ನವದೆಹಲಿ, ಏ. 11 (DaijiworldNews/TA) : ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಹತ್ಯೆಗೆ ಸಂಚು ರೂಪಿಸಲಾಗಿದೆ ಎಂಬ ಗಂಭೀರ ಆರೋಪದ ಮೇಲೆ ಬಿಹಾರದಲ್ಲಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮೇರಿಕಾದ ಕೇಂದ್ರ ಗುಪ್ತಚರ ಸಂಸ್ಥೆ (ಸಿಐಎ) ನೀಡಿದ ಮಾಹಿತಿಯೇ ಪ್ರಮುಖ ಸುಳಿವಾಗಿದೆ ಎಂದು ತಿಳಿದುಬಂದಿದೆ.

ಬಂಧಿತರಲ್ಲಿ ಅಮನ್ ತಿವಾರಿ ಪ್ರಮುಖ ಆರೋಪಿಯಾಗಿದ್ದು, ಬಕ್ಸಾರ್ ಜಿಲ್ಲೆಯ ಇನ್ನಿಬ್ಬರು ಸಹಚರರೊಂದಿಗೆ ಅವರನ್ನು ವಶಕ್ಕೆ ಪಡೆಯಲಾಗಿದೆ. ಪೊಲೀಸರ ಪ್ರಕಾರ, ಅಮನ್ ತಿವಾರಿ ಸಿಐಎಗೆ ದೊಡ್ಡ ಮೊತ್ತದ ಹಣವನ್ನು ಕೋರಿ ಸಂದೇಶ ಕಳುಹಿಸಿದ್ದಾನೆ. ಅದಕ್ಕೆ ಪ್ರತಿಯಾಗಿ ಪ್ರಧಾನಿ ಮೋದಿ ಮೇಲೆ ದಾಳಿ ನಡೆಸಲು 22 ದಿನಗಳ ಕಾಲಾವಕಾಶ ಕೋರಿದ್ದಾನೆ ಎಂಬ ಆರೋಪ ಕೇಳಿಬಂದಿದೆ.
ಈ ಬೆದರಿಕೆ ಸಂದೇಶವನ್ನು ಗಂಭೀರವಾಗಿ ಪರಿಗಣಿಸಿದ ಸಿಐಎ, ರಾಜತಾಂತ್ರಿಕ ಮಾರ್ಗಗಳ ಮೂಲಕ ಭಾರತೀಯ ಅಧಿಕಾರಿಗಳಿಗೆ ಮಾಹಿತಿ ನೀಡಿದೆ. ಸಂದೇಶ ಕಳುಹಿಸಲು ಬಳಸಿದ ಐಪಿ ವಿಳಾಸದ ವಿವರಗಳನ್ನು ಕೂಡ ಹಂಚಿಕೊಳ್ಳಲಾಗಿದೆ. ಈ ಸುಳಿವಿನ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ಬಿಹಾರ ಪೊಲೀಸರು ಆರೋಪಿಗಳನ್ನು ಪತ್ತೆಹಚ್ಚಿ ಬಂಧಿಸಿದ್ದಾರೆ.
ಬಕ್ಸಾರ್ ಜಿಲ್ಲೆಯ ಸಿಮ್ರಿ ಪೊಲೀಸ್ ಠಾಣೆ ವ್ಯಾಪ್ತಿಯ ಆಶಾ ಪರಾರಿ ಗ್ರಾಮದಲ್ಲಿ ನಡೆದ ದಾಳಿಯಲ್ಲಿ ಅಮನ್ ತಿವಾರಿ ಹಾಗೂ ಇಬ್ಬರು ಸಹಚರರನ್ನು ತಡರಾತ್ರಿ ಬಂಧಿಸಲಾಗಿದೆ. ಆರೋಪಿಗಳು ಪ್ರಧಾನ ಮಂತ್ರಿ ಕಚೇರಿಯಿಂದ ಗೌಪ್ಯ ಮಾಹಿತಿಯನ್ನು ಪಡೆಯಲು ಪ್ರಯತ್ನಿಸಿದ್ದು, ವಿದೇಶಿ ಗುಪ್ತಚರ ಸಂಸ್ಥೆಗಳೊಂದಿಗೆ ಸಂಪರ್ಕ ಹೊಂದಿದ್ದರು ಎಂಬ ಶಂಕೆ ವ್ಯಕ್ತವಾಗಿದೆ.
ಪ್ರಸ್ತುತ ಆರೋಪಿಗಳನ್ನು ಸುರಕ್ಷಿತ ಸ್ಥಳದಲ್ಲಿ ಇರಿಸಿ ಪೊಲೀಸರು ಹಾಗೂ ಕೇಂದ್ರ ಸಂಸ್ಥೆಗಳು ತೀವ್ರ ವಿಚಾರಣೆ ನಡೆಸುತ್ತಿವೆ. ಈ ಘಟನೆ ದೇಶದ ಭದ್ರತಾ ವ್ಯವಸ್ಥೆಯ ದೃಷ್ಟಿಯಿಂದ ಅತ್ಯಂತ ಗಂಭೀರವಾಗಿ ಪರಿಗಣಿಸಲಾಗಿದೆ.