ಮಂಗಳೂರು, ಜು13 (Daijiworld News/MSP): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಉಲ್ಬಣಿಸುತ್ತಿರುವ ಕೊರೊನಾ ಸೋಂಕು ಆತಂಕಕ್ಕೆ ಕಾರಣವಾಗಿರುವ ಹಿನ್ನಲೆಯಲ್ಲಿ ಜು.೧೬ರಿಂದ ಜಿಲ್ಲೆಯಲ್ಲಿ ಒಂದು ವಾರಗಳ ಕಾಲ ಲಾಕ್ ಡೌನ್ ಜಾರಿಗೆ ತರಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ತಿಳಿಸಿದ್ದಾರೆ.

ಸೋಮವಾರ 11 ಗಂಟೆಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರೊಂದಿಗೆ ವಿಡಿಯೋ ಸಂವಾದದಲ್ಲಿ ಭಾಗವಹಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್, ಹಾಗೂ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ಅವರ ಸಹಿತ ಹಲವು ಅಧಿಕಾರಿಗಳು ಮತ್ತೊಂದು ಸುತ್ತಿನ ಚರ್ಚೆ ನಡೆಸಿ ಬಳಿಕ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಚಿವ ಕೋಟಾ ಸ್ಪಷ್ಟಪಡಿಸಿದ್ದಾರೆ.
"ನಮ್ಮ ಜಿಲ್ಲೆಯಲ್ಲಿ ಸಾರ್ವಜನಿಕರು ಹಾಗೂ ಜನಪ್ರತಿನಿಧಿಗಳು ಕೊರೊನಾ ನಿಯಂತ್ರಣಕ್ಕಾಗಿ ಒಂದಷ್ಟು ದಿನಗಳ ಕಾಲ ಮತ್ತೆ ಲಾಕ್ ಡೌನ್ ಸೂಕ್ತ ಎನ್ನುವ ಅಭಿಪ್ರಾಯ ವ್ಯಕ್ತಪಡಿಸಿದ್ದರಿಂದ ಜು.16 ರಿಂದ ಒಂದು ವಾರಗಳ ಕಾಲ ಕೊರೊನಾ ನಿಯಂತ್ರಣಕ್ಕಾಗಿ ಲಾಕ್ ಡೌನ್ ಜಾರಿಗೊಳಿಸಲಾಗುವುದು. ಈ ಹಿನ್ನಲೆಯಲ್ಲಿ ನಾನು ಜಿಲ್ಲೆಯ ಎಲ್ಲಾ ಜನರಲ್ಲಿ ವಿನಂತಿಸುತ್ತಿದ್ದು, ಇನ್ನು ಎರಡು ದಿನಗಳ ಕಾಲಾವಾಕಾಶ ಇರುವುದರಿಂದ ವಾರಗಳಿಗೆ ಅಗತ್ಯವಿರುವ ದಿನಸಿ ಸಾಮಾಗ್ರಿ ಹಾಗೂ ಮೂಲಭೂತ ಅವಶ್ಯಕತೆಗಳನ್ನು ಖರೀದಿ ಮಾಡಿಟ್ಟುಕೊಳ್ಳಬೇಕು" ಎಂದು ಸಚಿವ ಕೋಟಾ ಮನವಿ ಮಾಡಿದ್ದಾರೆ.
ಜಿಲ್ಲಾಡಳಿತ ನಿರ್ಧರಿತ ಲಾಕ್ ಡೌನ್ ನ ಕುರಿತ "ಮಾರ್ಗಸೂಚಿ ಮತ್ತು ನಿಯಮ"ಗಳನ್ನು ಜಿಲ್ಲಾಧಿಕಾರಿಗಳು ಪ್ರಕಟಿಸಲಿದ್ದು, ಜಿಲ್ಲೆಯ ಜನರು ಲಾಕ್ ಡೌನ್ ಹಾಗೂ ಕೊರೊನಾ ನಿಯಂತ್ರಣಕ್ಕೆ ಸಹಕರಿಸಬೇಕು ಮಾಡಬೇಕು ಎಂದು ಇದೇ ವೇಳೆ ಸಚಿವರು ಮನವಿ ಮಾಡಿದ್ದಾರೆ.