ಮಂಗಳೂರು, ಮಾ12 (DaijiworldNews/MS): ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 2010 ರ ವಿಮಾನ ಅಪಘಾತಕ್ಕೆ ಸಂಬಂಧಿಸಿದಂತೆ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ, ಏರ್ ಇಂಡಿಯಾ ಮತ್ತು ಅಧಿಕಾರಿಗಳ ವಿರುದ್ಧ ಸಲ್ಲಿಸಿದ್ದ ಖಾಸಗಿ ದೂರು ಮತ್ತು ವಿಚಾರಣೆಯನ್ನು ಹೈಕೋರ್ಟ್ ರದ್ದುಪಡಿಸಿದೆ.

ಮಂಗಳೂರಿನ 2 ನೇ ಜೆಎಂಎಫ್ಸಿ ನ್ಯಾಯಾಲಯದ ಕ್ರಮವನ್ನುಪ್ರಶ್ನಿಸಿ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಅಧಿಕಾರಿ ಪೀಟರ್ ಅಬ್ರಹಾಂ, ಏರ್ ಇಂಡಿಯಾ ಅಧಿಕಾರಿ ಆನ್ಸಬರ್ಟ್ ಡಿಸೋಜಾ ಅವರು ಸಲ್ಲಿಸಿದ್ದ ಅರ್ಜಿಯಲ್ಲಿ ನ್ಯಾ| ಅಶೋಕ್ ಜಿ. ನಿಜಗಣ್ಣನವರ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ವಅರ್ಜಿದಾರರ ವಿರುದ್ಧ ಸಲ್ಲಿಸಿದ ಖಾಸಗಿ ದೂರನ್ನು ಮತ್ತು 2 ನೇ ಜೆಎಂಎಫ್ಸಿ ನ್ಯಾಯಾಲಯ ನಡೆಸುತ್ತಿದ್ದ ವಿಚಾರಣೆಯನ್ನು ರದ್ದುಗೊಳಿಸಿತು.
ಮೇ 25, 2010 ರಂದು ದುಬೈನಿಂದ ಮಂಗಳೂರಿಗೆ ಬಂದಿದ್ದ ಏರ್ ಇಂಡಿಯಾ ವಿಮಾನ ಅಪಘಾತಕ್ಕೀಡಾಗಿದ್ದು, 152 ಪ್ರಯಾಣಿಕರು ಸಾವನ್ನಪ್ಪಿದ್ದರು. ಈ ವಿಚಾರವಾಗಿ 2012ರ ಮಾ. 6ರಂದು ಮಂಗಳೂರು ಮೂಲದ ಫೌಂಡೇಷನ್ ಖಾಸಗಿ ದೂರು ದಾಖಲಿಸಿತ್ತು.ವಿಮಾನ ನಿಲ್ದಾಣವು ಐಸಿಎಒ ಮಾನದಂಡಗಳ ಪ್ರಕಾರ ಕಾರ್ಯನಿರ್ವಹಿಸಲು ಯೋಗ್ಯವಾಗಿರಲಿಲ್ಲ. ಆದರೂ ವೈಮಾನಿಕ ಚಟುವಟಿಕೆ ನಡೆಯುತ್ತಿತ್ತು. ಏರ್ ಇಂಡಿಯಾ ಪ್ರಾಧಿಕಾರ ಮತ್ತು ನಾಗರಿಕ ವಿಮಾನಯಾನ ನಿರ್ದೇಶನಾಲಯದ ಸಂಪೂರ್ಣ ನಿರ್ಲಕ್ಷ್ಯದಿಂದಾಗಿ ಈ ಘಟನೆ ಸಂಭವಿಸಿದೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು.