ಬೆಂಗಳೂರು, ಏ. 28 (DaijiworldNews/AA): ಎಸ್ಎಸ್ಎಲ್ಸಿ ಪರೀಕ್ಷೆ- 2ನ್ನು ತೆಗೆದುಕೊಳ್ಳುವ ವಿದ್ಯಾರ್ಥಿಗಳಿಗೆ ಶುಲ್ಕ ಸರ್ಕಾರವೇ ಭರಿಸಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದಾರೆ.

"ಪರೀಕ್ಷೆ 1 ರಲ್ಲಿ 45,415 ವಿದ್ಯಾರ್ಥಿಗಳು ಫೇಲ್ ಆಗಿದ್ದಾರೆ. 1 ವಿಷಯದಲ್ಲಿ 20,691 ವಿದ್ಯಾರ್ಥಿಗಳು, 2 ವಿಷಯದಲ್ಲಿ 10,509 ವಿದ್ಯಾರ್ಥಿಗಳು, 3 ವಿಷಯದಲ್ಲಿ 6,103 ವಿದ್ಯಾರ್ಥಿಗಳು, 4 ವಿಷಯದಲ್ಲಿ 3,799 ವಿದ್ಯಾರ್ಥಿಗಳು, 5 ವಿಷಯದಲ್ಲಿ 2,552 ವಿದ್ಯಾರ್ಥಿಗಳು, ಎಲ್ಲಾ ವಿಷಯದಲ್ಲಿ 1,716 ವಿದ್ಯಾರ್ಥಿಗಳು ಫೇಲ್ ಆಗಿದ್ದಾರೆ" ಎಂದು ತಿಳಿಸಿದ್ದಾರೆ.
"ಪ್ರತಿಯೊಬ್ಬ ವಿದ್ಯಾರ್ಥಿಯ ಶೈಕ್ಷಣಿಕ ಭವಿಷ್ಯವನ್ನು ಉಜ್ಜಲಗೊಳಿಸುವುದು ಸರ್ಕಾರ, ಶಿಕ್ಷಣ ಇಲಾಖೆ ಹಾಗೂ ನಮ್ಮೆಲ್ಲರ ಹೊಣೆಯಾಗಿದೆ. ಪರೀಕ್ಷೆಯ ಫಲಿತಾಂಶದಿಂದಾಗಿ ಯಾವುದೇ ವಿದ್ಯಾರ್ಥಿಯು ನಿರಾಸೆಗೊಂಡು ತನ್ನ ಶಿಕ್ಷಣವನ್ನು ಮೊಟಕುಗೊಳಿಸಬಾರದು ಎಂಬುದು ನನ್ನ ಹಾಗೂ ಸರ್ಕಾರದ ದೃಢವಾದ ಆಶಯವಾಗಿದೆ" ಎಂದರು.
"ಈ ಹಿನ್ನೆಲೆಯಲ್ಲಿ, ಅನುತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳನ್ನು ಮುಂಬರುವ ಪರೀಕ್ಷೆ-2 ಕ್ಕೆ ಕಡ್ಡಾಯವಾಗಿ ನೋಂದಾಯಿಸಿ, ಅವರನ್ನು ಶೈಕ್ಷಣಿಕವಾಗಿ ಸಜ್ಜುಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಇಲಾಖೆಯ ಉಪ ನಿರ್ದೇಶಕರುಗಳಿಗೆ ಈಗಾಗಲೇ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ" ಎಂದು ಹೇಳಿದರು.
"ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ಯಾವುದೇ ರೀತಿಯ ಆರ್ಥಿಕ ಹೊರೆಯಾಗಬಾರದು ಎಂಬ ಸಮದ್ದೇಶದಿಂದ ಕಳೆದ ವರ್ಷದಂತೆಯೇ ಈ ಬಾರಿಯೂ ಪರೀಕ್ಷಾ ಶುಲ್ಕವನ್ನು ಸರ್ಕಾರವೇ ಭರಿಸಲಿದೆ. ಇದರ ಜೊತೆಗೆ, ತಾವು ಪಡೆದಿರುವ ಫಲಿತಾಂಶವನ್ನು ಮತ್ತಷ್ಟು ಉತ್ತಮಪಡಿಸಿಕೊಳ್ಳಲು ಇಚ್ಛಿಸುವ ವಿದ್ಯಾರ್ಥಿಗಳಿಗೂ ಈ 2ನೇ ಪರೀಕ್ಷೆಗೆ ಹಾಜರಾಗಲು ಮುಕ್ತ ಅವಕಾಶ ಕಲ್ಪಿಸಲಾಗಿದೆ. ಯಾವುದೇ ವಿದ್ಯಾರ್ಥಿಯು ಮಾಹಿತಿಯ ಕೊರತೆಯಿಂದ ಶಿಕ್ಷಣದಿಂದ ವಂಚಿತರಾಗಬಾರದು" ಎಂದು ತಿಳಿಸಿದರು.