ರಾಜಸ್ಥಾನ, ಜೂ. 17 (DaijiworldNews/TA): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ‘ಛಾತ್ರೋಂ ಕಿ ಗುಂಜ್’ ರ್ಯಾಲಿಗೆ ಒಂದು ದಿನ ಬಾಕಿ ಇರುವಾಗ ರಾಜಸ್ಥಾನದಲ್ಲಿ ಹೊಸ ರಾಜಕೀಯ ವಿವಾದ ಭುಗಿಲೆದ್ದಿದೆ. ರ್ಯಾಲಿಯ ಪ್ರಚಾರಕ್ಕಾಗಿ ಅಳವಡಿಸಿದ್ದ ಪೋಸ್ಟರ್ಗಳು ಮತ್ತು ಹೋರ್ಡಿಂಗ್ಗಳನ್ನು ರಾಜ್ಯ ಸರ್ಕಾರದ ಅಧಿಕಾರಿಗಳು ತೆರವುಗೊಳಿಸುತ್ತಿದ್ದು, ವಿದ್ಯಾರ್ಥಿಗಳ ಭಾಗವಹಿಸುವಿಕೆಯನ್ನು ತಡೆಯಲು ಒತ್ತಡ ಹೇರುತ್ತಿದ್ದಾರೆ ಎಂದು ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ. ಆದರೆ ಈ ಆರೋಪಗಳನ್ನು ಬಿಜೆಪಿ ಸಂಪೂರ್ಣವಾಗಿ ತಳ್ಳಿಹಾಕಿದ್ದು, ಕಾಂಗ್ರೆಸ್ ರಾಜಕೀಯ ಲಾಭಕ್ಕಾಗಿ ಆಧಾರರಹಿತ ಆರೋಪಗಳನ್ನು ಮಾಡುತ್ತಿದೆ ಎಂದು ಪ್ರತಿಕ್ರಿಯಿಸಿದೆ.

ರಾಹುಲ್ ಗಾಂಧಿ ಅವರ ಬುಧವಾರದ ಕಾರ್ಯಕ್ರಮದ ಪ್ರಚಾರಕ್ಕಾಗಿ ಅಳವಡಿಸಲಾಗಿದ್ದ ಬ್ಯಾನರ್ಗಳು ಮತ್ತು ಹೋರ್ಡಿಂಗ್ಗಳನ್ನು ಅಧಿಕಾರಿಗಳು ತೆರವುಗೊಳಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ಅಲ್ಲದೆ, ಕೋಚಿಂಗ್ ಸಂಸ್ಥೆಗಳು, ಪಿಜಿ ನಿರ್ವಾಹಕರು ಮತ್ತು ಅತಿಥಿ ಗೃಹಗಳ ಮಾಲೀಕರ ಮೇಲೆ ವಿದ್ಯಾರ್ಥಿಗಳು ರ್ಯಾಲಿಯಲ್ಲಿ ಭಾಗವಹಿಸದಂತೆ ಒತ್ತಡ ಹೇರಲಾಗುತ್ತಿದೆ ಎಂದು ಪಕ್ಷ ಹೇಳಿದೆ. ರಾಜಸ್ಥಾನ ಕಾಂಗ್ರೆಸ್ ಅಧ್ಯಕ್ಷ ಗೋವಿಂದ್ ಸಿಂಗ್ ದೋತಾಸ್ರಾ ಮಾತನಾಡಿ, ಕಾರ್ಯಕ್ರಮಕ್ಕೆ ಸಿಗುತ್ತಿರುವ ಜನಬೆಂಬಲದಿಂದ ಬಿಜೆಪಿ ಆತಂಕಕ್ಕೊಳಗಾಗಿದೆ. ಅದಕ್ಕಾಗಿ ರ್ಯಾಲೆಯನ್ನು ಅಡ್ಡಿಪಡಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಆರೋಪಿಸಿದರು.
"ಯಾವುದೇ ಅಡೆತಡೆ ಬಂದರೂ ಕಾರ್ಯಕ್ರಮ ನಿಗದಿಯಂತೆ ನಡೆಯಲಿದೆ. ರಾಹುಲ್ ಗಾಂಧಿ ರೈಲಿನಲ್ಲಿ ಬರಲಿ ಅಥವಾ ಚಾರ್ಟರ್ ವಿಮಾನದಲ್ಲಿ ಬರಲಿ, ರ್ಯಾಲಿ ಯಶಸ್ವಿಯಾಗಿ ನಡೆಯಲಿದೆ" ಎಂದು ಅವರು ಹೇಳಿದರು. ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಕೂಡ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಪ್ರಶ್ನೆಪತ್ರಿಕೆ ಸೋರಿಕೆ, ನೇಮಕಾತಿ ಪರೀಕ್ಷೆಗಳ ಅಕ್ರಮಗಳು ಮತ್ತು ನಿರುದ್ಯೋಗದಂತಹ ಸಮಸ್ಯೆಗಳಿಂದ ಯುವಜನರು ಈಗಾಗಲೇ ಸಂಕಷ್ಟದಲ್ಲಿದ್ದಾರೆ. ಇಂತಹ ಸಂದರ್ಭದಲ್ಲಿ ವಿದ್ಯಾರ್ಥಿಗಳ ಧ್ವನಿಯನ್ನು ಎತ್ತಲು ಆಯೋಜಿಸಿರುವ ಕಾರ್ಯಕ್ರಮವನ್ನು ಅಡ್ಡಿಪಡಿಸುವುದು ಪ್ರಜಾಪ್ರಭುತ್ವಕ್ಕೆ ಒಳ್ಳೆಯ ಬೆಳವಣಿಗೆಯಲ್ಲ ಎಂದು ಹೇಳಿದರು. ರಾಹುಲ್ ಗಾಂಧಿ ಅವರ ಭೇಟಿಯ ಸುತ್ತ ಅನಗತ್ಯ ವಿವಾದ ಸೃಷ್ಟಿಸಲಾಗುತ್ತಿದೆ ಎಂದು ಅವರು ಆರೋಪಿಸಿದರು.
ಭಾರತದ ಕೋಚಿಂಗ್ ಹಬ್ ಎಂದೇ ಖ್ಯಾತಿ ಪಡೆದಿರುವ ಕೋಟಾದಲ್ಲಿ ನಡೆಯಲಿರುವ ಈ ರ್ಯಾಲಿಯಲ್ಲಿ ರಾಹುಲ್ ಗಾಂಧಿ ಪ್ರಶ್ನೆಪತ್ರಿಕೆ ಸೋರಿಕೆ, ನೇಮಕಾತಿ ಪರೀಕ್ಷೆಗಳ ಅಕ್ರಮ, ನಿರುದ್ಯೋಗ ಮತ್ತು ಶಿಕ್ಷಣ ವೆಚ್ಚ ಏರಿಕೆ ಸೇರಿದಂತೆ ವಿದ್ಯಾರ್ಥಿಗಳನ್ನು ಕಾಡುತ್ತಿರುವ ಹಲವು ವಿಷಯಗಳನ್ನು ಪ್ರಸ್ತಾಪಿಸಲಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಸಂದೇಶದಲ್ಲಿ, ಕೇಂದ್ರ ಸರ್ಕಾರ ಯುವಜನರ ನಿರೀಕ್ಷೆಗಳನ್ನು ಈಡೇರಿಸಲು ವಿಫಲವಾಗಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಕಾಂಗ್ರೆಸ್ ಆರೋಪಗಳಿಗೆ ಪ್ರತಿಕ್ರಿಯಿಸಿರುವ ಬಿಜೆಪಿ ನಾಯಕ ರಾಜೇಂದ್ರ ರಾಥೋಡ್, ಪೋಸ್ಟರ್ ತೆರವು ಮತ್ತು ಬೆದರಿಕೆ ಆರೋಪಗಳಿಗೆ ಕಾಂಗ್ರೆಸ್ ಯಾವುದೇ ಪುರಾವೆ ಒದಗಿಸಿಲ್ಲ ಎಂದು ಹೇಳಿದ್ದಾರೆ. "ಇದು ಸಂಪೂರ್ಣ ರಾಜಕೀಯ ಪ್ರೇರಿತ ಆರೋಪ. ಗಮನ ಸೆಳೆಯುವ ಉದ್ದೇಶದಿಂದ ಕಾಂಗ್ರೆಸ್ ಇಂತಹ ಹೇಳಿಕೆಗಳನ್ನು ನೀಡುತ್ತಿದೆ" ಎಂದು ಅವರು ಹೇಳಿದ್ದಾರೆ. ಇದೇ ವೇಳೆ, ಲೋಕಸಭಾ ಸ್ಪೀಕರ್ ಹಾಗೂ ಕೋಟಾ ಸಂಸದ ಓಂ ಬಿರ್ಲಾ ಅವರನ್ನು ವಿವಾದಕ್ಕೆ ಎಳೆಯುವ ಪ್ರಯತ್ನವನ್ನೂ ಬಿಜೆಪಿ ಖಂಡಿಸಿದೆ. ಅಧಿಕಾರಿಗಳ ಪ್ರಕಾರ, ಕೆಲವು ಹೋರ್ಡಿಂಗ್ಗಳು ಮತ್ತು ಬ್ಯಾನರ್ಗಳನ್ನು ಅಗತ್ಯ ಅನುಮತಿ ಪಡೆಯದೇ ಅಳವಡಿಸಲಾಗಿತ್ತು. ನಿಯಮ ಉಲ್ಲಂಘನೆಯ ಹಿನ್ನೆಲೆಯಲ್ಲಿ ಅವುಗಳನ್ನು ತೆರವುಗೊಳಿಸಲಾಗಿದೆ ಎಂದು ತಿಳಿಸಲಾಗಿದೆ.
ಮೂಲತಃ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಚರ್ಚಿಸಲು ಆಯೋಜಿಸಲಾಗಿದ್ದ ‘ಛಾತ್ರೋಂ ಕಿ ಗುಂಜ್’ ರ್ಯಾಲಿ ಇದೀಗ ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ರಾಜಕೀಯ ವಾಗ್ವಾದದ ಕೇಂದ್ರಬಿಂದುವಾಗಿದೆ. ರಾಹುಲ್ ಗಾಂಧಿ ಕೋಟಾಗೆ ಆಗಮಿಸುವ ಮುನ್ನವೇ ಪೋಸ್ಟರ್ಗಳು, ಅನುಮತಿಗಳು ಮತ್ತು ರಾಜಕೀಯ ಸಂದೇಶಗಳ ಸುತ್ತ ಚರ್ಚೆ ತೀವ್ರಗೊಂಡಿದೆ. ಯುವಜನರ ಸಮಸ್ಯೆಗಳನ್ನು ರಾಷ್ಟ್ರಮಟ್ಟದಲ್ಲಿ ಎತ್ತಿಹಿಡಿಯುವ ಉದ್ದೇಶದಿಂದ ನಡೆಯುತ್ತಿರುವ ಈ ಕಾರ್ಯಕ್ರಮ ರಾಜಸ್ಥಾನದ ರಾಜಕೀಯ ವಾತಾವರಣವನ್ನು ಮತ್ತಷ್ಟು ಕಾವೇರಿಸಿದೆ.