ಪುಣೆ, ಜೂ. 16 (DaijiworldNews/TA): ಪುಣೆ ಅಪರಾಧ ವಿಭಾಗದ ಪೊಲೀಸರು ಕಾರ್ಯಾಚರಣೆ ನಡೆಸಿ, ಪೊಲೀಸ್ ತಂಡದ ಮೇಲೆಯೇ ಗುಂಡು ಹಾರಿಸಿ ಪರಾರಿಯಾಗಿದ್ದ ಕುಖ್ಯಾತ ಕಳ್ಳನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತನನ್ನು ಶೇಖರ್ ಸಂಭಾಜಿ ಜಾಧವ್ (25) ಎಂದು ಗುರುತಿಸಲಾಗಿದ್ದು, ಆತ ಪುಣೆಯ ಶಿಕ್ರಾಪುರ ಮೂಲದವನಾಗಿದ್ದಾನೆ.

ಪೊಲೀಸರ ಮಾಹಿತಿ ಪ್ರಕಾರ, ಶೇಖರ್ ವಿರುದ್ಧ 70ಕ್ಕೂ ಹೆಚ್ಚು ಕಳ್ಳತನ ಹಾಗೂ ದರೋಡೆ ಪ್ರಕರಣಗಳು ದಾಖಲಾಗಿವೆ. ಇತ್ತೀಚೆಗೆ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಆತ ಮತ್ತೆ ಅಪರಾಧ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದ ಎನ್ನಲಾಗಿದೆ. ಮೇ 13ರಂದು ಚಾರ್ಹೋಲಾ ಪ್ರದೇಶದಲ್ಲಿ ನಡೆದ ವಾಗ್ವಾದದ ಬಳಿಕ ಶೇಖರ್ ಹಾಗೂ ಆತನ ಸಹಚರರು ಒಬ್ಬ ವ್ಯಕ್ತಿಯ ಮೇಲೆ ಗುಂಡು ಹಾರಿಸಿದ್ದರು. ಈ ಸಂಬಂಧ ದಿಘಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ವಿಶೇಷ ಕಾರ್ಯಾಚರಣೆ ಆರಂಭಿಸಿದ್ದರು.
ತನಿಖೆ ವೇಳೆ ಮೇ 16ರಂದು ಶೇಖರ್ ತನ್ನ ಸಹಚರ ಮುಸ್ತಫಾ ಜೊತೆ ರಂಜನ್ಗಾಂವ್ ಪ್ರದೇಶದಲ್ಲಿ ಅಡಗಿಕೊಂಡಿರುವ ಮಾಹಿತಿ ಪೊಲೀಸರಿಗೆ ಲಭಿಸಿತು. ಆರೋಪಿಗಳನ್ನು ಬೆನ್ನಟ್ಟಿದ ಪೊಲೀಸ್ ತಂಡದಿಂದ ತಪ್ಪಿಸಿಕೊಳ್ಳಲು ಇಬ್ಬರೂ ಬೈಕ್ ಬಿಟ್ಟು ಸಮೀಪದ ಕಬ್ಬಿನ ಗದ್ದೆಗೆ ಓಡಿಹೋಗಿದ್ದರು. ಈ ವೇಳೆ ಶೇಖರ್ ಪೊಲೀಸರ ಮೇಲೆಯೇ ಎರಡು ಸುತ್ತು ಗುಂಡು ಹಾರಿಸಿದ್ದಾನೆ. ಪ್ರತಿಯಾಗಿ ಪೊಲೀಸರು ನಾಲ್ಕು ಸುತ್ತು ಗುಂಡು ಹಾರಿಸಿದರೂ ಆರೋಪಿಗಳು ಅಲ್ಲಿಂದ ಪರಾರಿಯಾಗಿದ್ದರು.
ಪೊಲೀಸರ ಮೇಲೆ ದಾಳಿ ನಡೆಸಿದ ಪ್ರಕರಣದ ನಂತರ ಶೇಖರ್ಗಾಗಿ ವ್ಯಾಪಕ ಶೋಧ ಕಾರ್ಯಾಚರಣೆ ನಡೆಸಲಾಗಿತ್ತು. ಲಾತೂರ್, ಹಿಂಗೋಲಿ ಸೇರಿದಂತೆ ಹಲವು ಪ್ರದೇಶಗಳಲ್ಲಿ ಹುಡುಕಾಟ ಮುಂದುವರಿದಿತ್ತು. ಕೊನೆಗೆ ಭಾನುವಾರ ಸಂಜೆ ಆತ ದಿಘಿ ಪ್ರದೇಶಕ್ಕೆ ಬರುತ್ತಿದ್ದಾನೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ದೊರೆಯಿತು. ಈ ಮಾಹಿತಿಯ ಆಧಾರದ ಮೇಲೆ ಪೊಲೀಸರು ಕಾರ್ಯತಂತ್ರ ರೂಪಿಸಿ ಬಲೆ ಬೀಸಿದ್ದರು. ಆರೋಪಿಯ ಚಲನವಲನಗಳನ್ನು ನಿಗಾ ವಹಿಸಿ, ಸೂಕ್ತ ಸಮಯದಲ್ಲಿ ಕಾರ್ಯಾಚರಣೆ ನಡೆಸಿ ಆತನನ್ನು ಬಂಧಿಸಿದರು.
ಬಂಧನದ ವೇಳೆ ಶೇಖರ್ ಬಳಿಯಿಂದ ಅಕ್ರಮ ದೇಶೀಯ ನಿರ್ಮಿತ ಪಿಸ್ತೂಲ್ ಹಾಗೂ ಜೀವಂತ ಕಾರ್ಟ್ರಿಡ್ಜ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಆಯುಧ ಹೊಂದಿದ್ದ ಆರೋಪದಡಿ ಮತ್ತೊಂದು ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಬಳಿಕ ಒಂದು ದಿನದ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ವಶಪಡಿಸಿಕೊಂಡಿರುವ ಅಕ್ರಮ ಆಯುಧ ಎಲ್ಲಿಂದ ಬಂದಿದೆ ಮತ್ತು ಇದರ ಹಿಂದೆ ಇನ್ನಾರಾದರೂ ಇದ್ದಾರೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.