ಮಂಗಳೂರು, ಜು.09 (DaijiworldNews/SM): ದ.ಕ. ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ ೩೦ಕ್ಕೆ ಏರಿಕೆಯಾಗಿದೆ. ಗುರುವಾರದಂದು ಇಬ್ಬರು ಮೃತಪಟ್ಟ ಬಗ್ಗೆ ವರದಿ ಲಭ್ಯವಾಗಿದೆ.

ಗುರುವಾರ ಮಧ್ಯಾಹ್ನ 48 ವರ್ಷದ ಗಂಡಸು ಮೃತಪಟ್ಟಿರುವ ಬಗ್ಗೆ ವರದಿ ಲಭ್ಯವಾಗಿತ್ತು. ಮಂಗಳೂರಿನ ವೆನ್ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ವ್ಯಕ್ತಿ ಮೃತಪಟ್ಟ ಬಗ್ಗೆ ವರದಿಯಾಗಿತ್ತು. ಇದೀಗ ಆರೋಗ ಇಲಾಖೆಯ ವರದಿ ಲಭ್ಯವಾಗಿದ್ದು, ಮತ್ತೊಬ್ಬರು ಮೃತಪಟ್ಟಿರುವ ವ್ಯಕ್ತಿಯಲ್ಲಿ ಸೋಂಕು ಇದೆ ಎಂಬುವುದು ದೃಢಪಟ್ಟಿದೆ.
ಭಟ್ಕಳದ ನಿವಾಸಿ 62 ವರ್ಷದ ವ್ಯಕ್ತಿ ಜುಲೈ ಏಳರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಅದೇ ದಿನ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದರು. ಅವರನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇದೀಗ ವರದಿ ಲಭ್ಯವಾಗಿದ್ದು, ಸೋಂಕು ಇರುವುದು ದೃಢಪಟ್ಟಿದೆ. ಆ ಮೂಲಕ ದ.ಕ. ಜಿಲ್ಲೆಯಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 30ಕ್ಕೆ ಏರಿಕೆಯಾಗಿದೆ.
ಇನ್ನು ಮೃತರ ಪೈಕಿ 25 ಮಂದಿ ದಕ್ಷಿಣ ಕನ್ನಡ ಜಿಲ್ಲೆಯವರೇ ಆಗಿದ್ದು, ಉಳಿದ ಐವರು ಹೊರ ಜಿಲ್ಲೆಯವರಾಗಿದ್ದಾರೆ.