ಪಾಟ್ನಾ, ಜು. 30 (DaijiworldNews/TA): ಪಾಟ್ನಾ ಸಮೀಪದ ಭಕ್ತಿಯಾರ್ಪುರದಲ್ಲಿ ಹಾಡಹಗಲೇ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಯುವಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಾಜಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ನಿವಾಸದ ಎದುರೇ ಹಾಗೂ ಭಕ್ತಿಯಾರ್ಪುರ ಪೊಲೀಸ್ ಠಾಣೆಯಿಂದ ಕೇವಲ 50 ಮೀಟರ್ ದೂರದಲ್ಲಿ ಈ ಘಟನೆ ನಡೆದಿರುವುದು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ಕುರಿತು ಮತ್ತೆ ಪ್ರಶ್ನೆಗಳನ್ನು ಎಬ್ಬಿಸಿದೆ.

ದಾನಾಪುರದ ದೇದಾರ್ ಗ್ರಾಮದ ನಿವಾಸಿಗಳಾದ ವಿಶಾಲ್ ಕುಮಾರ್ ಮತ್ತು ಅಭಿಷೇಕ್ ಕುಮಾರ್ ಗಂಗಾ ಘಾಟ್ನಲ್ಲಿ ಆರತಿ ಮುಗಿಸಿ ಬೈಕ್ನಲ್ಲಿ ಮನೆಗೆ ಮರಳುತ್ತಿದ್ದ ವೇಳೆ, ನಿತೀಶ್ ಕುಮಾರ್ ನಿವಾಸದ ಸಮೀಪ ಕಾಯುತ್ತಿದ್ದ ಅಪರಿಚಿತ ದುಷ್ಕರ್ಮಿಗಳು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ದಾಳಿಯಲ್ಲಿ ವಿಶಾಲ್ ಕುಮಾರ್ ಅವರ ಬೆನ್ನಿಗೆ ಹಾಗೂ ಅಭಿಷೇಕ್ ಕುಮಾರ್ ಅವರ ಹೊಟ್ಟೆಗೆ ಗುಂಡು ತಗುಲಿದ್ದು, ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದಾರೆ. ರಕ್ತಸ್ರಾವವಾಗುತ್ತಿದ್ದರೂ ಧೈರ್ಯ ಕಳೆದುಕೊಳ್ಳದ ಅವರು ಸಮೀಪದ ಸಮುದಾಯ ಆರೋಗ್ಯ ಕೇಂದ್ರಕ್ಕೆ ತಲುಪಿದ್ದಾರೆ. ಬಳಿಕ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಇಬ್ಬರನ್ನೂ ಪಾಟ್ನಾ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ನಡೆದ ತಕ್ಷಣ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಸ್ಥಳದಿಂದ ಒಂದು ಖಾಲಿ ಕಾರ್ಟ್ರಿಡ್ಜ್ ಹಾಗೂ ಎರಡು ಜೀವಂತ ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದ್ದು, ಆರೋಪಿಗಳ ಪತ್ತೆಗಾಗಿ ವಿಶೇಷ ತಂಡಗಳನ್ನು ರಚಿಸಲಾಗಿದೆ. ಮಾಜಿ ಮುಖ್ಯಮಂತ್ರಿ ನಿವಾಸದ ಎದುರೇ ಈ ಘಟನೆ ನಡೆದ ಹಿನ್ನೆಲೆಯಲ್ಲಿ ಇಡೀ ಪ್ರದೇಶದಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಆಸ್ಪತ್ರೆಗೆ ಭೇಟಿ ನೀಡಿದ ಸ್ಥಳೀಯ ಶಾಸಕ ಅರುಣ್ ಕುಮಾರ್ ಶಾ ಗಾಯಾಳುಗಳ ಆರೋಗ್ಯ ವಿಚಾರಿಸಿ, ತಪ್ಪಿತಸ್ಥರನ್ನು ಶೀಘ್ರವೇ ಬಂಧಿಸಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.
ಪ್ರಾಥಮಿಕ ತನಿಖೆಯ ಪ್ರಕಾರ, ಈ ಗುಂಡಿನ ದಾಳಿಯ ಹಿಂದೆ ವೈಯಕ್ತಿಕ ದ್ವೇಷ ಅಥವಾ ಹಳೆಯ ವೈಷಮ್ಯ ಕಾರಣವಾಗಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದು, ರೌಡಿ ಶೀಟರ್ಗಳ ಕೈವಾಡವಿದೆಯೇ ಎಂಬ ಆಯಾಮದಲ್ಲೂ ತನಿಖೆ ಮುಂದುವರಿದಿದೆ. ವಿಐಪಿ ನಿವಾಸ ಹಾಗೂ ಪೊಲೀಸ್ ಠಾಣೆಯ ಸಮೀಪದಲ್ಲೇ ಹಾಡಹಗಲೇ ನಡೆದ ಈ ಗುಂಡಿನ ದಾಳಿ ಬಿಹಾರದ ಭದ್ರತಾ ವ್ಯವಸ್ಥೆಯ ಬಗ್ಗೆ ತೀವ್ರ ಚರ್ಚೆಗೆ ಕಾರಣವಾಗಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ಸಾರ್ವಜನಿಕರು ಹಾಗೂ ವಿಪಕ್ಷಗಳು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿವೆ.