ದೆಹಲಿ, ಆ. 14 (DaijiworldNews/AA): ದೇಶದಲ್ಲಿ 25 ಕೋಟಿಗೂ ಹೆಚ್ಚು (250 ಮಿಲಿಯನ್) ಜನರನ್ನು ಬಡತನದಿಂದ ಹೊರತರಲಾಗಿದೆ. ಹೆಣ್ಣುಮಕ್ಕಳ ಶಿಕ್ಷಣದಲ್ಲಿ ಹೊಸ ಮೈಲಿಗಲ್ಲುಗಳನ್ನು ಸ್ಥಾಪಿಸಲಾಗಿದೆ. ಉಚಿತ ಧಾನ್ಯ ಯೋಜನೆಯ ಮೂಲಕ 80 ಕೋಟಿ (800 ಮಿಲಿಯನ್) ಜನರಿಗೆ ಆಹಾರ ಭದ್ರತೆಯನ್ನು ಖಚಿತಪಡಿಸಲಾಗಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ತಿಳಿಸಿದ್ದಾರೆ.

ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯಡಿ 60 ಕೋಟಿ ಜನರಿಗೆ ವರ್ಷಕ್ಕೆ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸಾ ಸೌಲಭ್ಯ ಒದಗಿಸಲಾಗಿದೆ. ಸಾರ್ವಜನಿಕ ಪರೀಕ್ಷೆಗಳಲ್ಲಿ ನಡೆಯುವ ಅಕ್ರಮಗಳನ್ನು ತಡೆಯುವ ಹಾಗೂ ವಿದ್ಯಾರ್ಥಿಗಳು ಮತ್ತು ಯುವಜನರಿಗೆ ಪರೀಕ್ಷಾ ಪ್ರಕ್ರಿಯೆಯನ್ನು ಹೆಚ್ಚು ಪಾರದರ್ಶಕ, ಸುರಕ್ಷಿತ ಮತ್ತು ವಿಶ್ವಾಸಾರ್ಹವಾಗಿಸುವ ಉದ್ದೇಶದಿಂದ ಸರ್ಕಾರವು ಪರೀಕ್ಷಾ ವ್ಯವಸ್ಥೆಯನ್ನು ಸುಧಾರಿಸಲು ಸಮಗ್ರ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದರು.
"ಸ್ವಾತಂತ್ರ್ಯ ದಿನಾಚರಣೆಯ ಈ ಸಂದರ್ಭದಲ್ಲಿ, ಈ ರಾಷ್ಟ್ರೀಯ ಹಬ್ಬದ ಸವಿನೆನಪಿನಲ್ಲಿ ನಿಮ್ಮೆಲ್ಲರಿಗೂ ನನ್ನ ಹೃದಯಪೂರ್ವಕ ಅಭಿನಂದನೆಗಳು. ಇನ್ನು ಕೆಲವೇ ಗಂಟೆಗಳಲ್ಲಿ ನಮ್ಮ ದೇಶವು ಸ್ವಾತಂತ್ರ್ಯದ ೮೦ನೇ ವರ್ಷಕ್ಕೆ ಕಾಲಿಡಲಿದೆ. ದೇಶ ವಿದೇಶಗಳಲ್ಲಿರುವ ಭಾರತೀಯರು ಸ್ವಾತಂತ್ರ್ಯ ದಿನವನ್ನು ಅತ್ಯಂತ ಉತ್ಸಾಹದಿಂದ ಆಚರಿಸುತ್ತಾರೆ. ತ್ರಿವರ್ಣ ಧ್ವಜವು ನಮ್ಮ ಸ್ವತಂತ್ರತೆಯ ಸಂಕೇತವಾಗಿದ್ದು, ಅದನ್ನು ಹೆಮ್ಮೆಯಿಂದ ಹಾರಿಸಲಾಗುತ್ತದೆ" ಎಂದು ಹೇಳಿದರು.
"ಆಗಸ್ಟ್ 15, 1947ರಂದು ಭಾರತ ಮಾತೆಯು ಗುಲಾಮಗಿರಿಯ ಸಂಕೋಲೆಗಳಿಂದ ಮುಕ್ತಳಾದಳು. ಪ್ರಜೆಗಳೇ ಸ್ವತಂತ್ರ ಭಾರತದ ಭವಿಷ್ಯದ ಶಿಲ್ಪಿಗಳಾದರು. ಲಭ್ಯವಿರುವ ಅವಕಾಶಗಳನ್ನು ಬಳಸಿಕೊಂಡು ಪ್ರತಿಯೊಬ್ಬರೂ ತಮ್ಮ ಕನಸುಗಳನ್ನು ನನಸಾಗಿಸಿಕೊಳ್ಳಬೇಕು ಮತ್ತು ಭಾರತವನ್ನು ಶ್ರೇಷ್ಠ ರಾಷ್ಟ್ರವನ್ನಾಗಿ ಮಾಡಲು ಶ್ರಮಿಸಬೇಕು. ಇದೇ ಸ್ವಾತಂತ್ರ್ಯದ ನಿಜವಾದ ಅರ್ಥ" ಎಂದು ಕರೆ ನೀಡಿದರು.