ಬಾರಾಮತಿ, ಏ. 09 (DaijiworldNews/AK): ಏಪ್ರಿಲ್ 23ರಂದು ನಡೆಯಲಿರುವ ಉಪಚುನಾವಣೆಯಲ್ಲಿ ಸುನೇತ್ರಾ ಪವಾರ್ ಅವರು ಅವಿರೋಧವಾಗಿ ಆಯ್ಕೆಯಾಗುವಂತೆ ಮಾಡಬೇಕೆಂದು ಮಹಾರಾಷ್ಟ್ರದ ಮುಖ್ಯಮಂತ್ರಿ ಮತ್ತು ಇತರ ಹಿರಿಯ ನಾಯಕರು ಮಾಡಿದ ಮನವಿಗಳನ್ನು ಒಪ್ಪಿಕೊಂಡಿರುವ ಮಹಾರಾಷ್ಟ್ರದ ಕಾಂಗ್ರೆಸ್ ಅಧ್ಯಕ್ಷ ಹರ್ಷವರ್ಧನ್ ಸಪ್ಕಲ್ ಅವರು ಬಾರಾಮತಿ ವಿಧಾನಸಭಾ ಉಪಚುನಾವಣೆಯಿಂದ ಪಕ್ಷವು ತನ್ನ ಅಭ್ಯರ್ಥಿಯನ್ನು ಹಿಂತೆಗೆದುಕೊಳ್ಳುವುದಾಗಿ ಘೋಷಿಸಿದ್ದಾರೆ.

ಹೀಗಾಗಿ, ಸುನೇತ್ರಾ ಪವಾರ್ ಅವರ ಎದುರಾಳಿಯಾಗಿ ಯಾವುದೇ ಸ್ಪರ್ಧಿ ಇಲ್ಲದ ಕಾರಣ ಈ ಚುನಾವಣೆಯಲ್ಲಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಏಪ್ರಿಲ್ 23ರಂದು ನಡೆಯಲಿರುವ ಬಾರಾಮತಿ ಉಪಚುನಾವಣೆಯಿಂದ ಹಿಂದೆ ಸರಿಯುವಂತೆ ಶರದ್ ಪವಾರ್ ಮತ್ತು ಸುಪ್ರಿಯಾ ಸುಳೆ ಸೇರಿದಂತೆ ಹಿರಿಯ ಎನ್ಸಿಪಿ ನಾಯಕರು ಕಾಂಗ್ರೆಸ್ಗೆ ಮನವಿ ಮಾಡಿದ್ದರು. ಇದಾದ ನಂತರ ಕಾಂಗ್ರೆಸ್ ಈ ಕ್ರಮ ಕೈಗೊಂಡಿದೆ.
ಜನವರಿಯಲ್ಲಿ ಬಾರಾಮತಿಯಲ್ಲಿ ನಡೆಯಲಿದ್ದ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನರಾದರು. ಆಗ ಅವರು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಮತ್ತು ಬಾರಾಮತಿಯ ಶಾಸಕರಾಗಿದ್ದರು. ಅದಾದ 1 ತಿಂಗಳ ನಂತರ ಅವರ ಪತ್ನಿ ಸುನೇತ್ರಾ ಅವರನ್ನು ಉಪಮುಖ್ಯಮಂತ್ರಿಯಾಗಿ ನೇಮಿಸಲಾಯಿತು.ಆದರೆ, ಅವರು ಶಾಸಕಿಯಾಗಿ ಆಯ್ಕೆಯಾಗಬೇಕಾಗಿದ್ದರಿಂದ ಈ ಬಾರಿ ಉಪಚುನಾವಣೆಯಲ್ಲಿ ಅವರನ್ನು ಕಣಕ್ಕಿಳಿಸಲಾಗಿತ್ತು. ಅಜಿತ್ ಪವಾರ್ ಅವರ ಗೌರವಾರ್ಥವಾಗಿ ಕಾಂಗ್ರೆಸ್ ತನ್ನ ಪಕ್ಷ ಅಭ್ಯರ್ಥಿಯನ್ನು ಹಿಂಪಡೆಯುವ ಮೂಲಕ ಸುನೇತ್ರಾ ಪವಾರ್ ಅವಿರೋಧವಾಗಿ ಆಯ್ಕೆಯಾಗುವಂತೆ ಮಾಡಿದೆ.
ನಾಮಪತ್ರ ಹಿಂತೆಗೆದುಕೊಳ್ಳಲು ಕೊನೆಯ ದಿನಾಂಕವಾದ ಇಂದು (ಗುರುವಾರ) ಮಹಾರಾಷ್ಟ್ರದ ಕಾಂಗ್ರೆಸ್ ಮುಖ್ಯಸ್ಥ ಹರ್ಷವರ್ಧನ್ ಸಪ್ಕಲ್ ಪಕ್ಷದ ಅಭ್ಯರ್ಥಿ ಅಮರ್ ಮೋರೆ ಅವರು ಚುನಾವಣೆಯಿಂದ ಹಿಂದೆ ಸರಿಯುತ್ತಾರೆ ಎಂದು ಘೋಷಿಸಿದರು.