ಉಡುಪಿ, ಆ. 11, (DaijiworldNews/SM): ರಾಜ್ಯದಲ್ಲಿ ನೂತವಾಗಿ ರಚನೆಯಾಗಿರುವ ತಾಲೂಕುಗಳಿಗೆ, ಮೂಲಭೂತ ಸೌಕರ್ಯಗಳನ್ನು ಒದಗಿಸಲು ಸರಕಾರ ಬದ್ದವಾಗಿದ್ದು, ಇದಕ್ಕಾಗಿ ಹಣಕಾಸು ನೆರವಿನ ಘೋಷಣೆ ಮಾಡಲಾಗುವುದು ಎಂದು ರಾಜ್ಯದ ಗೃಹ ಸಚಿವ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಅವರು ಮಂಗಳವಾರ, ಹೆಬ್ರಿಯ ತಾಲೂಕು ಕಚೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು.
ರಾಜ್ಯದಲ್ಲಿ ನೂತನ ತಾಲೂಕುಗಳು ಅಸ್ಥಿತ್ವಕ್ಕೆ ಬಂದಿದ್ದರೂ ಸಹ ಪೂರ್ಣ ಪ್ರಮಾಣದಲ್ಲಿ ಅಧಿಕಾರಿಗಳ ನಿಯೋಜನೆ, ಇಲಾಖೆಗಳ ಆರಂಭ ಹಾಗೂ ಮೂಲಸೌಕರ್ಯಗಳ ಸಮಸ್ಯೆಯಿದ್ದು, ಇದಕ್ಕಾಗಿ ವಿಶೇಷ ಹಣಕಾಸಿನ ನೆರವು ನೀಡುವುದರ ಮೂಲಕ ಹೊಸ ತಾಲೂಕುಗಳಲ್ಲಿ ಸಾರ್ವಜನಿಕರಿಗೆ ಸುಗಮವಾಗಿ ಸರಕಾರದ ಸೇವೆಗಳನ್ನು ಒದಗಿಸಲಾಗುವುದು ಎಂದು ಸಚಿವ ಬೊಮ್ಮಾಯಿ ತಿಳಿಸಿದರು.
ಹೆಬ್ರಿ ನೂತನ ತಾಲೂಕಿನಲ್ಲಿ ನೆಮ್ಮದಿ ಕೇಂದ್ರ ಆರಂಭಿಸುವ ಕುರಿತಂತೆ ಶೀಘ್ರದಲ್ಲಿ ಕ್ರಮ ಕೈಗೊಳ್ಳಲಾಗುವುದು. ಹೆಬ್ರಿಯ ಪೊಲೀಸ್ ಠಾಣೆಯನ್ನು ಸಂಪೂರ್ಣ ಸುಸಜ್ಜಿತಗೊಳಿಸಲಾಗುವುದು. ವಿಶೇಷ ಪ್ರಕರಣವೆಂದು ಪರಿಗಣಿಸಿ ಹೊಸ ಅಗ್ನಿಶಾಮಕ ಠಾಣೆಯನ್ನು ಮಂಜೂರು ಮಾಡಲಾಗುವುದು ಹಾಗೂ ಸೀತಾನದಿ ಏತ ನೀರಾವರಿ ಯೋಜನೆ ಕುರಿತಂತೆ ಪರಿಶೀಲಿಸಲಾಗುವುದು ಎಂದು ಬೊಮ್ಮಾಯಿ ಹೇಳಿದರು.