ಉಡುಪಿ, ಡಿ.09 (DaijiworldNews/PY): "ಜಿಲ್ಲೆಯಲ್ಲಿ ಗಂಡು ಮತ್ತು ಹೆಣ್ಣು ಮಕ್ಕಳ ಅನುಪಾತದಲ್ಲಿ ಅಸಮತೋಲನ ಉಂಟಾಗದಂತೆ ಎಚ್ಚರವಹಿಸಬೇಕು. ಪ್ರಸ್ತುತ 1000 ಗಂಡು ಮಕ್ಕಳಿಗೆ, 956 ಹೆಣ್ಣು ಮಕ್ಕಳಿದ್ದಾರೆ. ಗರ್ಭಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ ಮಾಡುವುದು ಕಾನೂನು ಬಾಹಿರವಾಗಿದ್ದು, ಅಂತಹ ಅಪರಾಧಕ್ಕೆ 3 ವರ್ಷ ಜೈಲು ಶಿಕ್ಷೆ ವಿಧಿಸಲಾಗುವುದು" ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಎಚ್ಚರಿಕೆ ನೀಡಿದ್ದಾರೆ.



ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಖಾಸಗಿ ವೈದ್ಯಕೀಯ ಸಂಸ್ಥೆಗಳ ನೊಂದಣಾ ಪ್ರಾಧಿಕಾರದ ಕುಂದುಕೊರತೆ ನಿವಾರಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
"ಸ್ಕ್ಯಾನಿಂಗ್ ಸೆಂಟರ್ಗಳಲ್ಲಿ ಸರ್ಕಾರದ ನಿಯಮಾನುಸಾರ ಕಾರ್ಯನಿರ್ವಹಿಸಬೇಕು ಎಂದ ಅವರು ಜಿಲ್ಲಾ ಮಟ್ಟದ ಸಮಿತಿಗಳು ಆಗಿಂದಾಗ್ಗೆ ಅನಿರೀಕ್ಷಿತ ಭೇಟಿಗಳನ್ನು ನೀಡುವುದರೊಂದಿಗೆ ಅಲ್ಲಿನ ಚಟುವಟಿಕೆಗಳ ಮೇಲೆ ನಿಗಾ ವಹಿಸಬೇಕು" ಎಂದರು.
"ಸಾರ್ವಜನಿಕರು ಯಾವುದೇ ಸ್ಕ್ಯಾನಿಂಗ್ ಸೆಂಟರ್ಗಳಲ್ಲಿ ಭ್ರೂಣಲಿಂಗದ ಪತ್ತೆಮಾಡಿ ಮಾಹಿತಿ ನೀಡುತ್ತಾರೆ ಎಂಬ ನಿಖರ ಮಾಹಿತಿ ಕೊಟ್ಟಲ್ಲಿ ಅಂತಹವರಿಗೆ 50,000 ರೂ. ಬಹುಮಾನ ನೀಡಲಾಗುವುದು" ಎಂದರು.
"ಶೀತ, ಕೆಮ್ಮು, ಜ್ವರ ಹಾಗೂ ಐ.ಎಲ್.ಐ ಚಿಕಿತ್ಸೆಗೆ ಬರುವ ರೋಗಿಗಳಿಗೆ ಕಡ್ಡಾಯವಾಗಿ ಕೊರೊನಾ ಟೆಸ್ಟ್ ಮಾಡಿಸಬೇಕು, ತಪ್ಪಿದ್ದಲ್ಲಿ ಚಿಕಿತ್ಸೆ ನೀಡದ ಖಾಸಗಿ ಆಸ್ಪತ್ರೆಗಳ ನೊಂದಣಿಯನ್ನು ರದ್ದು ಮಾಡಲಾಗುವುದು" ಎಂದು ತಿಳಿಸಿದರು.
"ಇತ್ತೀಚಿನ ದಿನಗಳಲ್ಲಿ ಜನರು ಕೊರೊನಾ ಸೋಂಕಿನ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಇದರಿಂದಾಗಿ ಎರಡನೇ ಅಲೆ ಪ್ರಾರಂಭವಾಗುವ ಸಾಧ್ಯತೆಗಳಿವೆ. ಇದಕ್ಕೆ ಕಡಿವಾಣ ಹಾಕಬೇಕು. ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಕೆಮ್ಮು, ಶೀತ, ಜ್ವರ ಹಾಗೂ ಐ.ಎಲ್.ಐ ಚಿಕಿತ್ಸೆ ಪಡೆಯಲು ಬಂದಂತಹ ರೋಗಿಗಳಿಗೆ ತಪ್ಪದೇ ಕೊರೊನಾ ಪರೀಕ್ಷೆ ಮಾಡಿಸಬೇಕು. ಖಾಸಗಿ ವೈದ್ಯಕೀಯ ಸಂಸ್ಥೆಗಳು ರೋಗಿಗಳ ಬಗ್ಗೆ ನಿಖರ ಮಾಹಿತಿಯನ್ನು ನೀಡಬೇಕು" ಎಂದರು.
"ಜಿಲ್ಲೆಯಲ್ಲಿ ವೈದ್ಯಕೀಯ ವೃತ್ತಿಯನ್ನು ಪ್ರಾರಂಭಿಸುವ ಮುನ್ನ ಜಿಲ್ಲಾ ಮಟ್ಟದ ನೋಂದಣಿ ಪ್ರಾಧಿಕಾರದಲ್ಲಿ ನೋಂದಣಿ ಮಾಡಿಸಿ, ತಮ್ಮ ವೃತ್ತಿಯನ್ನು ಕೈಗೊಳ್ಳಬೇಕು. ನೊಂದಣಿ ಮಾಡದೇ ಚಿಕಿತ್ಸೆ ನೀಡಿದವರ ಮೇಲೆ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು" ಎಂದರು.
ವಂಶ ಪಾರಂಪರೆಯಾಗಿ ವೈದ್ಯಕೀಯ ಚಿಕಿತ್ಸೆಯನ್ನು ನೀಡುತ್ತಿದ್ದೇವೆ ಎಂಬ ಹೆಸರಿನಲ್ಲಿ ಔಷಧೋಪಚಾರಗಳನ್ನು ನೀಡುವಾಗ ಅಲೋಪಥಿ ಔಷಧಿ ನೀಡುವುದು ಅಪರಾಧ. ಇಂತಹ ವೃತ್ತಿಗಳು ಕಂಡುಬಂದಲ್ಲಿ ಕಾನೂನು ಅಡಿಯಲ್ಲಿ ಸೂಕ್ತ ಕ್ರಮವನ್ನು ತೆಗೆದುಕೊಳ್ಳಬೇಕು" ಎಂದು ತಾಲೂಕು ಆರೋಗ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.
"ಪ್ರಾಧಿಕಾರಕ್ಕೆ ಅಗತ್ಯ ದಾಖಲೆಗಳೊಂದಿಗೆ ಕ್ಲಿನಿಕ್ ಅಥವಾ ನರ್ಸಿಂಗ್ ಹೋಮ್ಗಳನ್ನು ತೆರೆಯಲು ಅರ್ಜಿ ಸಲ್ಲಿಸಿದಾಗ ನಿಯಮಾನುಸಾರ ಅವರುಗಳಿಗೆ ಶೀಘ್ರದಲ್ಲಿ ಲೈಸೆನ್ಸ್ ನೀಡಬೇಕು" ಎಂದು ತಿಳಿಸಿದರು.
"ಜಿಲ್ಲಾ ಆಸ್ಪತ್ರೆಗಳಲ್ಲಿನ ಬಯೋ- ಮೆಡಿಕಲ್ ತ್ಯಾಜ್ಯಗಳನ್ನು 48 ಗಂಟೆಗಳ ಒಳಗಾಗಿ ಶೇಖರಿಸುವುದರೊಂದಿಗೆ ವೈಜ್ಞಾನಿಕ ರೀತಿಯಲ್ಲಿ ಅವುಗಳನ್ನು ವಿಲೇವಾರಿ ಮಾಡಬೇಕೆಂದು ಸೂಚಿಸಿದ ಅವರು ಅವುಗಳ ಶೇಖರಣೆಯ ಬಗ್ಗೆ ಬಾರ್ಕೋಡ್ ವ್ಯವಸ್ಥೆಯನ್ನು ಮಾಡುವುದು ಸೂಕ್ತ" ಎಂದರು.
"ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡುವುದು ಸೇರಿದಂತೆ ಅಲ್ಲಿನ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಒತ್ತು ನೀಡಬೇಕು" ಎಂದು ಸೂಚನೆ ನೀಡಿದರು.
"ವೈದ್ಯಕೀಯ ಚಿಕಿತ್ಸೆ ನೀಡುವಾಗ ನಿರ್ಲಕ್ಷದಿಂದ ತೊಂದರೆಗೊಳಗಾದವರಿಂದ ಬಂದ ದೂರುಗಳನ್ನು ವಿಳಂಬವಿಲ್ಲದೇ ಇತ್ಯರ್ಥ ಪಡಿಸಬೇಕು" ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಸುಧೀರ್ ಚಂದ್ರ ಸೂಡ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಮರಾವ್, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಪ್ರಶಾಂತ್ ಭಟ್, ಜಿಲ್ಲಾ ಸರ್ಜನ್ ಮಧುಸೂದನ್ ನಾಯಕ್, ಸರಕಾರಿ ನೌಕರರ ಸಂಘದ ಅಧ್ಯಕ್ಷ ಸುಬ್ರಹ್ನಣ್ಯ ಶೇರಿಗಾರ್, ಮತ್ತಿತರ ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.