ಉಡುಪಿ, ಫೆ. 16 (DaijiworldNews/SM): ಜಿಲ್ಲೆಯಲ್ಲಿ ಯಾವುದೇ ವ್ಯಕ್ತಿ ಅಥವಾ ಸಂಸ್ಥೆ ಬಾಲ ಕಾರ್ಮಿಕರನ್ನು ನೇಮಿಸಿಕೊಳ್ಳುವುದು ಅಥವಾ ದುಡಿಸಿಕೊಳ್ಳುವುದು ಅಪರಾಧವಾಗಿದ್ದು, ಅಂತವರಿಗೆ 2 ವರ್ಷ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಎಚ್ಚರಿಕೆ ನೀಡಿದ್ದಾರೆ.

ಅವರು ಇಂದು ನಗರದ ಮಣಿಪಾಲ್ನ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕರ ತಿದ್ದುಪಡಿ ಕಾಯ್ದೆ ಕುರಿತ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ಹೆಚ್ಚಿನ ಜನ ಶಿಕ್ಷಣ ಹೊಂದಿ ಪ್ರಜ್ಞಾವಂತರಾಗಿದ್ದು, ಕಾನೂನಿನ ಅರಿವು ಹೊಂದಿ ಅದನ್ನು ಗೌರವಿಸಿ, ಪಾಲನೆ ಮಾಡುವಂತವರಾಗಿದ್ದಾರೆ. ಜಿಲ್ಲೆಯಲ್ಲಿ ಯಾವುದೇ ಬಾಲ ಕಾರ್ಮಿಕರನ್ನು ನಿಯೋಜಿಸಿಕೊಳ್ಳದೆ ಬಾಲ ಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿಸಬೇಕು. ಬಾಲ ಕಾರ್ಮಿಕರನ್ನಾಗಿ ನಿಯೋಜಿಸಿಕೊಂಡಲ್ಲಿ ಅಂತವರಿಗೆ ಆರು ತಿಂಗಳಿನಿಂದ ಎರಡು ವರ್ಷದವರೆಗೆ ಜೈಲು ಶಿಕ್ಷೆ ಅಥವಾ 20,000 ರೂಪಾಯಿಯಿಂದ 50,000 ರೂಪಾಯಿವರೆಗೆ ದಂಡ ವಿಧಿಸಲಾಗುವುದು ಎಂದರು.
ಹೊರ ಜಿಲ್ಲೆ ಹಾಗೂ ರಾಜ್ಯಗಳಿಂದ ವೃತ್ತಿಯನ್ನು ಅರಸಿ ಬರುವ ಕಾರ್ಮಿಕರು ತಮ್ಮ ಮಕ್ಕಳು ದುಡಿಮೆಗೆ ಹೋದಲ್ಲಿ ಹಣ ಗಳಿಸಬಹುದು ಎಂಬ ಮನೋಭಾವದಿಂದ ಸಣ್ಣ ಪುಟ್ಟ ಉದ್ಯೋಗಳಿಗೆ ಕಳುಹಿಸಲು ಮುಂದಾಗುತ್ತಾರೆ. ಇದಕ್ಕೆ ಕಡಿವಾಣ ಹಾಕಿ ಅವರುಗಳು ಶಾಲೆಗೆ ಹೋಗುವಂತೆ ಮಾಡಿ, ಶಿಕ್ಷಣವಂತರನ್ನಾಗಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.