ನವದೆಹಲಿ, ಏ. 23 (DaijiworldNews/TA): ತಮಿಳುನಾಡಿನ ಚೆನ್ನೈ ನಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು “ಭಯೋತ್ಪಾದಕ” ಎಂದು ಕರೆಯಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ, ಚುನಾವಣಾ ಆಯೋಗ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ನೋಟಿಸ್ ಜಾರಿ ಮಾಡಿದೆ.

ಚುನಾವಣಾ ಆಯೋಗವು 24 ಗಂಟೆಗಳೊಳಗೆ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡುವಂತೆ ಸೂಚಿಸಿದೆ. ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ನೇತೃತ್ವದ ಬಿಜೆಪಿ ನಿಯೋಗ ನೀಡಿದ ದೂರಿನ ಆಧಾರದಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಆರೋಪದ ಪ್ರಕಾರ, ಖರ್ಗೆ ಅವರ ಹೇಳಿಕೆ ಮಾದರಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗಿದೆ.
ಪ್ರಚಾರದ ವೇಳೆ ಖರ್ಗೆ ಅವರು ಡಿಎಂಕೆ-ಎಐಎಡಿಎಂಕೆ ಮೈತ್ರಿ ಕುರಿತು ಮಾತನಾಡುತ್ತಾ, ಪ್ರಧಾನಿ ಮೋದಿಯವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಅವರು “ಅವರು ಒಬ್ಬ ಭಯೋತ್ಪಾದಕ” ಎಂದು ಹೇಳಿದ್ದಾರೆ ಎಂಬುದು ವಿವಾದಕ್ಕೆ ಕಾರಣವಾಗಿದೆ. ಆದರೆ ನಂತರ ಸ್ಪಷ್ಟನೆ ನೀಡಿದ ಖರ್ಗೆ, ತಮ್ಮ ಮಾತು ಶಬ್ದಶಃ ಅರ್ಥದಲ್ಲಿ ಅಲ್ಲ ಎಂದು ಹೇಳಿದ್ದಾರೆ. “ನಾನು ಅವರನ್ನು ನೇರವಾಗಿ ಭಯೋತ್ಪಾದಕ ಎಂದು ಹೇಳಿಲ್ಲ. ಇಡಿ, ಸಿಬಿಐ, ಐಟಿ ಸಂಸ್ಥೆಗಳ ಮೂಲಕ ರಾಜಕೀಯ ವಿರೋಧಿಗಳನ್ನು ಬೆದರಿಸುತ್ತಿದ್ದಾರೆ ಎಂಬ ಅರ್ಥದಲ್ಲಿ ಹೇಳಿದ್ದೇನೆ” ಎಂದು ಅವರು ಸಮರ್ಥಿಸಿಕೊಂಡಿದ್ದಾರೆ.
ಈ ಮೊದಲೇ 2023ರ ಕರ್ನಾಟಕ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಮೋದಿ ಅವರನ್ನು “ವಿಷದ ಹಾವು” ಎಂದು ಕರೆದಿದ್ದಕ್ಕಾಗಿ ಖರ್ಗೆಗೆ ಚುನಾವಣಾ ಆಯೋಗ ನೋಟಿಸ್ ನೀಡಿತ್ತು. ಅವರ ಪುತ್ರ ಪ್ರಿಯಾಂಕ್ ಖರ್ಗೆ ಅವರಿಗೂ ಹಿಂದಿನ ಹೇಳಿಕೆಗಳ ಹಿನ್ನೆಲೆಯಲ್ಲಿ ನೋಟಿಸ್ ಜಾರಿಯಾಗಿತ್ತು. ಹರಿಯಾಣ ಚುನಾವಣೆಯ ವೇಳೆ ಇವಿಎಂ ಅಕ್ರಮ ಆರೋಪಗಳ ಕುರಿತು ಕಾಂಗ್ರೆಸ್ ಮಾಡಿದ ಹೇಳಿಕೆಗಳ ಬಗ್ಗೆ ಕೂಡ ಆಯೋಗವು ಖರ್ಗೆಗೆ ಎಚ್ಚರಿಕೆ ನೀಡಿತ್ತು ಎಂದು ತಿಳಿದುಬಂದಿದೆ.