ಮಂಗಳೂರು, ಅ. 02 (DaijiworldNews/MB) : ಉತ್ತರ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟು ಹೋಗಿದೆ. ತಕ್ಷಣವೇ ಅಲ್ಲಿನ ಸರಕಾರವನ್ನು ವಜಾಗೊಳಿಸಬೇಕು, ಈ ಕೂಡಲೇ ರಾಷ್ಟ್ರಪತಿ ಆಡಳಿತ ಜಾರಿಗೆ ತರಬೇಕು ಎಂದು ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ರಮಾನಾಥ ರೈ ಆಗ್ರಹಿಸಿದ್ದಾರೆ.

ಮಂಗಳೂರಿನ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿದ ರಮಾನಾಥ ರೈ ಅವರು, ಉತ್ತರ ಪ್ರದೇಶ ಸೇರಿದಂತೆ ದೇಶದಲ್ಲಿ ಹಲವೆಡೆ ಅತ್ಯಾಚಾರ ಪ್ರಕರಣಗಳು ಅಧಿಕವಾಗುತ್ತಿದ್ದು ಕಾನೂನು ವ್ಯವಸ್ಥೆ ಹದಗೆಟ್ಟಿದೆ. ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದ ದುರ್ಬಲ ವರ್ಗದವರ ಮೇಲೆ ಅತ್ಯಾಚಾರ ಮತ್ತು ದೌರ್ಜನ್ಯ ಪ್ರಕರಣಗಳು ಅಧಿಕವಾಗಿದೆ ಎಂದು ಆರೋಪ ಮಾಡಿದರು.
ಈ ಅತ್ಯಾಚಾರ ಪ್ರಕರಣಗಳು ದೇಶದ ದುರವಸ್ಥೆಯನ್ನು ತೋರಿಸುತ್ತಿದೆ. ಇವರ ಅಧಿಕಾರ ಅವಧಿಯಲ್ಲಿ ಪ್ರಬಲ ವರ್ಗದವರು ಅಪಾಯಕಾರಿಯಾಗುತ್ತಿದ್ದಾರೆ. ಸಂಘ ಪರಿವಾರ ಅಧಿಕಾರದಲ್ಲಿರುವ ಕಡೆಯಲ್ಲಿ ಅಲ್ಲಿನ ಆಡಳಿತ ಯಾರು ಪ್ರಬಲರೋ ಅವರ ರಕ್ಷಣೆ ಮಾಡುತ್ತಿದೆ. ಇದು ದುರಂತಕ್ಕೆ ಕಾರಣವಾಗುತ್ತಿದೆ ಎಂದು ದೂರಿದ್ದಾರೆ.
ದೇಶದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು ಇದರೊಂದಿಗೆ ಆರ್ಥಿಕತೆಯೂ ಸಂಪೂರ್ಣ ಕುಸಿದಿದೆ. ಉತ್ತರ ಪ್ರದೇಶದಲ್ಲಿ ಪದೇ ಪದೇ ಇಂತಹ ಪ್ರಕರಣಗಳು ಮರುಕಳಿಸುತ್ತಿರುವುದು ಅಲ್ಲಿನ ಆಡಳಿತ ವ್ಯವಸ್ಥೆ ಹೇಗಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಆದಿತ್ಯನಾಥ್ ಸರ್ಕಾರ ಬಂದ ಬಳಿಕ ಉತ್ತರ ಪ್ರದೇಶದ ಸ್ಥಿತಿ ಅಧೋಗತಿಗೆ ತಲುಪಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಮಾಜಿ ಸಚಿವ ಯು.ಟಿ.ಖಾದರ್, ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಮತ್ತಿತರ ಮುಖಂಡರು ಇದ್ದರು.