ಉಡುಪಿ, ಫೆ. 21 (DaijiworldNews/AA): ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯ ಉಡುಪಿ ಅಗ್ನಿಶಾಮಕ ಠಾಣೆಯಲ್ಲಿ ಅಗ್ನಿಶಾಮಕ ಸಿಬ್ಬಂದಿಯಾಗಿ ಸೇವೆ ಸಲ್ಲಿಸುತ್ತಿರುವ ಸತೀಶ್ ಅವರಿಗೆ ಕೇಂದ್ರ ಗೃಹ ಸಚಿವಾಲಯದ ಪದಕ ಲಭಿಸಿದೆ.

ತುರ್ತು ಸಂದರ್ಭಗಳಲ್ಲಿನ ಅತ್ಯುತ್ತಮ ಹಾಗೂ ಕರ್ತವ್ಯನಿಷ್ಠ ಸೇವೆಯನ್ನು ಗುರುತಿಸಿ ಕೇಂದ್ರ ಸರ್ಕಾರವು ಈ ಗೌರವವನ್ನು ನೀಡಿದೆ ಎಂದು ಇಲಾಖೆ ತಿಳಿಸಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ರಾಜ್ಯ ಪೊಲೀಸ್ ಮಹಾನಿರ್ದೇಶಕರು (ಡಿಜಿಪಿ) ಹಾಗೂ ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಮಹಾನಿರ್ದೇಶಕರ ಸಮ್ಮುಖದಲ್ಲಿ ಸತೀಶ್ ಅವರಿಗೆ ಈ ಪದಕ ನೀಡಲಾಯಿತು.
ಸತೀಶ್ ಅವರು 2005 ರಲ್ಲಿ ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಗೆ ಸೇರ್ಪಡೆಗೊಂಡರು. ಬೆಂಗಳೂರಿನ ಆರ್.ಎ. ಮುಂಡ್ಕೂರ್ ತರಬೇತಿ ವಿದ್ಯಾಲಯದಲ್ಲಿ ತರಬೇತಿ ಪಡೆದ ನಂತರ, 2006 ರಲ್ಲಿ ಮೂಡುಬಿದಿರೆ ಅಗ್ನಿಶಾಮಕ ಠಾಣೆಯಲ್ಲಿ ಕರ್ತವ್ಯಕ್ಕೆ ಸೇರ್ಪಡೆಗೊಂಡರು.
2018 ರಲ್ಲಿ ಪದೋನ್ನತಿ ಪಡೆದು ಮೈಸೂರಿನ ಹೆಬ್ಬಾಳ ಅಗ್ನಿಶಾಮಕ ಠಾಣೆಗೆ ವರ್ಗಾವಣೆಗೊಂಡರು. ಪ್ರಸ್ತುತ ಅವರು ಉಡುಪಿ ಅಗ್ನಿಶಾಮಕ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.
ತಮ್ಮ ಸುದೀರ್ಘ ಸೇವಾ ಅವಧಿಯಲ್ಲಿ ಜನರ ಜೀವ ಮತ್ತು ಆಸ್ತಿಗಳನ್ನು ರಕ್ಷಿಸುವಲ್ಲಿ ಸತೀಶ್ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ. ಇವರ ಸೇವೆಯನ್ನು ಪರಿಗಣಿಸಿ ಈಗಾಗಲೇ ಹಲವು ಪ್ರಶಸ್ತಿಗಳು ಹಾಗೂ 'ಸೆಲ್ಯೂಟ್ ಸೈಲೆಂಟ್ ಸ್ಟಾರ್' ಪ್ರಶಸ್ತಿಯೂ ಇವರಿಗೆ ಲಭಿಸಿದೆ ಎಂದು ಜಿಲ್ಲಾ ಅಗ್ನಿಶಾಮಕ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.