ಮಂಗಳೂರು, ಏ 18 (DaijiworldNews/HR): ಬಜ್ಪೆಯಲ್ಲಿರುವ ಮಂಗಳೂರು ವಿಶೇಷ ಆರ್ಥಿಕ ವಲಯದ ಮೀನಿನ ಫ್ಯಾಕ್ಟರಿಯೊಂದರಲ್ಲಿ ಭಾನುವಾರ ರಾತ್ರಿ ದುರಂತ ಸಂಭವಿಸಿದ ಸಂಭವಿಸಿದ ದುರಂತದಲ್ಲಿ ಮೃತರ ಸಂಖ್ಯೆ ಐದಕ್ಕೆ ಏರಿಕೆಯಾಗಿದ್ದು, ಪ್ರಕರಣದ ಸಂಬಂಧ ನಾಲ್ವರನ್ನು ವಶಕ್ಕೆ ಪಡೆದು ಕೇಸು ದಾಖಲಿಸಲಾಗಿದೆ.

ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿರುವ ಕಾರ್ಮಿಕರು


ಸಮೀರುಲ್ ಇಸ್ಲಾಂ, ಉಮರ್ ಫಾರೂಕ್ ಹಾಗೂ ನಿಝಾಮುದ್ದೀನ್ ಸಾಬ್ ಎಂಬವರು ಭಾನುವಾರ ರಾತ್ರಿ ಮೃತಪಟ್ಟಿದ್ದು, ಆಸ್ಪತ್ರೆಗೆ ಚಿಕಿತ್ಸೆ ಪಡೆಯುತ್ತಿದ್ದ ಮಿರಾಜುಲ್ ಇಸ್ಲಾಂ ಮತ್ತು ಶರಾಫತ್ ಆಲಿ ಎಂಬವರು ಇಂದು ಮುಂಜಾನೆ ಸಾವನ್ನಪ್ಪಿದ್ದಾರೆ.
ಇನ್ನು ಹಸನ್ ಅಲಿ, ಮುಹಮ್ಮದ್ ಕರೀಮುಲ್ಲಾ ಮತ್ತು ಹಫೀಝುಲ್ಲಾ ಎಂಬವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮೀನು ಸಂಸ್ಕರಣ ಫ್ಯಾಕ್ಟರಿಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಯಾವುದೇ ರಕ್ಷಣಾತ್ಮಕ ಉಪಕರಣಗಳನ್ನು ಒದಗಿಸದೇ ನಿರ್ಲಕ್ಷ ವಹಿಸಿದ ಬಗ್ಗೆ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಂಪನಿಯ ಪ್ರೊಡಕ್ಷನ್ ಮ್ಯಾನೇಜರ್ ರೂಬಿ ಜೋಸೆಫ್, ಏರಿಯಾ ಮ್ಯಾನೇಜರ್ ಕುಬೇರ್ ಗಾಡೆ ಮತ್ತು ಅಲ್ಲಿನ ಸೂಪರ್ವೈಸರ್ ಮೊಹಮ್ಮದ್ ಅನ್ವರ್ ಹಾಗೂ ಕಂಪನಿಯ ಕಾರ್ಮಿಕರ ಆಗುಹೋಗುಗಳನ್ನು ನೋಡಿಕೊಳ್ಳುತ್ತಿದ್ದ ಸ್ಥಳೀಯ ವ್ಯಕ್ತಿ ಫಾರೂಕ್ ಎಂಬವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.
ಇನ್ನು ಮೃತಪಟ್ಟವರ ಬಗ್ಗೆ ಅವರ ಸಂಬಂಧಿಕರಿಗೆ ಮಾಹಿತಿ ನೀಡಿದ್ದು, ಮೃತದೇಹಗಳನ್ನು ಮಂಗಳೂರಿನ ಎಜೆ ಆಸ್ಪತ್ರೆಯ ಶವಾಗಾರದಲ್ಲಿ ಮರಣೋತ್ತರ ಶವ ಪರೀಕ್ಷೆ ನಡೆಸಿ ಮೃತರ ವಾರಸುದಾರರಿಗೆ ಹಸ್ತಾಂತರಿಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.