ಉಡುಪಿ, ಡಿ. 07 (DaijiworldNews/HR): ಜಿಲ್ಲೆಯ ಯುವಕ ಸಂಘಗಳಲ್ಲಿನ ಯುವಕರಿಗೆ ವೈವಿಧ್ಯಮಯ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಮತ್ತು ಅವರಿಗೆ ಅಗತ್ಯ ತರಬೇತಿಗಳನ್ನು ನೀಡುವ ಮೂಲಕ, ಅವರಲ್ಲಿರುವ ಯುವ ಶಕ್ತಿಯನ್ನು ಜಿಲ್ಲೆಯ ಅಭಿವೃಧ್ದಿ ಕಾರ್ಯಗಳಿಗೆ ಬಳಸಿಕೊಳ್ಳುವಂತಹ ಕಾರ್ಯಕ್ರಮಗಳನ್ನು ರೂಪಿಸಬೇಕೆಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದ್ದಾರೆ.


ಈ ಕುರಿತು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ನೆಹರು ಯುವಕೇಂದ್ರದ ಜಿಲ್ಲಾ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನೆಹರು ಯುವಕೇಂದ್ರದ ಮೂಲಕ ಜಿಲ್ಲೆಯಲ್ಲಿ ನೊಂದಣಿಯಾಗಿರುವ ಯುವಕ ಸಂಘಗಳ ಸದಸ್ಯರಿಗೆ ಅವರಲ್ಲಿನ ಸಮಾಜಸೇವೆಯ ಗುಣ, ಕೌಶಲ್ಯ ಮತ್ತು ಸಾಹಸ ಪ್ರವೃತ್ತಿಯನ್ನು ಅಭಿವೃದ್ಧಿಗೊಳಿಸುವಂತೆ ಚಟುವಟಿಕೆಗಳನ್ನು ಏರ್ಪಡಿಸಿ. ಯುವಕ ಯುವತಿಯರಿಗೆ ವಿಕೋಪ ನಿರ್ವಹಣೆ ಸೇರಿದಂತೆ ಅತ್ಯಾವಶ್ಯಕ ಸಂದರ್ಭದಲ್ಲಿ ಜಿಲ್ಲಾಡಳಿತ ಮತ್ತು ಸಮಾಜದ ನೆರವಿಗೆ ಧಾವಿಸುವಂತಹ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸಿ, ತುರ್ತು ಸಂದರ್ಭದಲ್ಲಿ ಈ ರೀತಿಯ ತರಬೇತಿ ಪಡೆದ ಯುವಕರ ಸೇವೆಯನ್ನು ಜಿಲ್ಲಾಡಳಿತದ ನೆರವಿಗೆ ಬಳಸಿಕೊಳ್ಳುವಂತೆ ತಿಳಿಸಿದರು.
ನೆಹರು ಯುವ ಕೇಂದ್ರದಿಂದ ಸಿದ್ಧಪಡಿಸುವ ವಾರ್ಷಿಕ ಕಾರ್ಯಕ್ರಮಗಳಲ್ಲಿ, ವಿವಿಧ ಸಾಮಾಜಿಕ ಚಟುವಟಿಕೆಗಳಲ್ಲಿ ಯುವಕರು ತೊಡಗುವಂತಹ ಕಾರ್ಯಕ್ರಮಗಳನ್ನು ರೂಪಿಸಿ, ಉತ್ತಮವಾಗಿ ಕಾರ್ಯನಿರ್ವಹಿಸುವ ಯುವ ತಂಡಗಳನ್ನು ಸೂಕ್ತ ರೀತಿಯಲ್ಲಿ ಪ್ರೋತ್ಸಾಹಿಸಿ, ಯುವಕರಲ್ಲಿ ಆತ್ಮ ವಿಶ್ವಾಸ ಮೂಡಿಸುವಂತಹ ತರಬೇತಿಗಳು, ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಅಗತ್ಯವಾದ ತರಬೇತಿ, ದೈಹಿಕ ಮತ್ತು ಮಾನಸಿಕ ಆರೋಗ್ಯ ವೃದ್ಧಿಸುವಂತಹ ತರಬೇತಿಗಳು, ತಮ್ಮ ಗ್ರಾಮಗಳಲ್ಲಿ ಸ್ವಚ್ಚತಾ ಕಾರ್ಯಕ್ರಮ ಸೇರಿದಂತೆ ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿ, ಆ ಸೌಲಭ್ಯಗಳನ್ನು ಜನರಿಗೆ ದೊರಕಿಸುವ ಕಾರ್ಯಕ್ರಮ ಮತ್ತು ಯುವಕರ ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಬೆಳವಣಿಗೆಗೆ ಪೂರಕವಾಗುವಂತ ಯೋಜನೆಗಳನ್ನು ರೂಪಿಸುವಂತೆ ಸೂಚಿಸಿದರು.
ಇನ್ನು ಜಿಲ್ಲೆಯಲ್ಲಿ ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿರುವ ಯುವ ಸಂಘಗಳ ಮಾಹಿತಿಯನ್ನು ಸಿದ್ಧಪಡಿಸಿಟ್ಟುಕೊಂಡು, ತುರ್ತು ಸಂದರ್ಭದಲ್ಲಿ ಅವರ ನೆರವು ಪಡೆಯಬೇಕು. ಯುವ ಜನತೆ ಮೊಬೈಲ್ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯರ್ಥವಾಗಿ ಕಾಲ ಕಳೆಯದೇ, ಸಾಮಾಜಿಕ ಕಾರ್ಯಗಳಿಂದ ಸಮಾಜಕ್ಕೆ ಅಗತ್ಯ ನೆರವು ನೀಡಬೇಕು. ಯುವಕರು ಸದಾ ಕ್ರಿಯಾಶೀಲ ಚಟುವಟಿಕೆಗಳಲ್ಲಿ ತೊಡಗಿಕೊಂಡು, ತಮ್ಮಲ್ಲಿನ ಯುವಶಕ್ತಿಯ ಮೂಲಕ ಜಿಲ್ಲೆಯ ಅಭಿವೃದ್ಧಿಗೆ ಕೊಡುಗೆ ನೀಡಬೇಕು. ತುರ್ತು ಸಂದರ್ಭಗಳಲ್ಲಿ ಜಿಲ್ಲಾಡಳಿತ ನೀಡುವ ಕರೆಗೆ ತಕ್ಷಣ ಸ್ಪಂದಿಸಬೇಕು ಎಂದು ಹೇಳಿದ್ದಾರೆ.
ಜಿಲ್ಲಾ ನೆಹರು ಯುವ ಕೇಂದ್ರದ 2020-21 ನೇ ಸಾಲಿನಲ್ಲಿ ಏರ್ಪಡಿಸಲಾಗುವ ವಾರ್ಷಿಕ ಕಾರ್ಯಕ್ರಮಗಳ ಕ್ರಿಯಾ ಯೋಜನೆಗೆ ಜಿಲ್ಲಾಧಿಕಾರಿ ಅನುಮೋದನೆ ನೀಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ನೆಹರು ಯುವ ಕೇಂದ್ರದ ವಿಷ್ಣುಮೂರ್ತಿ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.