ಮಂಗಳೂರು, ಜ.20 (DaijiworldNews/PY): ಲಂಚ ಸ್ವೀಕರಿಸುತ್ತಿದ್ದ ಸಂದರ್ಭ ಭ್ರಷ್ಟಾಚಾರ ನಿಗ್ರಹ ದಳದ ಬಲೆಗೆ ಬಿದ್ದಿದ್ದ ಮಂಗಳೂರು ತಾಲೂಕು ಕಛೇರಿಯ ದ್ವಿತೀಯ ದರ್ಜೆ ಸಹಾಯಕ ರಫೀಕ್ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಂಡಿದೆ.

ಸಾಂದರ್ಭಿಕ ಚಿತ್ರ
ಕೆ.ಐ.ಎ.ಡಿ.ಬಿ. ಯ ಭೂಸ್ವಾದೀನ ಪರಿಹಾರದ ಬಗ್ಗೆ ಅರ್ಜಿ ವಿಲೇವಾರಿ ಮಾಡಲು ತೋಕೂರು ಗ್ರಾಮದ ಓಸ್ವಲ್ಡ್ ವೇಗಸ್ ಎಂಬವರಿಂದ 40,000 ರೂ. ಲಂಚದ ಹಣ ಸ್ವೀಕರಿಸುತ್ತಿದ್ದ ಸಂದರ್ಭ ಓಸ್ವಾಲ್ಡ್ ವೇಗಸ್ ಅವರು ನೀಡಿದ್ದ ದೂರಿನ ಆಧಾರದಲ್ಲಿ ಮಂಗಳೂರಿನ ಭ್ರಷ್ಟಾಚಾರ ನಿಗ್ರಹದಳದ ಡಿ.ವೈ.ಎಸ್.ಪಿ. ಕೆ.ಸಿ.ಪ್ರಕಾಶ್ ಹಾಗೂ ಇನ್ಸ್ಪೆಕ್ಟರ್ ಶ್ಯಾಮ್ ಸುಂದರ್ ಹಾಗೂ ಗುರುರಾಜ್ ಅವರ ತಂಡ ದಾಳಿ ನಡೆಸಿ ಆರೋಪಿಯನ್ನು ಜ.5ರಂದು ಬಂಧಿಸಿದ್ದರು.
ಆರೋಪಿ ರಫೀಕ್ ಇದೀಗ ಮಂಗಳೂರಿನ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದು, ಜಾಮೀನಿಗೆ ಅರ್ಜಿ ಸಲ್ಲಿಸಿದ್ದನು. ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಮಂಗಳೂರಿನ ಮೂರನೇ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಬಿ.ಬಿ.ಜಕಾತಿ ಅವರು, ಅಪರಾಧದ ಗಂಭೀರತೆಯನ್ನು ಪರಿಗಣಿಸಿ, ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದ್ದಾರೆ.
ಭ್ರಷ್ಟಾಚಾರ ನಿಗ್ರಹದಳದ ಪರ ವಕೀಲ ವಿಶೇಷ ಸರಕಾರಿ ಅಭಿಯೋಜಕ ಕೆ. ಎಸ್.ಎನ್. ರಾಜೇಶ್ ಆರೋಪಿಗಳ ಜಾಮೀನು ಅರ್ಜಿಗೆ ಪ್ರಬಲ ಆಕ್ಷೇಪ ವ್ಯಕ್ತಪಡಿಸಿದ್ದರು. ವಾದ ಪ್ರತಿವಾದ ಆಲಿಸಿದ್ದ ನ್ಯಾಯಾಧೀಶ ಬಿ.ಬಿ.ಜಕಾತಿ ಅವರು, ಆರೋಪಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದ್ದಾರೆ.
"ಭ್ರಷ್ಟಾಚಾರದಂತಹ ಗಂಭೀರ ಪ್ರಕರಣದಲ್ಲಿ ತನಿಖೆ ಸಂಪೂರ್ಣಗೊಳ್ಳುವ ಮೊದಲು ಆರೋಪಿಗೆ ಜಾಮೀನು ನೀಡಿದಲ್ಲಿ ಸಮಾಜಕ್ಕೆ ತಪ್ಪು ಸಂದೇಶ ರವಾನೆ"ಎಂದು ಭ್ರಷ್ಟಾಚಾರ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಬಿ.ಬಿ.ಜಕಾತಿ ತಮ್ಮ ಆದೇಶದಲ್ಲಿ ಉಲ್ಲೇಖಿಸಿದ್ದಾರೆ.
ಮಂಗಳೂರಿನ ಭ್ರಷ್ಟಾಚಾರ ನಿಗ್ರಹ ದಳದ ಪರ ವಿಶೇಷ ಸರಕಾರಿ ಅಭಿಯೋಜಕ ಹಾಗೂ ನ್ಯಾಯವಾದಿ ಕೆ.ಎಸ್.ಎನ್. ರಾಜೇಶ್ ವಾದಿಸಿದ್ದರು.