ನವದೆಹಲಿ, ಆ. 15 (DaijiworldNews/TA): ವಿದ್ಯಾರ್ಥಿಗಳು ಭಾರತದ ಭವಿಷ್ಯದ ಶಿಲ್ಪಿಗಳಾಗಿದ್ದಾರೆ ಎಂದು ಶುಕ್ರವಾರ ಒತ್ತಿ ಹೇಳಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ಪ್ರಶ್ನೆಪತ್ರಿಕೆ ಸೋರಿಕೆಯನ್ನು ಸಂಪೂರ್ಣವಾಗಿ ತಡೆಯಲು ಮತ್ತು ಸಾರ್ವಜನಿಕ ಪರೀಕ್ಷೆಗಳಲ್ಲಿ ಪಾರದರ್ಶಕತೆಯನ್ನು ತರಲು ಸರಕಾರವು ಸಮಗ್ರ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ತಿಳಿಸಿದರು.

80ನೇ ಸ್ವಾತಂತ್ರ್ಯ ದಿನಾಚರಣೆಯ ಮುನ್ನಾದಿನ ದೇಶವನ್ನು ಉದ್ದೇಶಿಸಿ ಮಾಡಿದ ಭಾಷಣದಲ್ಲಿ ಮುರ್ಮು, ದೇಶದ ಭದ್ರತೆಯನ್ನು ಕಾಯ್ದುಕೊಳ್ಳಲು ಸರಕಾರ ಮತ್ತು ಸಮಾಜ ಒಂದಾಗಿರುವಂತೆ ವಿದ್ಯಾರ್ಥಿಗಳ ವರ್ತಮಾನ ಮತ್ತು ಭವಿಷ್ಯವನ್ನು ಸುರಕ್ಷಿತವಾಗಿಸಲು ಸಂಘಟಿತ ಪ್ರಯತ್ನಗಳು ನಡೆಯಬೇಕು ಎಂದು ಪ್ರತಿಪಾದಿಸಿದರು. ಭಾರತದ ಶೇ. 65ರಷ್ಟು ಜನಸಂಖ್ಯೆಯು 35 ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿದ್ದು, ಯುವಕರು ಉದ್ಯೋಗ ಹುಡುಕುವ ಬದಲಿಗೆ ಪ್ರಬಲ ಸ್ಟಾರ್ಟ್ಅಪ್ ಪರಿಸರ ವ್ಯವಸ್ಥೆಯ ಮೂಲಕ ಉದ್ಯೋಗ ಸೃಷ್ಟಿಕರ್ತರಾಗುತ್ತಿದ್ದಾರೆ. ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆಯು ಭಾರತದ ಭಯೋತ್ಪಾದನಾ ವಿರೋಧಿ ಸಾಮರ್ಥ್ಯವನ್ನು ಪ್ರದರ್ಶಿಸಿದೆ.
ನಕ್ಸಲ್ ವಾದದ ನಿರ್ಮೂಲನೆ ದೇಶದ ಮಹತ್ತರ ಸಾಧನೆಯಾಗಿದೆ. ಭಾರತವು ವಿಶ್ವದ ಅತಿ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯಾಗಿದ್ದು, 25 ಕೋಟಿಗೂ ಹೆಚ್ಚು ಜನರು ಬಡತನದಿಂದ ಹೊರಬಂದಿದ್ದಾರೆ ಎಂದು ಮುರ್ಮು ಹೇಳಿದರು. 70 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಆರು ಕೋಟಿ ಹಿರಿಯ ನಾಗರಿಕರಿಗೆ ಐದು ಲಕ್ಷ ರೂ.ವರೆಗೆ ಉಚಿತ ಆರೋಗ್ಯ ಸೇವೆ ಒದಗಿಸಲಾಗುತ್ತಿದೆ ಎಂದು ಅವರು ಉಲ್ಲೇಖಿಸಿದರು. ರಾಷ್ಟ್ರಪತಿ ತಮ್ಮ ಭಾಷಣದಲ್ಲಿ ಮಹಿಳಾ ಸಬಲೀಕರಣ, ಖೇಲೋ ಇಂಡಿಯಾ ಕಾರ್ಯಕ್ರಮ, ಭಾರತೀಯ ಸಶಸ್ತ್ರ ಪಡೆಗಳ ಸಾಧನೆಗಳು, ಪಾರಂಪರಿಕ ತಾಣಗಳು, ದೇಶದ ವಿದೇಶಾಂಗ ನೀತಿ ಸೇರಿದಂತೆ ಹಲವಾರು ವಿಷಯಗಳನ್ನು ಪ್ರಸ್ತಾವಿಸಿದರು.