ಬಂಟ್ವಾಳ, ಮೇ 1 (DaijiworldNews/MS): ಇಲ್ಲಿನ ಬ್ರಹ್ಮರಕೋಟ್ಲು ವಳವೂರು ನಿವಾಸಿ ಮನೋಜ್ ಸಪಲ್ಯ(30) ಎಂಬ ಯುವಕನಿಗೆ ಚೂರಿಯಿಂದು ಇರಿದು ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಟ್ವಾಳ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಆರೋಪಿಗಳನ್ನು ಬಿ.ಸಿ.ರೋಡ್ ನಿವಾಸಿ ಇಮ್ರಾನ್ ಮತ್ತು ಆತನ ಸ್ನೇಹಿತ ಸಫ್ವಾನ್ ಎಂದು ಗುರುತಿಸಲಾಗಿದೆ.
ಎಪ್ರಿಲ್ 4ರಂದು ರಾತ್ರಿ ಮನೋಜ್ ತುಂಬೆಯಿಂದ ಬಿ.ಸಿ.ರೋಡ್ ಕಡೆಗೆ ಬೈಕಿನಲ್ಲಿ ಬರುತ್ತಿದ್ದ ವೇಳೆ ಇಬ್ಬರು ಅಪರಿಚಿತರು ಹೆಲ್ಮೆಟ್ ಧರಿಸಿ ಬೈಕಿನಲ್ಲಿ ಹಿಂಬಾಲಿಸಿಕೊಂಡು ಬರುತ್ತಿದ್ದು ಇದನ್ನು ಗಮನಿಸಿ ಅಜ್ಜಿಬೆಟ್ಟು ಕ್ರಾಸ್ ನಲ್ಲಿ ಬೈಕನ್ನು ತಿರುಗಿಸಿ ಅಂಗಡಿಯೊಂದರ ಮುಂಭಾಗ ನಿಲ್ಲಿಸಿದರು. ಈ ವೇಳೆ ದುಷ್ಕರ್ಮಿಗಳು ಚೂರಿಯಿಂದ ಇರಿದು ಪರಾರಿಯಾಗಿದ್ದಾರೆ ಎಂದು ದೂರು ನೀಡಿದ್ದರು.
ಇದಾದ ಬಳಿಕ ತನಿಖೆ ಯ ವೇಳೆ ಹಾದಿ ತಪ್ಪಿಸುವ ಸಲುವಾಗಿ ಸಾಮಾಜಿಕ ಜಾಲತಾಣದಲ್ಲಿ ಮನೋಜ್ ಅವರ ತೇಜೋವಧೆ ಮಾಡಿ ಇಲ್ಲಸಲ್ಲದ ಆರೋಪ ಮಾಡಿ ಪ್ರಕರಣದಲ್ಲಿ ಮನೋಜ್ ಅವರ ಅಣ್ಣನ ಕೈವಾಡವಿದೆ ಎಂಬ ಸುಳ್ಳು ಸುದ್ದಿ ಪ್ರಸಾರವಾಗಿತ್ತು.
ಇದನ್ನು ಗಂಭೀರವಾಗಿ ಪರಿಗಣಿಸಿದ ಇಲಾಖೆ ಚೂರಿ ಇರಿತ ಪ್ರಕರಣದ ತನಿಖೆಗೆ ಮೂರು ತಂಡಗಳನ್ನು ರಚಿಸಿ ತನಿಖೆ ನಡೆಸಿದ್ದರು. ಇನ್ನು ಚೂರಿ ಇರಿತಕ್ಕೆ ನಿಖರ ಕಾರಣ ತಿಳಿದುಬರಬೇಕಿದ್ದು, ಆರೋಪಿಗಳನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.