ಉಳ್ಳಾಲ, ಮಾ. 31(DaijiworldNews/TA): ರೌಡಿ ಶೀಟರ್ ಕಿನ್ಯ ಅಜ್ಜಿನಡ್ಕ ನಿವಾಸಿ ಆರೀಫ್ (40) ಕೊಲೆ ಪ್ರಕರಣದಲ್ಲಿ ಆರು ಮಂದಿ ಭಾಗಿಯಾಗಿರುವುದು ಪೊಲೀಸರ ತನಿಖೆಯಿಂದ ಬೆಳಕಿಗೆ ಬಂದಿದೆ. ಬೆಳಗ್ಗೆ ದಕ್ಕೆ ಮೀನು ಮಾರುಕಟ್ಟೆಗೆ ಬೈಕ್ನಲ್ಲಿ ತೆರಳುತ್ತಿದ್ದ ಆರೀಫ್ನನ್ನು ತೊಕ್ಕೊಟ್ಟು ಫ್ಲೈ ಓವರ್ ಬಳಿ ತಂಡವೊಂದು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆಗೈದು ಪರಾರಿಯಾಗಿತ್ತು ಎನ್ನಲಾಗಿದೆ.

ಪೊಲೀಸರಿಗೆ ಸವಾಲಾಗಿರುವ ಪ್ರಕರಣದ ತನಿಖೆಯನ್ನು ಮಂಗಳೂರು ಪೊಲೀಸ್ ಆಯುಕ್ತರು ಸಿಸಿಬಿ ಎಸಿಪಿ ತಂಡಕ್ಕೆ ವಹಿಸಿಕೊಟ್ಟಿದ್ದಾರೆ. ತನಿಖೆ ಆರಂಭಿಸಿರುವ ಸಿಸಿಬಿ ಪೊಲೀಸರು ಶಂಕಿತ ಆರೋಪಿಗಳನ್ನು ವಿಚಾರಣೆ ಗೊಳಪಡಿಸುತ್ತಿದ್ದು, ಪ್ರಕರಣದಲ್ಲಿ ಭಾಗಿಯಾದ ಆರು ಮಂದಿಯ ವಿವರ ತನಿಖೆಯಿಂದ ಪೊಲೀಸರಿಗೆ ದೊರೆತಿದೆ.
ಈ ನಿಟ್ಟಿನಲ್ಲಿ ತನಿಖೆ ಮುಂದುವರಿದಿದೆ. ಆರೋಪಿಗಳಿಗೆ ಕೃತ್ಯ ನಡೆಸಲು ಹಾಗೂ ಅವರು ತಪ್ಪಿಸಿಕೊಳ್ಳಲು ಸಹಾಯ ಮಾಡಿದ ಶಂಕಿತ ಕೆಲವು ವ್ಯಕ್ತಿಗಳನ್ನು ವಿಚಾರಣೆ ನಡೆಸಲಾಗುತ್ತಿದೆ. ಒಂದು ವೇಳೆ ಅರು ಮಂದಿ ಭಾಗಿಯಾಗಿರುವುದು ದೃಢಪಟ್ಟರೆ ಅವರನ್ನು ಸಹ ಬಂಧಿಸಲಾಗುತ್ತದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.