ಬೆಂಗಳೂರು, ಏ. 30 (DaijiworldNews/AK): ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲಿ ಬಿಜೆಪಿ ಸರಕಾರ ರಚನೆ ಆಗುವುದು ಖಚಿತ ಎಂದು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇಂದು ಇಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಅವರು ಮಾತನಾಡಿದರು. ಬಂಗಾಳದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮೇಲೆ ಜನತೆ ವಿಶ್ವಾಸ ಇಟ್ಟಿದ್ದಾರೆ. ಅಸ್ಸಾಂನಲ್ಲಿ ಜನತೆ ಮೂರನೇ ಬಾರಿ ಸೇವೆ ಮಾಡುವ ಅವಕಾಶ ನೀಡಲಿದ್ದಾರೆ ಎಂದು ತಿಳಿಸಿದರು. ಬಂಗಾಳದಲ್ಲಿ ಈ ಬಾರಿ ರಾಷ್ಟ್ರವಾದಿಗಳ ಸರಕಾರ ರಚನೆ ಆಗಲಿದೆ ಎಂದು ನುಡಿದರು.
ಪಾಂಡಿಚೇರಿಯಲ್ಲಿ ಎನ್ಡಿಎ ಸರಕಾರ ಬರಲಿದೆ. ತಮಿಳುನಾಡಿನಲ್ಲಿ ಒಳ್ಳೆಯದೇ ಆಗಲಿದೆ. ಕೇರಳದಲ್ಲಿ ಬಿಜೆಪಿ ಪ್ರಮುಖ ಶಕ್ತಿಯಾಗಿ ಹೊರಹೊಮ್ಮುತ್ತದೆ ಎಂದು ವಿವರಿಸಿದರು.
ಬೆಂಗಳೂರಿನಲ್ಲಿ ನಿನ್ನೆ ಸಂಜೆ ಸುರಿದ ಭಾರಿ ಮಳೆಯಿಂದ ಶಿವಾಜಿನಗರದಲ್ಲಿರುವ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಬಿದ್ದ ಪರಿಣಾಮ ಹಲವರು ದುರ್ಮರಣಕ್ಕೀಡಾದ ಸುದ್ದಿ ಕೇಳಿ ತೀವ್ರ ಆಘಾತವಾಗಿದೆ ಎಂದು ಅವರು ಪ್ರಶ್ನೆಗೆ ಉತ್ತರಿಸಿದರು. ಮೃತರ ಕುಟುಂಬಗಳಿಗೆ ತೀವ್ರ ಸಂತಾಪ ಸೂಚಿಸುವುದಾಗಿ ಹೇಳಿದರು.