ಬಂಟ್ವಾಳ, ಜೂ. 19 (DaijiworldNews/TA): ಸೀಮಂತದ ದಿನ ನಿಗದಿಯಾಗಿದ್ದ ಗರ್ಭಿಣಿ ಮಹಿಳೆ ಹಾಗೂ ಆಕೆಯ ಪತಿಯ ಮೃತದೇಹವು ನಾವೂರು ಗ್ರಾಮದ ಬಡಗುಂಡಿ ಎಂಬಲ್ಲಿ ಜೂ.19ರ ಗುರುವಾರ ಪತ್ತೆಯಾಗಿದೆ.

ಸಜೀಪಮೂಡ ಗ್ರಾಮದ ಮಿತ್ತಮಜಲು ನಿವಾಸಿ ತಿಮ್ಮಪ್ಪ ಮೂಲ್ಯ ಹಾಗೂ ಅವರ ಪತ್ನಿ ಜಯಂತಿ ಮೃತರು. ಪೊಲೀಸರ ಸ್ಥಳ ತನಿಖೆ ವೇಳೆ ತಿಮ್ಮಪ್ಪ ಮೂಲ್ಯ ಅವರು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಪತ್ನಿಯ ಕುತ್ತಿಗೆ ಭಾಗದಲ್ಲಿ ಗಾಯಗಳಿದ್ದು, ಸಾವಿಗೆ ಕಾರಣ ತಿಳಿದು ಬಂದಿಲ್ಲ. ಗಂಡ ನೇಣು ಬಿಗಿದ ಸ್ಥಿತಿಯಲ್ಲಿದ್ದು, ತುಂಬು ಗರ್ಭಿಣಿಯಾಗಿದ್ದ ಹೆಂಡತಿಯ ಮೃತದೇಹ ಮಲಗುವ ಕೋಣೆಯ ಬೆಡ್ಡಿನ ಕೆಳಗೆ ಪತ್ತೆಯಾಗಿದೆ.
ತಿಮ್ಮಪ್ಪ ಅವರ ಮನೆ ಮಿತ್ತಮಜಲಿನಲ್ಲಿದ್ದು, ಪತ್ನಿಯ ಮನೆ ಬಡಗುಂಡಿಯಲ್ಲಿದೆ. ಇವರಿಗೆ ಕಳೆದ 15 ವರ್ಷಗಳ ಹಿಂದೆ ಮದುವೆಯಾಗಿದ್ದು, ಈವರೆಗೆ ಮಕ್ಕಳಾಗಿರಲಿಲ್ಲ. ಪ್ರಸ್ತುತ ಪತ್ನಿ ಜಯಂತಿ ಗರ್ಭಿಣಿಯಾಗಿದ್ದು, ಜು.2ಕ್ಕೆ ಸೀಮಂತದ ದಿನಾಂಕವೂ ನಿಗದಿಯಾಗಿತ್ತು ಎನ್ನಲಾಗಿದೆ. ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಅನುಮಾನವೂ ವ್ಯಕ್ತವಾಗಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ಸ್ಥಳಕ್ಕೆ ದಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ.