ಮಂಗಳೂರು, ಡಿ. 29 (DaijiworldNews/SM): ಕರಾವಳಿಯಲ್ಲಿ ಹೊಸದಾಗಿ ರೂಪಾಂತರಗೊಂಡಿರುವ ಕೋವಿಡ್-19 ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಎಚ್ಚರಿಕಾ ಕ್ರಮ ಕೈಗೊಳ್ಳಲಾಗುತ್ತಿದೆ. ಈ ನಡುವೆ ಹೊಸ ವರ್ಷಾಚರಣೆ ಸಂದರ್ಭದಲ್ಲಿ ಬೀಚ್ ಗೆ ಸಾರ್ವಜನಿಕರಿಗೆ ತೆರಳದಂತೆ ನಿಷೇಧಾಜ್ಞೆ ಹೇರಲಾಗಿದೆ.

ಸರ್ಕಾರದ ನಿರ್ದೇಶನದಂತೆ, ಜಿಲ್ಲಾಡಳಿತವು ಎಲ್ಲಾ ಅವಶ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ವೈರಾಣು ಹರಡುವಿಕೆಯನ್ನು ತಡೆಗಟ್ಟಲು ಹಾಗೂ ಹೊಸವರ್ಷ ಸಂದರ್ಭದಲ್ಲಿ ಜಿಲ್ಲೆಯ ಎಲ್ಲಾ ಕಡಲ ತೀರ ಪ್ರದೇಶಗಳಲ್ಲಿ ಅತೀ ಹೆಚ್ಚು ಜನಸಂದಣಿ ಸೇರುವುದರಿಂದ ಸೋಂಕು ಹರಡುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಜಲ್ಲೆಯ ಉಳ್ಳಾಲ, ಸೋಮೇಶ್ವರ, ಮೊಗವೀರಪಟ್ಣ, ಪಣಂಬೂರು, ತಣ್ಣೀರುಬಾವಿ, ಸಸಿಹಿತ್ಲು ಮತ್ತು ಸುರತ್ಕಲ್ ಬೀಚ್ಗಳಿಗೆ ಸಾರ್ವಜನಿಕರ ಪ್ರವೇಶ ವಿಷೇಧಿಸಲಾಗಿದೆ.
ಎಲ್ಲಾ ಕಡಲ ಕಿನಾರೆಗಳಿಗೆ ಡಿಸೆಂಬರ್ 31 ರಂದು ಮಧ್ಯಾಹ್ನ 12 ಗಂಟೆಯಿಂದ ಜನವರಿ 2 ರಂದು ಮಧ್ಯಾಹ್ನ 12 ಗಂಟೆಯವರೆಗೆ ಸ್ಥಳೀಯರು ಹಾಗೂ ಸಾಂಪ್ರದಾಯಿಕ ಮೀನುಗಾರರನ್ನು ಹೊರತು ಪಡಿಸಿ ಇತರೇ ಯಾವುದೇ ಪ್ರವಾಸಿಗರ ಪ್ರವೇಶವನ್ನು ನಿಷೇಧಿಸಲಾಗಿದೆ ಎಂಬುವುದಾಗಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಆದೇಶಿಸಿದ್ದಾರೆ.