದ ಕುರಿತು ಸುಪ್ರೀಂ ಕೋರ್ಟ್ ಇಂದುಐತಿಹಾಸಿಕ ತೀರ್ಪು ಪ್ರಕಟಿಸಿದೆ. ಹಿಂದೂ, ಸಿಖ್, ಬೌದ್ಧ ಧರ್ಮ ಹೊರತುಪಡಿಸಿ ಬೇರೆ ಧರ್ಮಗಳಿಗೆ ಮತಾಂತರಗೊಂಡವರು ಪರಿಶಿಷ್ಟ ಜಾತಿ ಸ್ಥಾನಮಾನ ಕಳೆದುಕೊಳ್ಳುತ್ತಾರೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಆಂಧ್ರಪ್ರದೇಶ ಹೈಕೋರ್ಟ್ 2025ರ ಮೇ ತಿಂಗಳಲ್ಲಿ ನೀಡಿದ್ದ ತೀರ್ಪನ್ನ ಪ್ರಶ್ನಿಸಿ ಪಾದ್ರಿ ಒನ್ ಚಿಂತದ ಆನಂದ್ ಎಂಬುವವರು ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಪಿ.ಕೆ ಮಿಶ್ರಾ ಮತ್ತು ಮನಮೋಹನ್ ಅವರಿದ್ದ ದ್ವಿಸದಸ್ಯ ಪೀಠವು ಈ ತೀರ್ಪು ಪ್ರಕಟಿಸಿದೆ.
ಬೇರೆ ಧರ್ಮವನ್ನ ಪ್ರತಿಪಾದಿಸುವ ಯಾರನ್ನೂ ಪರಿಶಿಷ್ಟ ಜಾತಿ ಎಂದು ಪರಿಗಣಿಸಲಾಗುವುದಿಲ್ಲ ಎಂದು ನ್ಯಾಯಪೀಠ ಹೇಳಿದೆ. ಹಿಂದೂ ಧರ್ಮ, ಸಿಖ್ ಅಥವಾ ಬೌದ್ಧ ಧರ್ಮವನ್ನ ಪ್ರತಿಪಾದಿಸುವ ಪರಿಶಿಷ್ಟ ಜಾತಿ (ಎಸ್ಸಿ) ವ್ಯಕ್ತಿಯು ಬೇರೆ ಧರ್ಮಕ್ಕೆ ಮತಾಂತರಗೊಂಡರೆ, ಅವರ ಪರಿಶಿಷ್ಟ ಜಾತಿ ಸ್ಥಾನಮಾನವನ್ನ ತಕ್ಷಣವೇ ಮತ್ತು ಸಂಪೂರ್ಣವಾಗಿ ರದ್ದುಗೊಳಿಸಲಾಗುತ್ತದೆ. 1950 ರ ಸಂವಿಧಾನ (ಪರಿಶಿಷ್ಟ ಜಾತಿಗಳು) ಆದೇಶವು ಇದನ್ನ ಸ್ಪಷ್ಟಪಡಿಸಿದೆ.
ಈ ಆದೇಶದ ಅಡಿಯಲ್ಲಿ ನಿಷೇಧವು ಸಂಪೂರ್ಣವಾಗಿ ಜಾರಿಯಲ್ಲಿದೆ. 1950 ರ ಆದೇಶದ ಷರತ್ತು 3 ರಲ್ಲಿ ನಿರ್ದಿಷ್ಟಪಡಿಸಿದ ಧರ್ಮಗಳನ್ನ ಹೊರತುಪಡಿಸಿ ಯಾವುದೇ ಧರ್ಮವನ್ನ ಅಳವಡಿಸಿಕೊಳ್ಳುವುದರಿಂದ, ಜನ್ಮ ಸ್ಥಾನಮಾನವನ್ನ ಲೆಕ್ಕಿಸದೆ, ಪರಿಶಿಷ್ಟ ಜಾತಿ ಸ್ಥಾನಮಾನವನ್ನ ತಕ್ಷಣವೇ ಆತ ಕಳೆದುಕೊಳ್ಳುತ್ತಾನೆ ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.